ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಿಎಂಗೆ ಸಚಿವ ಎಚ್ಕೆಪಿ ಪತ್ರ

| Published : Jun 22 2025, 01:19 AM IST

ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಿಎಂಗೆ ಸಚಿವ ಎಚ್ಕೆಪಿ ಪತ್ರ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತ್ವರಿತ, ತೀವ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾನೂನು, ಪ್ರವಾಸೋದ್ಯಮ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಮುಖ್ಯಮಂತ್ರಿಗಳಿಗೆ ಸುದೀರ್ಘ ಏಳು ಪುಟಗಳ ಪತ್ರ ಬರೆದಿದ್ದಾರೆ.

ಗದಗ: ರಾಜ್ಯದಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತ್ವರಿತ, ತೀವ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾನೂನು, ಪ್ರವಾಸೋದ್ಯಮ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಮುಖ್ಯಮಂತ್ರಿಗಳಿಗೆ ಸುದೀರ್ಘ ಏಳು ಪುಟಗಳ ಪತ್ರ ಬರೆದಿದ್ದಾರೆ. ಅಕ್ರಮ ಗಣಿಗಾರಿಕೆಯಿಂದ ರಾಜ್ಯದ ಬೊಕ್ಕಸಕ್ಕೆ ಉಂಟಾದ ಭಾರಿ ನಷ್ಟ ಮತ್ತು ಭವಿಷ್ಯದಲ್ಲಿ ಇಂತಹ ಕೃತ್ಯಗಳನ್ನು ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿವರವಾದ ಸಲಹೆಗಳನ್ನು ಪತ್ರದಲ್ಲಿ ನೀಡಿದ್ದಾರೆ.2007ರಿಂದ 2011ರ ಅವಧಿಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣಗಳನ್ನು ನಿರ್ದಿಷ್ಟವಾಗಿ ಪ್ರಸ್ತಾಪಿಸಿದ್ದು, 2006ರಿಂದ 2009ರ ನಡುವೆ ಬರೋಬ್ಬರಿ 12,891 ಅಕ್ರಮ ಗಣಿಗಾರಿಕೆ ಪ್ರಕರಣಗಳು ಬೆಳಕಿಗೆ ಬಂದಿದ್ದವು ಎಂದು ಉಲ್ಲೇಖಿಸಿದ್ದಾರೆ. ಈ ಹಿಂದೆ, ತಮ್ಮ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಂಪುಟ ಉಪ ಸಮಿತಿಯು ಅಕ್ರಮ ಗಣಿಗಾರಿಕೆಯಿಂದ ರಾಜ್ಯ ಸರ್ಕಾರಕ್ಕೆ ₹1 ಲಕ್ಷದ 50 ಸಾವಿರ ಕೋಟಿ ರುಪಾಯಿಗಳ ಬೃಹತ್ ನಷ್ಟ ಉಂಟಾಗಿದೆ ಎಂದು ಬಹಿರಂಗಪಡಿಸಿತ್ತು ಎಂಬುದನ್ನು ಅವರು ನೆನಪಿಸಿದ್ದಾರೆ.ನಷ್ಟ ವಸೂಲಾತಿ ಮತ್ತು ಆಸ್ತಿ ಮುಟ್ಟುಗೋಲು: ಅಕ್ರಮ ಗಣಿಗಾರಿಕೆಯಿಂದ ಉಂಟಾದ ನಷ್ಟವನ್ನು ವಸೂಲಿ ಮಾಡಲು ಮತ್ತು ಸಂಬಂಧಪಟ್ಟವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ವಿಶೇಷ ಆಯುಕ್ತರನ್ನು ನೇಮಿಸಬೇಕು. ಕ್ರಿಮಿನಲ್ ಲಾ ಅಮೆಂಡ್‌ಮೆಂಟ್ ಆರ್ಡಿನೆನ್ಸ್ ಆ್ಯಕ್ಟ್ ಅಡಿಯಲ್ಲಿ ವಸೂಲಾತಿ ಆಯುಕ್ತರ ನೇಮಕಕ್ಕೆ ಅವರು ಒತ್ತು ನೀಡಿದ್ದಾರೆ.ವಿಶೇಷ ತನಿಖಾ ತಂಡ ರಚನೆ: ಈವರೆಗೂ ತನಿಖೆಯಾಗದೆ ಉಳಿದಿರುವ ಅಕ್ರಮ ಗಣಿಗಾರಿಕೆ ಪ್ರಕರಣಗಳ ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.ಅಕ್ರಮ ಗಣಿಗಾರಿಕೆ ಪ್ರಕರಣಗಳ ಶೀಘ್ರ ಇತ್ಯರ್ಥ ಮತ್ತು ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವ ದೃಷ್ಟಿಯಿಂದ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ಬಗ್ಗೆಯೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.ಈ ಮೂರು ಪ್ರಮುಖ ಸಲಹೆಗಳನ್ನು ಒಳಗೊಂಡ ಈ ಪತ್ರವು ರಾಜ್ಯಾದ್ಯಂತ ತೀವ್ರ ಸಂಚಲನಕ್ಕೆ ಕಾರಣವಾಗಿದೆ.