ಕನ್ನಡಪ್ರಭ ವಾರ್ತೆ ಬೆಂಗಳೂರು

ಸಚಿವರಿಂದ ರಾಜ್ಯದ ಬರ ಪರಿಸ್ಥಿತಿಯ ಅಧ್ಯಯನ ಮುಂದುವರಿದಿದ್ದು, ಸತತ 5ನೇ ದಿನವಾದ ಭಾನುವಾರವೂ ಸಚಿವರು ತಮ್ಮ ಉಸ್ತುವಾರಿ ವ್ಯಾಪ್ತಿಯ ಜಿಲ್ಲೆಗಳಿಗೆ ಭೇಟಿ ನೀಡಿ, ಬರ ಪರಿಸ್ಥಿತಿಯ ಅವಲೋಕನ ನಡೆಸಿದರು. ರೈತರ ಹೊಲಗಳಿಗೆ ಭೇಟಿ ನೀಡಿ, ಬರದಿಂದ ಹಾನಿಗೆ ಒಳಗಾದ ಬೆಳೆಗಳ ಪರಿಶೀಲನೆ ನಡೆಸಿದರು.

ಸಚಿವ ಬಸವರಾಜ ರಾಯರಡ್ಡಿ ಅವರು ಗದಗ ಜಿಲ್ಲೆಯ ನರಗುಂದ ತಾಲೂಕಿನ ಚಿಕ್ಕ ನರಗುಂದ, ಸಂಕದಾಳ ಗ್ರಾಮದ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಮಳೆಯ ಕೊರತೆಯಿಂದ ಬೆಳೆಗಳ ಮೇಲೆ ಉಂಟಾಗಿರುವ ಪರಿಣಾಮದ ಕುರಿತು ಅಧಿಕಾರಿಗಳು ಹಾಗೂ ರೈತರಿಂದ ಮಾಹಿತಿ ಪಡೆದುಕೊಂಡರು.

ಸಚಿವ ಪಿ.ಎಂ.ನರೇಂದ್ರಸ್ವಾಮಿಯವರು ಸಚಿವ ಚಲುವರಾಯಸ್ವಾಮಿರೊಂದಿಗೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ರಾಗಿಬೊಮ್ಮನಹಳ್ಳಿ, ಬಂಡೂರು ಗ್ರಾಮಗಳಲ್ಲಿ ಬರ ಪರಿಶೀಲನೆ ನಡೆಸಿದರು. ಸಚಿವ ಕೆ.ಎಸ್. ಬಸವಂತಪ್ಪ ಅವರು ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆನಗೋಡು ಹೋಬಳಿಯ ರುದ್ರನಕಟ್ಟೆ, ಅಗಸನಕಟ್ಟೆ, ಗುಡಾಳು ಹಾಗೂ ಗುಮ್ಮನೂರು ಗ್ರಾಮಗಳ ವಿವಿಧ ರೈತರ ಜಮೀನುಗಳಿಗೆ ಭೇಟಿ ನೀಡಿ, ಮಳೆಯ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯನ್ನು ಖುದ್ದಾಗಿ ಪರಿಶೀಲಿಸಿದರು.

ಬರ ಪರಿಸ್ಥಿತಿಯಿಂದ ರೈತರು ಎದುರಿಸುತ್ತಿರುವ ಸಂಕಷ್ಟದ ಕುರಿತು ಸಮಗ್ರ ವಾಸ್ತವ ವರದಿ ಸಿದ್ಧಪಡಿಸಿ, ತುರ್ತಾಗಿ ಸರ್ಕಾರದ ಗಮನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.


ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಡಾ.ಎಂ.ಬಿ.ಪಾಟೀಲ ಅವರು, ವಿಜಯಪುರ ತಾಲೂಕಿನ ಹಿಟ್ಟಿನಹಳ್ಳಿ, ಮದಭಾವಿ ಗ್ರಾಮಗಳಿಗೆ ಭೇಟಿ ನೀಡಿ ಬರ ಪರಿಶೀಲನೆ ನಡೆಸಿದರು.