ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಮುಂಗಾರು ಮಳೆ ವೈಫಲ್ಯ, ತೀವ್ರ ಬರ ಪರಿಸ್ಥಿತಿಯಿಂದಾಗಿ ಬೆಳೆಗಳು ಒಣಗಿರುವ ಕುರಿತಂತೆ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಶಾಸಕ ಕೆ.ಎಂ.ಉದಯ್ ಅವರು ದೇವರಹಳ್ಳಿಯ ರೈತರ ಜಮೀನಿಗೆ ಭೇಟಿ ನೀಡಿ ಪರಿಶೀಲಿಸಿ ರೈತರ ಕಷ್ಟವನ್ನು ಆಲಿಸಿದರು.

ಗ್ರಾಮದ ಜಯಮ್ಮ ಬಸವೇಗೌಡರ 20 ಗುಂಟೆ ಜಮೀನಲ್ಲಿ ಕಬ್ಬಿನ ಬೆಲೆ ನೀರಿಲ್ಲದೆ ಸಂಪೂರ್ಣವಾಗಿ ಒಣಗಿ ಹಾನಿಯಾಗಿದ್ದನ್ನು ಅಧಿಕಾರಗಳ ಜೊತೆಗೂಡಿ ವೀಕ್ಷಿಸಿದ ಸಚಿವರು, ಮಳೆ ಕೊರತೆಯಿಂದ ರೈತರು ಲಕ್ಷಾಂತರ ರುಪಾಯಿ ಖರ್ಚು ಮಾಡಿ ಬೆಳೆದ ಬೆಳೆಗಳು ಕೈಗೆ ಸಿಗದೆ ಕಣ್ಣೀರು ಹಾಕುವಂತಾಗಿದೆ. ಸರ್ಕಾರದಿಂದ ಬರ ಪರಿಹಾರ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಲಾಗುತ್ತಿದೆ. ಯಾವುದೇ ರೈತರು ಆತಂಕ ಪಡಬಾರದು ಎಂದರು.ನೀರಿಲ್ಲದೆ ಕಟಾವಿಗೆ ಬಂದಿರುವ ಕಬ್ಬಿನ ಬೆಳೆ ಸಂಪೂರ್ಣ ಒಣಗಿದ್ದು, ಗಂಭೀರವಾಗಿ ಪರಿಗಣಿಸಿ ಕಬ್ಬನ್ನು ಯಾವುದೇ ವಿಳಂಬವಿಲ್ಲದೆ ತಕ್ಷಣ ಕಟಾವು ಮಾಡಿಸಿ ಹತ್ತಿರದ ಸಕ್ಕರೆ ಕಾರ್ಖಾನೆಗಳಿಗೆ ಕಳುಹಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು. ರೈತರಿಗೆ ಯಾವುದೇ ತೊಂದರೆಯಾಗದಂತೆ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಮಾತನಾಡಿ ಕಬ್ಬು ನುರಿಸುವಿಕೆ ತ್ವರಿತಗೊಳಿಸಿ ಎಂದು ಸೂಚಿಸಿದರು.

ಕಾರ್ಖಾನೆಗಳು ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಕಬ್ಬನ್ನು ಕೊಂಡುಕೊಳ್ಳುವುದ್ದನ್ನು ತಕ್ಷಣ ನಿಲ್ಲಿಸಿ ಸ್ಥಳೀಯ ರೈತರು ಬೆಳೆದಿರುವ ಕಬ್ಬನ್ನು ತೆಗದುಕೊಳ್ಳುವಂತೆ ಕೂಡಲೇ ಸಭೆ ನಡೆಸಿ ತಿಳಿಸಬೇಕು ಎಂದರು.

​ನಂತರ ಶಾಸಕ ಕೆ.ಎಂ.ಉದಯ್ ಮಾತನಾಡಿ, ಬರಪೀಡಿತ ಪ್ರದೇಶಗಳಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಮದ್ದೂರು ತಾಲೂಕಿನಾದ್ಯಂತ ​ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ನಿಖರವಾದ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.


ಬರ ಪರಿಸ್ಥಿತಿ ಸಮಯದಲ್ಲಿ ಸರ್ಕಾರ ರೈತರ ಬೆನ್ನಿಗೆ ನಿಲ್ಲಲಿದೆ. ಪರಿಹಾರ ಧನವನ್ನು ಶೀಘ್ರ ನೇರ ನಗದು ವರ್ಗಾವಣೆ ಮೂಲಕ ರೈತರಿಗೆ ಒದಗಿಸಲು ಕ್ರಮ ವಹಿಸಲಾಗುವುದು ಎಂದರು.

ಈ ವೇಳೆ ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್.ನಂದಿನಿ, ಜಿಲ್ಲಾ ಎಸ್ಪಿ ಡಾ.ಶೋಭಾರಾಣಿ, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ನೂರಾರು ರೈತರು ಉಪಸ್ಥಿತರಿದ್ದರು.