ಸಾರಾಂಶ
ರೈತರು ಅಕಾಲಿಕ ಮತ್ತು ಅತಿಯಾದ ಮಳೆಯಿಂದ ಆಗುವ ನಷ್ಟದಿಂದ ಪರಿಹಾರ ಪಡೆಯಲು ಬೆಳೆ ಸಮೀಕ್ಷೆ ಹಾಗೂ ಬೆಳೆ ವಿಮೆ ಮಾಡಿಸಬೇಕು. ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಬೆಳೆ ಆ್ಯಪ್ ಹಾಗೂ ಬೆಳೆ ವಿಮೆ ಕುರಿತು ವ್ಯಾಪಕ ಪ್ರಚಾರ ಮಾಡುವ ಮೂಲಕ ರೈತರಲ್ಲಿ ಜಾಗೃತಿ ಮೂಡಿಸಬೇಕು.
ಧಾರವಾಡ:
ತಾಲೂಕಿನ ಅಮ್ಮಿನಬಾವಿ ಹೋಬಳಿಯ ಗ್ರಾಮಗಳಿಗೆ ಮಂಗಳವಾರ ಭೇಟಿ ನೀಡಿದ ಸಚಿವ ಸಂತೋಷ ಲಾಡ್, ಮಳೆ ಹಾನಿ ಕುರಿತು ಪರಿಶೀಲಿಸಿದರು.ರೈತರೊಂದಿಗೆ ಮಾತನಾಡಿ, ಬೆಳೆ ಹಾನಿ ಕುರಿತು ಪ್ರತಿ ರೈತರ ಜಮೀನುಗಳನ್ನು ನಿಖರವಾಗಿ ಸಮೀಕ್ಷೆ ಮಾಡಿ, ದಾಖಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸರ್ಕಾರಕ್ಕೆ ಜಿಲ್ಲೆಯ ಬೆಳೆ ಹಾನಿ ಕುರಿತು ವಿಶೇಷ ವರದಿ ಸಲ್ಲಿಸಿ, ಪರಿಹಾರ ಪಡೆಯಲು ಕ್ರಮವಹಿಸಲಾಗುವುದು ಎಂದರು.
ರೈತರು ಅಕಾಲಿಕ ಮತ್ತು ಅತಿಯಾದ ಮಳೆಯಿಂದ ಆಗುವ ನಷ್ಟದಿಂದ ಪರಿಹಾರ ಪಡೆಯಲು ಬೆಳೆ ಸಮೀಕ್ಷೆ ಹಾಗೂ ಬೆಳೆ ವಿಮೆ ಮಾಡಿಸಬೇಕು. ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಬೆಳೆ ಆ್ಯಪ್ ಹಾಗೂ ಬೆಳೆ ವಿಮೆ ಕುರಿತು ವ್ಯಾಪಕ ಪ್ರಚಾರ ಮಾಡುವ ಮೂಲಕ ರೈತರಲ್ಲಿ ಜಾಗೃತಿ ಮೂಡಿಸಬೇಕು. ಈ ಕುರಿತು ಜಾಗೃತಿ ಅಭಿಯಾನ ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.ನಿರಂತರ ಮಳೆಯಿಂದಾಗಿ ತೀವ್ರ ಹಾನಿಗೆ ಒಳಗಾಗಿರುವ ಅಮ್ಮಿನಭಾವಿಯ ಮಡಿವಾಳಪ್ಪ ಭೋವಿ ಮನೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸಚಿವರು, ಮನೆ ಹಾನಿ ಕುರಿತು ಭೋವಿ ಕುಟುಂಬದಿಂದ ಮಾಹಿತಿ ಪಡೆದರು. ನಿಯಮಾನುಸಾರ ಅಧಿಕಾರಿಗಳು ಪರಿಹಾರ ವಿತರಿಸುವ ಬಗ್ಗೆ ಕ್ರಮ ಜರುಗಿಸುತ್ತಾರೆ ಎಂದು ಹೇಳಿದರು. ತಹಸೀಲ್ದಾರ್ ಡಿ.ಎಚ್. ಹೂಗಾರ ಮಳೆಯಿಂದಾಗಿ ಗ್ರಾಮದಲ್ಲಿ ಒಟ್ಟು 14 ಮನೆಗಳು ಹಾನಿಯಾಗಿವೆ ಎಂದು ತಿಳಿಸಿದರು.ಅಕಾಲಿಕ ಮಳೆಯಿಂದಾಗಿ ಕೊಯ್ಲಿಗೆ ಬಂದಿದ್ದ ಅಮ್ಮಿನಭಾವಿ ಗ್ರಾಮದ ರೈತ ಬಸಪ್ಪ ರಸಾಳೆ ಅವರ ಈರುಳ್ಳಿ ತೋಟಕ್ಕೆ ಭೇಟಿ ನೀಡಿದ ಸಚಿವರು ಪರಿಶೀಲಿಸಿದರು. ಈ ವೇಳೆ ರೈತ ಬಸಪ್ಪ ಮಾತನಾಡಿ, ತಮ್ಮ ಪಾಲಿಗೆ ಇರುವ ಎರಡು ಎಕರೆ ಜಮೀನುದಲ್ಲಿ ಮಳೆ ಆಶ್ರಿತ ಬೆಳೆಯಾಗಿ ಈರುಳ್ಳಿ ಬೆಳೆದಿದ್ದೆನೆ. ಕೊಯ್ಲಿಗೆ ಬಂದ ಸಮಯದಲ್ಲಿ ಮಳೆಯಿಂದಾಗಿ ಭೂಮಿಯಲ್ಲಿಯೇ ಈರುಳ್ಳಿ ಕೊಳೆಯುತ್ತಿದೆ. ಇದರಿಂದ ನಷ್ಟವಾಗಿದ್ದು, ಪರಿಹಾರ ದೊರಕಿಸಿಕೊಡುವಂತೆ ಸಚಿವರಲ್ಲಿ ಮನವಿ ಮಾಡಿದರು.
ಗ್ರಾಮದ ರೈತ ಮಹಿಳೆ ಫಕ್ಕಿರವ್ವ ಯಡಳ್ಳಿ ತಮ್ಮ ಎರಡು ಎಕರೆ ಜಮೀನುದಲ್ಲಿ ಬೆಳೆದಿದ್ದ ಹತ್ತಿ ಬೆಳೆ ಕೊಯ್ಲಿಗೆ ಬಂದಿದ್ದು, ಮಳೆಯಿಂದಾಗಿ ಗಿಡದಲ್ಲಿಯೇ ಹತ್ತಿ ಹಾಳಾಗಿದೆ. ಮುಂದಿನ ಬಿತ್ತನೆಗಾಗಿ ಸಹಾಯ ಮಾಡುವಂತೆ ಸಚಿವರಲ್ಲಿ ವಿನಂತಿಸಿದರು. ಜಿಲ್ಲಾಧಿಕಾರಿ ದಿವ್ಯಪ್ರಭು ಸೇರಿದಂತೆ ಕೃಷಿ ಇಲಾಖೆ ಅಧಿಕಾರಿಗಳಿದ್ದರು.