ಸಾರಾಂಶ
ಹಾವೇರಿ: ನಗರ ಹಸರೀಕರಣ, ರಸ್ತೆ ಬದಿ ಗಿಡ ನೆಡುವುದು, ನೆಡುತೋಪು ನಿರ್ಮಾಣ ಹಾಗೂ ಸಾರ್ವಜನಿಕರಿಗೆ ಸಸಿಗಳ ವಿತರಣೆ ಕಾರ್ಯವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅವರು ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.ಸಮೀಪದ ಕರ್ಜಗಿ ಅರಣ್ಯ ಇಲಾಖೆ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸಾಮಾಜಿಕ ಅರಣ್ಯ ಹಾಗೂ ಪರಿಸರ ಇಲಾಖೆ ಪರಾಮರ್ಶನಾ ಸಭೆ ನಡೆಸಿದ ಅವರು, ಕಳೆದ ಸಾಲಿಗೆ ಜಿಲ್ಲೆಗೆ ನೀಡಿದ ಗುರಿ ಸಾಧನೆಯಾಗಿಲ್ಲ. ಒಟ್ಟಾರೆ ಅರಣ್ಯ ಇಲಾಖೆ ಕಾರ್ಯವೈಖರಿ ಅತೃಪ್ತಿದಾಯಕವಾಗಿದೆ ಎಂದರು.ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆ ಐದು ಲಕ್ಷ ಸಸಿಗಳನ್ನು ನೀಡಲಾಗುವುದು. ಅವುಗಳನ್ನು ಪ್ಲಾಂಟೇಷನ್ ಮಾಡಿಸಿ, ಈ ವರ್ಷದ ಗುರಿ ಸಾಧನೆ ಮಾಡಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಶಾಸಕರು ಹಾಗೂ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮಾತನಾಡಿ, ಅರಣ್ಯ ಇಲಾಖೆ ಅಧಿಕಾರಿಗಳು ಅರಣ್ಯ ಇಲಾಖೆ ಪ್ರದೇಶವನ್ನು ಸರಿಯಾಗಿ ಪರಿಶೀಲಿಸಿ ಹದ್ದುಬಸ್ತು ಮಾಡಿಕೊಳ್ಳಬೇಕು. ಆದರೆ, ವಿನಾಕಾರಣ ಸಾರ್ವಜನಿಕರಿಗೆ ತೊಂದರೆ ಕೊಡಬಾರದು ಎಂದು ಸೂಚನೆ ನೀಡಿದರು.ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳೀಯ ಶಾಸಕರ ಗಮನಕ್ಕೆ ತರದೆ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆ ಕಾರ್ಯಗಳ ಕುರಿತು ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತಂದು ಕೆಲಸ ಮಾಡಬೇಕು ಎಂದು ಸಚಿವರು ಸೂಚಿಸಿದರು.ವನಮಹೋತ್ಸವಕ್ಕೆ ಚಾಲನೆ: ಇದೇ ಸಂದರ್ಭದಲ್ಲಿ ಕರ್ಜಗಿ ಅರಣ್ಯ ಇಲಾಖೆ ಕಚೇರಿ ಆವರಣದಲ್ಲಿ ಸಸಿ ನೆಡುವ ಮೂಲಕ ಸಚಿವರು ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಸಾಮಾಜಿಕ ಅರಣ್ಯ ಇಲಾಖೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ವಲಯ ಅರಣ್ಯಾಧಿಕಾರಿಗಳು ಇತರರು ಇದ್ದರು.