ಸಾರಾಂಶ
ಬೆಂಗಳೂರು : ಕರ್ನಾಟಕದಲ್ಲಿ ವ್ಯಾಪಾರ, ವ್ಯವಹಾರ ಮಾಡುತ್ತಿರುವವರು ಶೇಕಡ 60 ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಹೈಕೋರ್ಟ್ ನೀಡಿರುವ ಅಭಿಪ್ರಾಯ ಐತಿಹಾಸಿಕವಾದದ್ದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.
ಸೋಮವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ''''''''ಕರ್ನಾಟಕ ಕಲಾಶ್ರೀ'''''''' ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆ ಮಾಡಬೇಕೆಂಬುದನ್ನು ಪ್ರಶ್ನಿಸಿ ಕೆಲ ವಾಣಿಜ್ಯ ಸಂಸ್ಥೆಗಳು ಕೋರ್ಟ್ ಮೆಟ್ಟಿಲೇರಿದ್ದವು. ಆದರೆ ನ್ಯಾಯಾಲಯ ನೀವು ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿ ಪ್ರದರ್ಶಿಸಬೇಕು ಎಂದು ಹೇಳಿರುವುದು ನಿಜಕ್ಕೂ ಶ್ಲಾಘನೀಯ. ಕನ್ನಡ ಭಾಷೆ ನೆಲ ಜಲ, ಸಂಸ್ಕೃತಿ, ಆಚಾರ - ವಿಚಾರ, ಸಂರಕ್ಷಣೆಯ ವಿಚಾರದಲ್ಲಿ ಸರ್ಕಾರ ವಿಶೇಷ ಕಾಳಜಿ ಹೊಂದಿದೆ ಎಂದು ತಿಳಿಸಿದರು.
ಮಾಸಾಶನ ಮೊತ್ತ ಹೆಚ್ಚಳ: ಮುಂದಿನ ವರ್ಷದಿಂದ ಕಲಾವಿದರಿಗೆ ನೀಡಲಾಗುವ ಮಾಶಾಸನದ ಮೊತ್ತವನ್ನ 3 ಸಾವಿರಕ್ಕೆ ಹೆಚ್ಚಿಸಲಾಗುತ್ತದೆ. ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅನುದಾನ ನೀಡಲು ಯಾವುದೇ ಹಣಕಾಸಿನ ಕೊರತೆ ಇಲ್ಲ. ಪ್ರತಿಯೊಂದು ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೂ ಚಟುವಟಿಕೆಗಳನ್ನು ನಡೆಸುವ ಸಲುವಾಗಿ ಒಂದು ಕೋಟಿಯವರೆಗೂ ಅನುದಾನವನ್ನು ಒದಗಿಸಲಾಗುತ್ತಿದೆ. ಕಾರ್ಯಕ್ರಮದ ಕುರಿತು ಪ್ರಸ್ತಾವನೆ ಸಲ್ಲಿಸಿದರೆ, ಅದಕ್ಕೆ ಬೇಕಾದ ಅಗತ್ಯದ ಅನುದಾನ ನೀಡಲಾಗುತ್ತಿದೆ. ಈ ಮೂಲಕ ಕಲೆ ಮತ್ತು ಕಲಾವಿದರನ್ನು ಪ್ರೋತ್ಸಾಹಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ. ಧರಣಿದೇವಿ ಮಾಲಗತ್ತಿ, ಸಂಗೀತ - ನೃತ್ಯ ಅಕಾಡೆಮಿ ಅಧ್ಯಕ್ಷ ಶುಭಾ ಧನಂಜಯ್ ಉಪಸ್ಥಿತರಿದ್ದರು.