ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂಖ್ಯೆ 343ರಲ್ಲಿ ಸೋಮವಾರ ಪೂಜೆ ಸಲ್ಲಿಸುವ ಮೂಲಕ ಅಧಿಕೃತವಾಗಿ ಕಚೇರಿ ಕಾರ್ಯಾರಂಭ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ದಾವಣಗೆರೆ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂಖ್ಯೆ 343ರಲ್ಲಿ ಸೋಮವಾರ ಪೂಜೆ ಸಲ್ಲಿಸುವ ಮೂಲಕ ಅಧಿಕೃತವಾಗಿ ಕಚೇರಿ ಕಾರ್ಯಾರಂಭ ಮಾಡಿದರು.

ಪೂಜಾ ಕಾರ್ಯಕ್ರಮ ಬಳಿಕ ಸಚಿವರು ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿ, ಸಚಿವರಾಗಿ ತಮ್ಮ ಜವಾಬ್ದಾರಿಯ ಮೊದಲ ಹೆಜ್ಜೆಯನ್ನು ಇಟ್ಟರು. ಈ ಸಂದರ್ಭ ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ, ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ್, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ ಸೇರಿದಂತೆ ವಿವಿಧ ನಾಯಕರು, ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿತೈಷಿಗಳು ಉಪಸ್ಥಿತರಿದ್ದು, ಸಚಿವರಿಗೆ ಹೂಗುಚ್ಛ ನೀಡಿ ಶುಭಾಶಯ ಕೋರಿದರು.

ಸಚಿವ ಕೆ.ಎಸ್. ಬಸವಂತಪ್ಪ ಅವರು ಅಧಿಕಾರದ ಅವಧಿಯಲ್ಲಿ ಜನಪರ ಆಡಳಿತಕ್ಕೆ ಒತ್ತು ನೀಡಿ, ತಮ್ಮ ಇಲಾಖೆಯ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ನಿರೀಕ್ಷೆ ಸಾರ್ವಜನಿಕರಲ್ಲಿ ಮೂಡಿದೆ. ವಿಧಾನಸೌಧದ 343ನೇ ಕೊಠಡಿಯಿಂದಲೇ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಚಿವರಿಗೆ ಶುಭ ಹಾರೈಸಿ, ಹೊಸ ಜವಾಬ್ದಾರಿಯಲ್ಲಿ ಯಶಸ್ಸು ದೊರೆಯಲಿ ಎಂದು ಹಾರೈಸಿದರು.

ಕಾರ್ಮಿಕ ಸಿಬ್ಬಂದಿ ಶುಭಾಶಯ: ನೂತನ ಸಚಿವ ಕೆ.ಎಸ್. ಬಸವಂತಪ್ಪ ವಿಧಾನಸೌಧದ ಕೊಠಡಿಯಲ್ಲಿ ಪೂಜೆ ಸಲ್ಲಿಸುವ ಮೂಲಕ ಕಚೇರಿ ಕಾರ್ಯಾರಂಭ ಮಾಡಿದ ಸಂದರ್ಭ ವಿಧಾನಸೌಧದ ಕಾರ್ಮಿಕ ಸಿಬ್ಬಂದಿ ಸಚಿವರಿಗೆ ಶುಭಾಶಯ ಕೋರಿದ್ದು ವಿಶೇಷವಾಗಿತ್ತು. ಸಚಿವ ಬಸವಂತಪ್ಪ ಅವರು ಸಿಬ್ಬಂದಿಯ ಆತ್ಮೀಯತೆ ಸ್ವೀಕರಿಸಿ, ಅವರೊಂದಿಗೆ ಕೆಲಕಾಲ ಮಾತನಾಡಿ, ಧನ್ಯವಾದ ಸಲ್ಲಿಸಿದರು. ಈ ಸಂದರ್ಭ ಶಾಸಕರು, ನಾಯಕರು, ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿತೈಷಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

- - -

-17ಕೆಡಿವಿಜಿ40: ನೂತನ ಸಚಿವ ಕೆ.ಎಸ್.ಬಸವಂತಪ್ಪ ಬೆಂಗಳೂರಿನ ವಿಧಾನಸೌಧದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ತಮ್ಮ ಕಚೇರಿ ಕಾರ್ಯಾರಂಭ ಮಾಡಿದರು. -17ಕೆಡಿವಿಜಿ41, 42, 43: ಬೆಂಗಳೂರಿನಲ್ಲಿ ನೂತನ ಸಚಿವ ಕೆ.ಎಸ್.ಬಸವಂತಪ್ಪನವರಿಗೆ ಅನೇಕ ಶಾಸಕರು, ಗಣ್ಯರು ಅಭಿನಂದಿಸಿದರು.