ಕನ್ನಡಪ್ರಭ ವಾರ್ತೆ ಮಂಡ್ಯ

ಸಾರಿಗೆ ಸಚಿವ ಭೈರತಿ ಸುರೇಶ್‌ರವರ ಹುಟ್ಟುಹಬ್ಬವನ್ನು ನಗರದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಸುರೇಶ್ ಅವರ ಅಭಿಮಾನಿಗಳು ಸೋಮವಾರ ಅರ್ಥಪೂರ್ಣವಾಗಿ ಆಚರಿಸಿದರು.

ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ಮಮತೆಯ ಮಡಿಲು ದಾಸೋಹ ಕೇಂದ್ರದಲ್ಲಿ ಬಡರೋಗಿಗಳಿಗೆ ಮತ್ತು ಅಲ್ಲಿನ ಸಾರ್ವಜನಿಕರಿಗೆ ಉಪಾಹಾರದ ವ್ಯವಸ್ಥೆ, ಆಸ್ಪತ್ರೆಯಲ್ಲಿರವ ಬಾಣಂತಿಯರಿಗೆ ಹಣ್ಣು-ಹಂಪಲುಗಳನ್ನು ವಿತರಣೆ ಮಾಡುವ ಮೂಲಕ ಆಚರಣೆ ಮಾಡಲಾಯಿತು.

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ಪಿ.ಪ್ರಕಾಶ್ ಮಾತನಾಡಿ, ಸಾರಿಗೆ ಸಚಿವ ಭೈರತಿ ಸುರೇಶ್ ಹೆಸರಿನಲ್ಲಿ ಪ್ರತಿ ವರ್ಷವೂ ಅವರ ಅಭಿಮಾನಿಗಳು ಬಡವರಿಗೆ ಸಹಾಯವನ್ನು ಮಾಡುವ ಮೂಲಕ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಾ ಬರುತ್ತಿದ್ದೇವೆ, ಭಗವಂತ ಅವರಿಗೆ ಆಯುಸ್ಸು ಆರೋಗ್ಯ ಭಾಗ್ಯ ಕೊಟ್ಟು ಕಾಪಾಡಲಿ ಎಂದು ಹಾರೈಸಿದರು.

ಮೂಡಾ ನಿರ್ದೇಶಕ ಮಹೇಶ್ ಮಾತನಾಡಿ, ಸುರೇಶ್ ಅವರ ಜನಪರ ಕೆಲಸಗಳು ನಮ್ಮೆಲ್ಲರಿಗೂ ಮಾದರಿಯಾಗಿದೆ. ಪ್ರತಿ ದಿನ ಅವರ ಮನೆಗೆ ಬರುವ ಸಾರ್ವಜನಿಕರಿಗೂ ಕೂಡ ಅನ್ನದಾಸೋಹ ಮಾಡುತ್ತಿರುವ ಸುರೇಶ್ ಅವರು ೨೦೨೮ರ ಚುನಾವಣೆಯಲ್ಲಿ ಈ ರಾಜ್ಯದ ಮುಖ್ಯಮಂತ್ರಿಯಾಗಬೇಕೆಂದು ನಮ್ಮೆಲ್ಲರ ಅಭಿಲಾಷೆಯಾಗಿದೆ ಎಂದರು.


ಕಾಂಗ್ರೆಸ್ ಮುಖಂಡ ಎನ್.ದೊಡ್ಡಯ್ಯ ಮಾತನಾಡಿ, ಭೈರತಿ ಸುರೇಶ್‌ರವರು ತಮ್ಮ ಇಲಾಖೆಯ ಜವಾಬ್ದಾರಿ ಹೊತ್ತ ನಂತರ ಶ್ರೀಸಾಮಾನ್ಯರಂತೆ ಸಾರಿಗೆ ಬಸ್‌ಗಳಲ್ಲಿ ಸಂಚರಿಸಿ ಜನಸಾಮಾನ್ಯರ ಕಷ್ಟಗಳನ್ನು ಆಲಿಸುವ ಮೂಲಕ ನಿಜವಾದ ಜನನಾಯಕ ಎಂದು ಸಾಬೀತುಪಡಿಸಿದ್ದಾರೆ. ಭೈರತಿ ಸುರೇಶ್ ಅವರು ಈ ರಾಜ್ಯದ ಮುಖ್ಯಮಂತ್ರಿಯಾಗಬೇಕೆಂಬುದು ನಮ್ಮೆಲ್ಲರ ಕನಸು ಎಂದರು.

ಕಾಂಗ್ರೆಸ್ ಮುಖಂಡರಾದ ಮೂಡಾ ಸದಸ್ಯೆ ಕಮಲ ರಾಜು, ಮಂಗಲ ಯೋಗೇಶ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಭೈರತಿ ಸುರೇಶ್ ಅವರ ಅಭಿಮಾನಿಗಳು ಭಾಗವಹಿಸಿದ್ದರು.