ರೈಲ್ವೆ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆ ಕೈಬಿಟ್ಟಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕನ್ನಡಪರ ಹೋರಾಟಗಾರರು, ಪರೀಕ್ಷೆಯನ್ನು ಮುಂದೂಡಿ ಕನ್ನಡ ಭಾಷೆ ಪರೀಕ್ಷೆಗೆ ಆದ್ಯತೆ ನೀಡದಿದ್ದರೆ ರಾಜ್ಯದ ರೈಲು ನಿಲ್ದಾಣಗಳಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ರೈಲ್ವೆ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆ ಕೈಬಿಟ್ಟಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕನ್ನಡಪರ ಹೋರಾಟಗಾರರು, ಪರೀಕ್ಷೆಯನ್ನು ಮುಂದೂಡಿ ಕನ್ನಡ ಭಾಷೆ ಪರೀಕ್ಷೆಗೆ ಆದ್ಯತೆ ನೀಡದಿದ್ದರೆ ರಾಜ್ಯದ ರೈಲು ನಿಲ್ದಾಣಗಳಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ್ದಾರೆ. ಈ ನಡುವೆ ರೈಲ್ವೆ ಸಚಿವರ ಬಳಿಗೆ ನಿಯೋಗ ತೆಗೆದುಕೊಂಡು ಹೋಗುವಂತೆ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಮನವಿ ಮಾಡಲಾಗಿದೆ. ಸಚಿವರು ಸ್ಪಂದಿಸಿದ್ದಾರೆ ಎಂದು ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ.ಕನ್ನಡಪ್ರಭದಲ್ಲಿ ಭಾನುವಾರ ‘ರೈಲ್ವೆ ಬಡ್ತಿ ಪರೀಕ್ಷೇಲಿ ಮತ್ತೆ ಕನ್ನಡಿಗರಿಗೆ ದ್ರೋಹ’ ವರದಿ ಪ್ರಕಟಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ನಾರಾಯಣಗೌಡರು, ಕನ್ನಡಿಗರಿಗೆ ರೈಲ್ವೆಯಲ್ಲಿ ಆದ್ಯತೆ ನೀಡುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಬಳಿ ನಿಯೋಗ ತೆಗೆದುಕೊಂಡು ಹೋಗಲು ದಿನಾಂಕ ನಿಗದಿಪಡಿಸುವಂತೆ ಕೇಂದ್ರ ಸಚಿವ ಜೋಶಿ ಅವರಿಗೆ ದೂರವಾಣಿ ಮೂಲಕ ಮಾತನಾಡಲಾಗಿದೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ ಶೀಘ್ರ ದಿನಾಂಕ ನಿಗದಿಗೊಳಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ಈ ಹಿಂದೆ ಕಾವೇರಿ ಹೋರಾಟದ ವೇಳೆ ಕನ್ನಡಪರ ಸಂಘಟನೆಗಳ ಮುಖಂಡರೊಂದಿಗೆ ಕೇಂದ್ರ ನೀರಾವರಿ ಸಚಿವರೊಂದಿಗೆ ಚರ್ಚೆ ನಡೆಸಲು ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಈಗ ಕೇಂದ್ರ ರೈಲ್ವೆ ಸಚಿವರೊಂದಿಗೆ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ಕುರಿತು ಮನವರಿಕೆ ಮಾಡುವುದಕ್ಕಾಗಿಯೇ ಪ್ರತ್ಯೇಕ ನಿಯೋಗ ತಗೆದುಕೊಂಡು ಹೋಗಲು ನಿರ್ಧರಿಸಲಾಗಿದೆ ಎಂದಿದ್ದಾರೆ.ಕಳೆದ ಆರು ತಿಂಗಳಿಂದ ಕನ್ನಡದಲ್ಲಿಯೇ ಓದಿ ಪರೀಕ್ಷೆಗೆ ಸಿದ್ಧರಾಗಿದ್ದ ನೂರಾರು ಉದ್ಯೋಗ ಆಕಾಂಕ್ಷಿಗಳಿಗೆ ರೈಲ್ವೆ ಇಲಾಖೆ ಕನ್ನಡ ಭಾಷೆ ಕೈಬಿಟ್ಟು ಹಿಂದಿ, ಆಂಗ್ಲ ಭಾಷೆಯಲ್ಲಿ ಮಾತ್ರ ಪರೀಕ್ಷೆ ನಡೆಸುವುದಾಗಿ ಹೇಳಿರುವುದು ತೀವ್ರ ಅನ್ಯಾಯ. ಈ ಸಮಸ್ಯೆ ಪರಿಹಾರವಾಗುವ ವರೆಗೂ ಮಂಗಳವಾರ ನಡೆಯುವ ರೈಲ್ವೆ ಮುಂಬಡ್ತಿ ಪರೀಕ್ಷೆ ಮುಂದೂಡುವಂತೆ ಒತ್ತಾಯಿಸಿದ್ದಾರೆ.
---ಕೋಟ್
ಪದೇ ಪದೇ ಕನ್ನಡಿಗರಿಗೆ ಅನ್ಯಾಯ ಮಾಡುತ್ತಿರುವ ರೈಲ್ವೆ ಇಲಾಖೆ ನಡೆ ಖಂಡನೀಯ. ಮಲತಾಯಿ ಧೋರಣೆ ಅನುಸರಿಸುತ್ತಿರುವುದು ಸರಿಯಲ್ಲ. ಕೇಂದ್ರ ಸಚಿವ ವಿ.ಸೋಮಣ್ಣ ಅವರು ಈ ರೈಲ್ವೆ ಮುಂಬಡ್ತಿ ಪರೀಕ್ಷೆ ರದ್ದುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಇಲ್ಲದಿದ್ದರೆ ಎಲ್ಲ ರೈಲ್ವೆ ಪರೀಕ್ಷಾ ಕೇಂದ್ರ, ರಾಜ್ಯದ ಎಲ್ಲ ರೈಲು ನಿಲ್ದಾಣಗಳಿಗೆ ಮುತ್ತಿಗೆ ಹಾಕಲಾಗುವುದು.-ಟಿ.ಎ.ನಾರಾಯಣಗೌಡ, ಕರವೇ ರಾಜ್ಯಾಧ್ಯಕ್ಷ