ಕನಕಪುರ: ತಾಲೂಕಿನ ಅಧಿಕಾರಿಗಳು ಎಚ್ಚರ ಹಾಗೂ ತ್ವರಿತವಾಗಿ ನೀರು ಮತ್ತು ಜಾನುವಾರುಗಳ ಮೇವು ಬಗ್ಗೆ ಗಮನ ಹರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಾಲಕೃಷ್ಣ ತಿಳಿಸಿದರು.ತಾಲೂಕಿನ ಸಾತನೂರು ಹೋಬಳಿಯ ದಾಳಿಂಬ ಹಾಗೂ ಕಸಬಾ ಹೋಬಳಿಯ ಶಿವನಹಳ್ಳಿ ಗ್ರಾಮಗಳ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರಿಂದ ಬರದ ಮಾಹಿತಿ ಪಡೆದು ಮಾತನಾಡಿದ ಸಚಿವರು, ಮುಖ್ಯಮಂತ್ರಿ ಗಳ ಕ್ಷೇತ್ರವಾಗಿರುವ ಕನಕಪುರ ತಾಲೂಕನ್ನು ಇಡೀ ರಾಷ್ಟ್ರವೇ ಗಮನಿಸುತ್ತಿದೆ. ಅಧಿಕಾರಿಗಳು ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿಗೆ ಕೊರತೆಯಾಗದಂತೆ ಕ್ರಮ ವಹಿಸುವಂತೆ ಸೂಚಿಸಿದರು.

ಪ್ರಸ್ತಕ ಸಾಲಿನಲ್ಲಿ ಮುಂಗಾರು ಸಂಪೂರ್ಣ ವಿಫಲವಾಗಿದ್ದು, ಕೆರೆ-ಕಟ್ಟೆಗಳು ಬತ್ತಿಹೋಗಿ ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿಗೆ ತೊಂದರೆಯಾಗಿದೆ. ಸಕಾಲದಲ್ಲಿ ಮಳೆಯಿಲ್ಲದೆ ಬಿತ್ತಿದ ಎಳ್ಳು ಹಾಗೂ ಕಡಲೆ ಬೆಳೆಗಳು ಒಣಗಿವೆ. ಗ್ರಾಮಗಳ ಬಹಳಷ್ಟು ಕೊಳವೆ ಬಾವಿಗಳಲ್ಲಿ ಅಂತರ್ಜಲದ ಪ್ರಮಾಣ ಕುಸಿದಿದ್ದು ಜನರು ಕುಡಿಯುವ ನೀರಿಗೆ ಅಲೆದಾಡುವಂತಾಗಿದೆ ಎಂದು ಮಹಿಳೆಯರು ತಮ್ಮ ಅಳಲು ತೋಡಿಕೊಂಡರು.

ಗ್ರಾಮಸ್ಥರ ದೂರನ್ನು ಆಲಿಸಿದ ಸಚಿವರು, ಶಿವನಹಳ್ಳಿ ಪಿಡಿಒಗೆ ಖಾಸಗಿ ಟ್ಯಾಂಕರ್‌ಗಳಿಂದ ಕುಡಿಯುವ ನೀರು ಸರಬರಾಜು ಮಾಡಲು ಜರೂರು ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಬರಕ್ಕೆ ಸಂಬಂಧಿಸಿದಂತೆ ತಾಲೂಕಿನ ವಿವಿಧ ಇಲಾಖಾ ಅಧಿಕಾರಿಗಳು ಬರದ ಸಂಪೂರ್ಣ ಮಾಹಿತಿ ಸಿದ್ಧಪಡಿಸಿ ಕೂಡಲೇ ವರದಿ ಸಲ್ಲಿಸುವಂತೆ ತಿಳಿಸಿದರು.

ಈ ವೇಳೆ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್, ಜಿಪಂ ಸಿಇಒ ಅನ್ಮೋಲ್ ಜೈನ್, ಕನಕಪುರ ತಹಸೀಲ್ದಾರ್‌ ಸಂಜಯ್, ಇಒ ಅವಿನಾಶ್, ವಿಧಾನ ಪರಿಷತ್ ಸದಸ್ಯ ಎಸ್.ರವಿ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಕೆ.ರಾಜು, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಕೆ.ಎನ್.ದಿಲೀಪ್, ಮುಖಂಡರಾದ ಎಂ.ಡಿ.ವಿಜಯ್ ದೇವ್, ಸಾತನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜು, ಕನಕಪುರ ಟೌನ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುತ್ತುರಾಜ್, ಟಿಎಎಂಎಸ್ ಅಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ಚಿಕ್ಕಣ್ಣ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಹರೀಶ್ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.

ಕೆ ಕೆ ಪಿ ಸುದ್ದಿ :


ಕನಕಪುರ ತಾಲೂಕಿನ ಬರಪೀಡಿತ ಪ್ರದೇಶಗಳಿಗೆ ಸಚಿವ ಬಾಲಕೃಷ್ಣ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್, ಜಿಪಂ ಸಿಇಒ ಅನ್ಮೋಲ್ ಜೈನ್, ಕನಕಪುರ ತಹಸೀಲ್ದಾರ್‌ ಸಂಜಯ್, ಇಒ ಅವಿನಾಶ್ ಇತರರಿದ್ದರು.