ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಬಿ. ನಾಗೇಂದ್ರ ಅವರು ಸಚಿವ ಸ್ಥಾನದಲ್ಲಿ ಮುಂದುವರಿಯಬಾರದು ಎಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕ, ಯುವ ಮೋರ್ಚಾ, ಒಬಿಸಿ ಮೋರ್ಚಾ ಹಾಗೂ ಎಸ್ಸಿ ಮೋರ್ಚಾ ವತಿಯಿಂದ ಮಂಗಳವಾರ ಎರಡನೇ ದಿನವೂ ಪ್ರತಿಭಟನೆ ಮುಂದುವರಿದಿದೆ..
ಹೊಸಪೇಟೆ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಬಿ. ನಾಗೇಂದ್ರ ಅವರು ಸಚಿವ ಸ್ಥಾನದಲ್ಲಿ ಮುಂದುವರಿಯಬಾರದು ಎಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕ, ಯುವ ಮೋರ್ಚಾ, ಒಬಿಸಿ ಮೋರ್ಚಾ ಹಾಗೂ ಎಸ್ಸಿ ಮೋರ್ಚಾ ವತಿಯಿಂದ ಮಂಗಳವಾರ ಎರಡನೇ ದಿನವೂ ಪ್ರತಿಭಟನೆ ಮುಂದುವರಿದಿದೆ..
ತಾಲೂಕು ಕಚೇರಿ ಮುಂಭಾಗದಲ್ಲಿ ನಡೆದ ಧರಣಿಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಎಸ್.ಟಿ. ನಿಗಮದ ಹಣದ ದುರುಪಯೋಗದ ಆರೋಪಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅಲ್ಲದೆ, ನೈತಿಕ ಹೊಣೆ ಹೊತ್ತು ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ಸಂಜೀವ ರೆಡ್ಡಿ ಮಾತನಾಡಿ, ಭ್ರಷ್ಟಾಚಾರದ ಬಗ್ಗೆ ಮಾತಾಡಿದ ಕಾಂಗ್ರೆಸ್ ಹಿರಿಯ ನಾಯಕ ಕೆ.ಎನ್. ರಾಜಣ್ಣ ಅವರ ಸಚಿವ ಸ್ಥಾನ ಕಿತ್ತುಕೊಳ್ಳಲಾಗಿದೆ. ಅದೇ ಸಮಾಜದ ಬಡವರ ಕೋಟಿ ಕೋಟಿ ಹಣ ಲೂಟಿ ಮಾಡಿದ ನಾಗೇಂದ್ರ ಅವರಿಗೆ ಮತ್ತೊಂದು ಬಾರಿ ಸಚಿವ ಸ್ಥಾನ ನೀಡಿದ್ದು, ಸರ್ಕಾರಕ್ಕೆ ನಾಚಿಕೆ ಆಗುವುದಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಹಳ್ಳಿ ಹಳ್ಳಿಯಲ್ಲೂ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಯುವ ಮೋರ್ಚಾ ಅಧ್ಯಕ್ಷ ಕಿಚಿಡಿ ಕೊಟ್ರೇಶ್ ಮಾತನಾಡಿ, ನಿಗಮದ ಹಣ ದುರುಪಯೋಗದ ಆರೋಪ ಗಂಭೀರವಾಗಿದ್ದು, ಪ್ರಕರಣದ ಸಂಪೂರ್ಣ ಸತ್ಯವನ್ನು ಜನತೆಯ ಮುಂದಿಡಬೇಕು ಎಂದು ಆಗ್ರಹಿಸಿದರು. ಆರೋಪದ ಹಿನ್ನೆಲೆಯಲ್ಲಿ ಸಚಿವರು ತಮ್ಮ ಸ್ಥಾನದಲ್ಲಿ ಮುಂದುವರಿಯುವುದು ಸರಿಯಲ್ಲ. ಸರ್ಕಾರವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪಾರದರ್ಶಕ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.ಎಸ್ಸಿ ಮೋರ್ಚಾ ಅಧ್ಯಕ್ಷ ಆರ್.ಮಂಜುನಾಥ, ಒಬಿಸಿ ಮೋರ್ಚಾ ಅಧ್ಯಕ್ಷ ಸಿ.ದ್ಯಾಮಣ್ಣ ಮಾತನಾಡಿ, ಸಮಾಜದ ಅಭಿವೃದ್ಧಿಗಾಗಿ ಬಡ ಜನರಿಗೆ ಮೀಸಲಿದ್ದ ಅನುದಾನವನ್ನು ಸ್ವಾರ್ಥಕ್ಕೆ ಬಳಸಿಕೊಂಡು ಸಮಾಜಕ್ಕೆ ಅನ್ಯಾಯ ಎಸಗಿದ್ದೀರಿ. ಕೂಡಲೇ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಸಂದೀಪ್ ಸಿಂಗ್, ಪ್ರಧಾನ ಕಾರ್ಯದರ್ಶಿಗಳಾದ ಎಸ್. ಕೃಷ್ಣನಾಯ್ಕ್, ಕೆ.ಎಸ್. ರಾಘವೇಂದ್ರ, ಮುಖಂಡರಾದ ಬಲ್ಲಾಹುಣಸಿ ರಾಮಣ್ಣ, ಬಿ. ಸುಭಾಷ್ ಚಂದ್ರ, ವೀರೇಶ್ವರ ಸ್ವಾಮಿ, ಈ.ಟಿ. ಲಿಂಗರಾಜ, ಎ.ಜಿ. ಮಂಜುನಾಥ, ಕೆ.ಎಚ್.ಎಂ. ಸಚಿನ್, ಸಂಗಮೇಶ್ ಕಡೆಮನಿ, ಮಜ್ಗಿ ನಾಗರಾಜ್, ಆರ್.ಟಿ. ನಾಗರಾಜ್, ಎಸ್.ದುರುಗೇಶ್, ಹಾಲೇಶ್ ನಾಯ್ಕ್, ಮೇಟಿ ಶಂಕರ್, ಮಧುರ ಚನ್ನಶಾಸ್ತ್ರಿ, ನಟರಾಜ್, ನಂದಿ ವಿಕ್ರಮ್, ಸಂಪತ್ ಮೂರ್ತಿ, ರವಿಕಿರಣ್, ಸೂರಿ ಬಂಗಾರು, ಹನುಮನಾಯ್ಕ್, ಶ್ರೀಧರ್, ಬಿ.ಶಂಕರ್, ಕಲ್ಲೇಶ್ ಪಾಟೀಲ ಇತರರು ಇದ್ದರು.