ಸಾರಾಂಶ
ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಸಾಹೇ)ನಲ್ಲಿ ಇದೇ ಪ್ರಥಮ ಬಾರಿಗೆ ತುಮಕೂರಿನಲ್ಲಿ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷ ನೆಟ್ಬಾಲ್ ಚಾಂಪಿಯನ್ಶಿಪ್ ಪಂದ್ಯಾವಳಿಯನ್ನು ನಾಲ್ಕು ದಿನಗಳ ಕಾಲ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಗಿದೆ.
ಕನ್ನಡಪ್ರಭ ವಾರ್ತೆ, ತುಮಕೂರು
ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಸಾಹೇ)ನಲ್ಲಿ ಇದೇ ಪ್ರಥಮ ಬಾರಿಗೆ ತುಮಕೂರಿನಲ್ಲಿ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷ ನೆಟ್ಬಾಲ್ ಚಾಂಪಿಯನ್ಶಿಪ್ ಪಂದ್ಯಾವಳಿಯನ್ನು ನಾಲ್ಕು ದಿನಗಳ ಕಾಲ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಗಿದೆ.ಪಂದ್ಯಾವಳಿಯನ್ನು ಗೃಹ ಸಚಿವ ಹಾಗೂ ಸಾಹೇ ವಿವಿ ಕುಲಾಧಿಪತಿ ಡಾ ಜಿ ಪರಮೇಶ್ವರ ಅವರು ಧ್ವಜಾರೋಹಣ ನೆರವೆರಿಸುವುದರ ಮೂಲಕ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷ ನೆಟ್ಬಾಲ್ ಚಾಂಪಿಯನ್ಶಿಪ್ ಪಂದ್ಯಾವಳಿಗೆ ಚಾಲನೆ ನೀಡಿದರು.
ಮಧ್ಯಪ್ರದೇಶದ ಏಕಲವ್ಯ ವಿಶ್ವವಿದ್ಯಾಲಯ, ತುಮಕೂರು, ರಾಣಿ ಚೆನ್ನಮ್ಮ, ಬೆಂಗಳೂರು, ಕರ್ನಾಟಕ, ದಾವಣಗೆರೆ, ಮಂಗಳೂರು ವಿಶ್ವವಿದ್ಯಾಲಯ, ಕೇರಳದ ಮಹಾತ್ಮಗಾಂಧಿ ವಿಶ್ವವಿದ್ಯಾಲಯ, ಶಾತವಾಹನ ವಿಶ್ವವಿದ್ಯಾಲಯ, ಆಂಧ್ರದ ವಿಶ್ವವಿದ್ಯಾಲಯ, ರಾಜಸ್ಥಾನ, ಪುಣೆ, ಒಡಿಶಾ, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ರಾಜ್ಯಗಳ ವಿಶ್ವವಿದ್ಯಾಲಯಗಳು ಪಥ ಸಂಚಲನದ ಮೂಲಕ ಕಾರ್ಯಕ್ರಮಕ್ಕೆ ಮೆರುಗು ತಂದವು.ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷ ನೆಟ್ಬಾಲ್ ಚಾಂಪಿಯನ್ಶಿಪ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಗೃಹ ಸಚಿವರು ಹಾಗೂ ಸಾಹೇ ವಿವಿ ಕುಲಾಧಿಪತಿಗಳಾದ ಡಾ ಜಿ.ಪರಮೇಶ್ವರ, ಸಾಹೇ ವಿವಿಯಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟ ಆಯೋಜಿಸಲಾಗಿದ್ದು, ವಿವಿಧ ರಾಜ್ಯಗಳಿಂದ ಆಗಮಿಸಿರುವ ತಂಡಗಳಿಗೆ ಶುಭ ಕೋರಿದರು.
ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷ ನೆಟ್ಬಾಲ್ ಚಾಂಪಿಯನ್ಶಿಪ್ ಆಯೋಜಿಸಿರುವುದು ಸಂತಸದ ವಿಷಯ. ಪಂದ್ಯಾವಳಿಗೆ 53 ತಂಡಗಳು ಆಗಮಿಸಿವೆ. ಕ್ರೀಡಾ ಅಂದ ಮೇಲೆ ಗೆಲುವು ಸೋಲು ಸಹಜ. ಆದರೆ ಕ್ರೀಡೆಯಲ್ಲಿ ಭಾಗವಹಿಸುವುದು ಬಹಳ ಮುಖ್ಯ. ಮೊದಲ ನಾಲ್ಕು ಗೆದ್ದ ತಂಡಗಳಿಗೆ ಬಹುಮಾನ ನೀಡಲಾಗುವುದು ಎಂದರು.ಬಾಲ್ಯದಲ್ಲಿ ಆಟವಾಡಿದ ಆಟಗಳ ನೆನಪಾಗುತ್ತಿದೆ ಎಂದು ಅವರು ಅಂತಾರಾಜ್ಯ ಒಲಂಪಿಕ್ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದ ನೆನಪುಗಳನ್ನು ಮೆಲುಕು ಹಾಕಿದರು. ಜೊತೆಗೆ ಕ್ರೀಡೆ ಎನ್ನುವಂತಹದ್ದು ಎಲ್ಲರನ್ನು ಒಟ್ಟುಗೂಡಿಸುತ್ತದೆ, ಇದು ಐಕ್ಯತೆಯ ಸಂಕೇತವಾಗಿದೆ ಎಂದು ಎಲ್ಲಾ ಕ್ರೀಡಾ ಪಟುಗಳಿಗೂ ಶುಭ ಹಾರೈಸಿದರು.
ವೇದಿಕೆಯ ಕಾರ್ಯಕ್ರಮವನ್ನು ರಾಷ್ಟ್ರಗೀತೆ ಹಾಡುವುದರೊಂದಿಗೆ ಮುಕ್ತಾಯಗೊಳಿಸಿ, ಮೈದಾನದಲ್ಲಿ ಕ್ರೀಡೆಯನ್ನು ಆರಂಭಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿಯ ಸದಸ್ಯರಾದ ಕನ್ನಿಕಾ ಪರಮೇಶ್ವರಿ, ಎಸ್ಪಿ ಅಶೋಕ್, ಸಾಹೇ ವಿವಿಯ ಉಪ ಕುಲಪತಿ ಡಾ.ಕೆ ಬಿ ಲಿಂಗೇಗೌಡ, ಸಾಹೇ ವಿವಿಯ ಕುಲಾಧಿಪತಿಗಳ ಸಲಹೆಗಾರರಾದ ಡಾ ವಿವೇಕ್ ವೀರಯ್ಯ, ಸಾಹೇ ವಿವಿ ರಿಜಿಸ್ಟ್ರಾರ್ ಡಾ.ಎಂ.ಎಝೆಡ್ ಕುರಿಯನ್, ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಪ್ರಾಂಶುಪಾಲರಾದ ಡಾ. ಸಾಣೆಕೊಪ್ಪ, ಶ್ರೀ ಸಿದ್ಧಾರ್ಥ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಪ್ರವೀಣ್ ಬಿ ಕುಡ್ವ, ಎಸ್ಎಸ್ಐಆರ್ಎಂಎಸ್ ಪ್ರಾಂಶುಪಾಲರಾದ ಡಾ.ದಿವಾಕರ್, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ ಎಸ್. ರವಿಪ್ರಕಾಶ, ತುಮಕೂರಿನ ಜಿಲ್ಲಾ ಪಂಚಾಯತ್ನ ಸಿಇಒ ಪ್ರಭು, ಉಡುಪಿಯ ಸುಕುಮಾರ್, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಶಶಿಕುಮಾರ್ ಕೆ, ಸಾಹೇ ವಿಶ್ವ ವಿದ್ಯಾಲಯದ ಪರೀಕ್ಷಾ ನಿಯಂತ್ರಣ ಮಂಡಳಿಯ ಅಧ್ಯಕ್ಷ ಡಾ.ಗುರುಶಂಕರ್ ಸೇರಿದಂತೆ ಸಾಹೇ ವಿವಿಯಲ್ಲಿ ಬರುವ ಎಲ್ಲಾ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.