ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷನಾಗುವ ಆಸೆಯಿದೆ - ಲೋಕೋಪಯೋಗಿ ಸಚಿವ ಜಾರಕಿಹೊಳಿ

| Published : Nov 30 2024, 12:51 AM IST / Updated: Nov 30 2024, 12:30 PM IST

ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷನಾಗುವ ಆಸೆಯಿದೆ - ಲೋಕೋಪಯೋಗಿ ಸಚಿವ ಜಾರಕಿಹೊಳಿ
Share this Article
  • FB
  • TW
  • Linkdin
  • Email

ಸಾರಾಂಶ

ನನಗೂ ಮುಖ್ಯಮಂತ್ರಿ, ಕೆಪಿಸಿಸಿ ರಾಜ್ಯಾಧ್ಯಕ್ಷ ಆಗಬೇಕೆಂಬ ಆಸೆ ಇದೆ. ಎಲ್ಲರಿಗೂ ಆಸೆ ಸಹಜ, ರಾಜ್ಯಾಧ್ಯಕ್ಷರ ಬದಲಾವಣೆ, ಮುಖ್ಯಮಂತ್ರಿಗಳ ಬದಲಾವಣೆ ಎಲ್ಲವನ್ನೂ ಹೈಕಮಾಂಡ ನಿರ್ಧಾರ ಮಾಡುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಶಿಗ್ಗಾಂವಿ: ನನಗೂ ಮುಖ್ಯಮಂತ್ರಿ, ಕೆಪಿಸಿಸಿ ರಾಜ್ಯಾಧ್ಯಕ್ಷ ಆಗಬೇಕೆಂಬ ಆಸೆ ಇದೆ. ಎಲ್ಲರಿಗೂ ಆಸೆ ಸಹಜ, ರಾಜ್ಯಾಧ್ಯಕ್ಷರ ಬದಲಾವಣೆ, ಮುಖ್ಯಮಂತ್ರಿಗಳ ಬದಲಾವಣೆ ಎಲ್ಲವನ್ನೂ ಹೈಕಮಾಂಡ ನಿರ್ಧಾರ ಮಾಡುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಉತ್ತಮ ಆಡಳಿತ ನಡೆಸುತ್ತಿದೆ. ಈ ಸರಕಾರದ ಪೂರ್ಣಾವಧಿವರೆಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರುತ್ತಾರೆ. ಅವರ ಮಂತ್ರಿ ಮಂಡಲದಲ್ಲಿ ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ. ಹಿಂದೆ ಸತೀಶ್​ ಜಾರಕಿಹೊಳಿ ಸಿಎಂ ಆಗ್ತಾರೆ ಅಂತ ಸುದ್ದಿ ಹರಿದಾಡಿತ್ತು. 

ಈಗ ಕೆಪಿಸಿಸಿ ಅಧ್ಯಕ್ಷ ಆಗ್ತಾರೆ ಅಂತ ಸುದ್ದಿ ಹರಿದಾಡುತ್ತಿದೆ. ಈ ವಿಚಾರವಾಗಿ ನಾನು ಯಾವುದೇ ಲಾಬಿನೂ ಮಾಡಿಲ್ಲ. ಒತ್ತಡವನ್ನೂ ಹಾಕಿಲ್ಲ. ಉಪ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿದ್ದೇವೆ, ಖುಷಿಯಿದೆ. ಮಂತ್ರಿಯಾಗಿದ್ದೇನೆ ತೃಪ್ತಿಯಿದೆ ಎಂದು ಹೇಳಿದರು.ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಂಬಂಧ ಅಂತಿಮವಾಗಿ ವರಿಷ್ಠರು ತೀರ್ಮಾನ ಮಾಡಬೇಕು. 

ಯಾರಿಗೆ ಕೊಡಬೇಕು? ಯಾಕೆ ಕೊಡಬೇಕು? ಅದರಿಂದ ಆಗುವ ಲಾಭ ಏನು ಎಂಬ ಬಗ್ಗೆ ಅವರು ಚರ್ಚೆ ಮಾಡಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.ಅಧಿಕಾರ ಹಂಚಿಕೆ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ಮಾತು ಕೇಳಿ ಬರುತ್ತಿರುವುದರ ಬಗ್ಗೆ ಮಾತನಾಡಿ, ಈ ಬಾರಿ ಆ ರೀತಿ ಆಗಿಲ್ಲ. ಈ ಬಾರಿ ಪೋರ್ಟ್‌ಪೋಲಿಯೋದಲ್ಲಿ ನಾವೇ ಇದ್ದೇವೆ. ಉತ್ತರ ಕರ್ನಾಟಕ ಹಾಗೂ ಹೈದರಾಬಾದ್​ ಕರ್ನಾಟಕಕ್ಕೆ ಒಳ್ಳೆಯ ಖಾತೆಗಳನ್ನೇ ಕೊಟ್ಟಿದಾರೆ ಎಂದು ತಿಳಿಸಿದರು.

ಕಾಂಗ್ರೆಸ್​ನಲ್ಲಿ ಬಣ ರಾಜಕೀಯದ ಬಗ್ಗೆ ಮಾತನಾಡಿ, ಬಣ ಬಡಿದಾಟ ಇದೆ ಎಂದು ನಾನು ಹೇಳುತ್ತಿದ್ದೇನೆ. ನಮ್ಮ ಪಕ್ಷದಲ್ಲೂ ಇದೆ, ಬೇರೆ ಪಕ್ಷದಲ್ಲೂ ಬಣ ಬಡಿದಾಟ ಇದೆ. ಬಣಗಳು ಇರುತ್ತವೆ, ಆದರೆ ಚುನಾವಣೆ ಬಂದಾಗ ಎಲ್ಲರೂ ಒಂದಾಗುತ್ತೇವೆ ಎಂದರು.

ಶಿಗ್ಗಾಂವಿ ಕ್ಷೇತ್ರವನ್ನು ಗೆಲ್ಲುವ ವಿಶ್ವಾಸ ಮೊದಲೇ ಇತ್ತು. ಲೋಕಸಭಾ ಚುನಾವಣೆಯ ನಂತರ ನಮ್ಮ ಟೀಮು ಈ ಕ್ಷೇತ್ರದಲ್ಲಿ ಕೆಲಸ ಮಾಡಿ ಅಹಿಂದ ಮತಗಳನ್ನು ಒಗ್ಗೂಡಿಸುವಲ್ಲಿ ಯಶಸ್ವಿಯಾಗಿದ್ದೇವೆ ಜೊತೆಗೆ ಇಲ್ಲಿನ ಕಾರ್ಯಕರ್ತರ ಶ್ರಮ ಬಹಳಷ್ಟು ಇರುವುದರಿಂದ ಪಕ್ಷ ಕ್ಷೇತ್ರವನ್ನು ಗೆಲ್ಲಲು ಸಹಾಯವಾಗಿದೆ. ಶಿಗ್ಗಾಂವಿಯಲ್ಲಿ ನಾವು ಬೊಮ್ಮಾಯಿ ಸೋಲಿಸಬೇಕು ಅಥವಾ ಬಿಜೆಪಿ ಸೋಲಿಸಬೇಕು ಎಂದು ಚುನಾವಣೆ ಮಾಡಲಿಲ್ಲ, ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷ ಗೆಲ್ಲುವ ನಿಟ್ಟಿನಲ್ಲಿ ಕೆಲಸ ಮಾಡಿದ್ದರಿಂದ ಜಯ ನಮ್ಮದಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ನೂತನ ಶಾಸಕ ಯಾಸೀರ್ ಖಾನ್ ಪಠಾಣ್, ಆನಂದಸ್ವಾಮಿ ಗಡ್ಡದೇವರಮಠ, ಸೋಮಣ್ಣ ಬೇವಿನಮರದ ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದರು.