ಮದ್ದೂರು:

ಮಳೆ ಕೊರತೆಯಿಂದಾಗಿ ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ತಾಲೂಕಿನ ಕುದುರಗುಂಡಿ ಗ್ರಾಮಕ್ಕೆ ಭೇಟಿ ನೀಡಿ ನೀರಿಲ್ಲದೆ ಒಣಗಿದ ಕಬ್ಬಿನ ಗದ್ದೆಯನ್ನು ವೀಕ್ಷಿಸಿದರು.

ಮುಂಗಾರು ಮಳೆಯ ಕೊರತೆ ಹಾಗೂ ನೀರಿನ ಅಭಾವದಿಂದ ಕಬ್ಬಿನ ಬೆಳೆ ಒಣಗಿ ರೈತರು ಎದುರಿಸುತ್ತಿರುವ ಸಂಕಷ್ಟವನ್ನು ಸಚಿವರು ಸ್ಥಳದಲ್ಲೇ ಪರಿಶೀಲಿಸಿದರು. ಈ ವೇಳೆ ರೈತರು ಮಳೆ ಕೊರತೆ, ನೀರಿನ ಅಭಾವದಿಂದ ಕಬ್ಬಿನ ಬೆಳೆ ಒಣಗಿ ಉಂಟಾಗಿರುವ ನಷ್ಟ ಹಾಗೂ ತಮ್ಮ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು.

ರೈತರ ಸಮಸ್ಯೆಗಳನ್ನು ಆಲಿಸಿದ ಸಚಿವರು, ಬೆಳೆಗಳ ವಾಸ್ತವಿಕ ಸ್ಥಿತಿಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಅನಾವೃಷ್ಟಿಯಿಂದ ಬೆಳೆ ಹಾನಿ ಪ್ರದೇಶಗಳನ್ನು ಗುರುತಿಸಿ ಸರ್ಕಾರದ ನಿರ್ದೇಶನದಂತೆ ಜಂಟಿ ಸಮೀಕ್ಷೆ ನಡೆಸಿ ಗ್ರೌಂಡ್ ಟ್ರೂಥಿಂಗ್ ಪ್ರಕ್ರಿಯೆಯ ಮೂಲಕ ವಾಸ್ತವಿಕ ಬೆಳೆ ಹಾನಿ ವರದಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.


ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರ ಹಿತದೃಷ್ಟಿಯಿಂದ ಸರ್ಕಾರದ ಮಾರ್ಗಸೂಚಿಗಳಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಬೆಳೆ ಹಾನಿ ವಾಸ್ತವಿಕ ಮಾಹಿತಿ ಆದರಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಸಚಿವರು ತಿಳಿಸಿದರು.

ಈ ವೇಳೆ ಶಾಸಕ ಕೆ.ಎಂ.ಉದಯ್, ಡೀಸಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್.ನಂದಿನಿ, ಜಂಟಿ ಕೃಷಿ ನಿರ್ದೇಶಕ ಜಯಸ್ವಾಮಿ, ಉಪ ಕೃಷಿ ನಿರ್ದೇಶಕಿ ಕೆ.ಮಾಲತಿ, ತಾಲೂಕು ಸಹಾಯಕ ಕೃಷಿ ಅಧಿಕಾರಿ ಎಚ್.ಜಿ.ಪ್ರತಿಭಾ, ಕೃಷಿ ಅಧಿಕಾರಿಗಳಾದ ಭವಾನಿ, ಕರುಣ, ದಯಾನಂದ, ಗಿರೀಶ ಇದ್ದರು.