ಸಾರಾಂಶ
ಪರಿಶಿಷ್ಟ ಜಾತಿ, ಪಂಗಡದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ಬಿಇ, ಎಂಬಿಬಿಎಸ್, ಪಿಎಚ್ಡಿವರೆಗೆ ಗುಣಮಟ್ಟದ ಉಚಿತ ಶಿಕ್ಷಣ ನೀಡಬಹುದಿತ್ತು, ಲಕ್ಷಾಂತರ ಎಸ್ಸಿ, ಎಸ್ಟಿ ಕುಟುಂಬಗಳಿಗೆ ಸ್ವಂತ ಮನೆ ಕಟ್ಟಿಸಿಕೊಡಬಹುದಿತ್ತು, ಭೂರಹಿತ ಎಸ್ಸಿ, ಎಸ್ಟಿ ನಿರುದ್ಯೋಗಿ ಯುವಜನತೆಗೆ ಸ್ವಯಂ ಉದ್ಯೋಗ ಒದಗಿಸಬಹುದಿತ್ತು.
ಕನ್ನಡಪ್ರಭ ವಾರ್ತೆ ಮಂಡ್ಯ
ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ ಮೀಸಲಿಟ್ಟಿದ್ದ ಹಣವನ್ನು ಆ ಸಮಾಜಗಳಿಗೆ ಬಳಸದೇ ದುರ್ಬಳಕೆ ಮಾಡಿಕೊಂಡಿರುವ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರು ಸೂಚನೆ ನೀಡಿ ಆ ಸಮುದಾಯದವರಿಗೆ ಅನುದಾನ ಸಿಗುವಂತೆ ಮಾಡಬೇಕು ಎಂದು ಆಗ್ರಹಿಸಿ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪರಿಶಿಷ್ಟ ಜಾತಿ, ಪಂಗಡದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ಬಿಇ, ಎಂಬಿಬಿಎಸ್, ಪಿಎಚ್ಡಿವರೆಗೆ ಗುಣಮಟ್ಟದ ಉಚಿತ ಶಿಕ್ಷಣ ನೀಡಬಹುದಿತ್ತು, ಲಕ್ಷಾಂತರ ಎಸ್ಸಿ, ಎಸ್ಟಿ ಕುಟುಂಬಗಳಿಗೆ ಸ್ವಂತ ಮನೆ ಕಟ್ಟಿಸಿಕೊಡಬಹುದಿತ್ತು, ಭೂರಹಿತ ಎಸ್ಸಿ, ಎಸ್ಟಿ ನಿರುದ್ಯೋಗಿ ಯುವಜನತೆಗೆ ಸ್ವಯಂ ಉದ್ಯೋಗ ಒದಗಿಸಬಹುದಿತ್ತು. ಆದರೆ, ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ರದ್ದು ಮಾಡುವ ಮೂಲಕ ಮೋಸ ಮಾಡಿದೆ ಎಂದು ಕಿಡಿಕಾರಿದರು.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ಬಹುಜನ ಸಮಾಜ ಪಾರ್ಟಿ ಕೈಗೆತ್ತಿಕೊಂಡು ಸರ್ಕಾರದ ಗಮನ ಸೆಳೆಯಲು ಆ.೧೮ ರವರೆಗೂ ರಾಜ್ಯದಾದ್ಯಂತ ಜನಜಾಗೃತಿ ಆಂದೋಲನವನ್ನು ನಡೆಸಲು ನಿರ್ಣಯಿಸಲಾಗಿದೆ. ಈಗಲಾದರೂ ನಿಲ್ಲಿಸಿರುವ ಯೋಜನೆಗಳು ಮುಂದುವರಿಸದಿದ್ದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಿಎಸ್ಪಿ ಮುಖಂಡರಾದ ಸಿ.ಎಸ್.ಶಿವಶಂಕರ್, ಮಹದೇವ, ಚಲುವರಾಜು, ಕೆ.ಶಿವಕುಮಾರ್, ದಲಿತ ಸಂಘರ್ಷ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ವೆಂಕಟಗಿರಿಯಯ್ಯ, ಮೈಸೂರು ವಿಭಾಗೀಯ ಸಂಚಾಲಕ ಅನಿಲ್ಕುಮಾರ್ ಕೆರಗೋಡು ಭಾಗವಹಿಸಿದ್ದರು.