ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತಂತ್ರಜ್ಞಾನದ ಸ್ಪರ್ಶ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಆರಂಭಿಸಲಾಗಿರುವ ವಿಜನ್ 90+ ಆನ್ಲೈನ್ ತರಬೇತಿ ಕಾರ್ಯಕ್ರಮಕ್ಕೆ ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿಜಯಾನಂದ ಕಾಶಪ್ಪನವರ ಶನಿವಾರ ಚಾಲನೆ ನೀಡಿದರು.

ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದ ನಂತರ ವಿಜನ್ 90+ ಆನ್ಲೈನ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸಹಯೋಗದಲ್ಲಿ ತಂತ್ರಜ್ಞಾನವನ್ನು ಶಿಕ್ಷಣದೊಂದಿಗೆ ಸಮರ್ಪಕವಾಗಿ ಸಂಯೋಜಿಸುವ ಮೂಲಕ ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವುದು ಕಾರ್ಯಕ್ರಮದ ಉದ್ದೇಶವಾಗಿದ್ದು, ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು.

ಜಿಪಂ ಸಿಇಒ ಗಜಾನನ ಬಾಲೆ ಮಾತನಾಡಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವ್ಯಾಪ್ತಿಯಲ್ಲಿರುವ ಒಟ್ಟು 120 ವಸತಿ ನಿಲಯಗಳ ಒಟ್ಟು 2521 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಹಾಗೂ ಜಿಲ್ಲೆಯ ವಿವಿಧ ಗ್ರಾಪಂ ವ್ಯಾಪ್ತಿಯಲ್ಲಿರುವ ಅರಿವು ಕೇಂದ್ರಗಳ ಮೂಲ ತರಬೇತಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ವಿದ್ಯಾರ್ಥಿಗಳ ಕಲಿಕೆಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ 40 ಪರಿಣಿತ ಶಿಕ್ಷಕರನ್ನು ತರಬೇತಿ ನೀಡಲು ನಿಯೋಜಿಸಲಾಗಿದೆ ಎಂದರು.

ಜಿಲ್ಲಾ ಸಂಪನ್ಮೂಲ ಕೇಂದ್ರದ ಮೂಲಕ ಆನ್ಲೈನ್ ತರಬೇತಿಗಳನ್ನು ನಡೆಸಲಾಗುತ್ತಿದ್ದು, ಪ್ರಮುಖವಾಗಿ ಗಣಿತ, ವಿಜ್ಞಾನ ಹಾಗೂ ಇಂಗ್ಲೀಷ ವಿಷಯಗಳ ಬಗ್ಗೆ ತರಬೇತಿ ನೀಡಲಾಗುತ್ತದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸುವುದರೊಂದಿಗೆ ವಿಷಯಗಳನ್ನು ಆಳವಾಗಿ ಅಥೈಸಿಕೊಳ್ಳಲು, ಪರೀಕ್ಷಾ ಸಿದ್ದತೆಯನ್ನು ಸುಗಮಗೊಳಿಸಲು ಹಾಗೂ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೂ ಅಗತ್ಯ ಶೈಕ್ಷಣಿಕ ಬೆಂಬಲ ಒದಗಿಸಲು ವಿಜನ್ 90+ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದರು. ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ವಿಧಾನ ಪರಿಷತ್ ಶಾಸಕರಾದ ಪಿ.ಎಚ್.ಪೂಜಾರ, ಹನಮಂತ ನಿರಾಣಿ, ಶಾಸಕ ಉಮೇಶ ಮೇಟಿ, ಬಿಟಿಡಿಎ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅನೀಲಕುಮಾರ ದಿಡ್ಡಿ, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಜಿ.ಪಂ ಉಪ ಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಮುಖ್ಯ ಯೋಜನಾ ನಿರ್ದೇಶಕ ಸಿದ್ದರಾಮೇಶ್ವರ ಉಕ್ಕಲಿ, ಯೋಜನಾ ನಿರ್ದೇಶಕ ಅಲ್ಲಮಪ್ರಭು ಅಲ್ಲಾಪೂರ ಸೇರಿದಂತೆ ಇತರರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳೊಂದಿಗೆ ಸಚಿವರ ಸಂವಾದವಿಜನ್ 90+ ಆನ್ಲೈನ್ ತರಬೇತಿಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ವಿದ್ಯಾರ್ಥಿಗಳೊಂದಿಗೆ ನೇರವಾಗಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯೋತ್ಸವ ಶುಭಾಶಯಗಳನ್ನು ಕೋರಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಲು ತರಬೇತಿ ಸಹಕಾರಿಯಾಗಲಿದ್ದು, ಆನ್ಲೈನ್ ತರಗತಿಗಳ ಮೂಲಕ ಗಣಿತ, ವಿಜ್ಞಾನ, ಹಾಗೂ ಇಂಗ್ಲೀಷ ವಿಷಯಗಳನ್ನು ಸುಲಭವಾಗಿ ಕಲಿಯಲು ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳು ತಿಳಿಸಿದರು. ವಿದ್ಯಾರ್ಥಿಗಳ ಅಭಿಪ್ರಾಯ ಆಲಿಸಿದ ಸಚಿವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಶ್ರದ್ದೆಯಿಂದ ಕಲಿತು ಉತ್ತಮ ಅಂಕಗಳನ್ನು ಗಳಿಸಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.