ಸಾರಾಂಶ
ಕನ್ನಡಪ್ರಭ ವಾರ್ತೆ ಕಮಲನಗರ
ತಾಲೂಕಿನ ಸಾವಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ದಿಢೀರ್ ಭೇಟಿದ ಶಾಸಕ ಪ್ರಭು ಚವ್ಹಾಣ್ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು.ಈ ವೇಳೆ ಶಾಲಾ ತರಗತಿ ಕೋಣೆಗಳಲ್ಲಿ ತೆರಳಿ ಮಕ್ಕಳ ಸಂಖ್ಯೆ ಹಾಗೂ ಪಠ್ಯ ಚಟುವಟಿಕೆಗಳ ಬಗ್ಗೆ ವಿವರಣೆ ಪಡೆದರು. ತರಗತಿ ಕೋಣೆಗಳಲ್ಲಿ ಅತ್ಯಲ್ಪ ಸಂಖ್ಯೆಯ ಮಕ್ಕಳಿರುವುದನ್ನು ಕಂಡು ಶಾಲೆಯ ಮುಖ್ಯಗುರುಗಳ ವಿರುದ್ಧ ಆಕ್ರೋಶ ಹೊರ ಹಾಕಿದರು.
ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಕಲ್ಪಿಸಬೇಕೆಂಬ ಉದ್ದೇಶದಿಂದ ಒಳ್ಳೆಯ ಕಟ್ಟಡವನ್ನು ನಿರ್ಮಿಸಿ ಅವಶ್ಯಕ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಆದರೂ ಮಕ್ಕಳು ಕಡಿಮೆ ಸಂಖ್ಯೆಯಲ್ಲಿರುವುದನ್ನು ನೋಡಿ ತೀವ್ರ ಬೇಸರವಾಗುತ್ತಿದೆ. ಮುಖ್ಯಗುರುಗಳು ಈ ಕುರಿತು ಗಮನ ಹರಿಸಬೇಕು. ಇಲ್ಲವಾದಲ್ಲಿ ಶಾಲೆ ಮುಚ್ಚುವ ಆತಂಕ ಎದುರಾಗುತ್ತದೆ ಎಂದು ಎಚ್ಚರಿಸಿದರು.ಶಿಕ್ಷಕರು ಮನೆ ಮನೆಗೆ ತೆರಳಿ ಮಕ್ಕಳನ್ನು ಶಾಲೆಗೆ ಕರೆ ತರಲು ಪ್ರಯತ್ನಿಸಬೇಕು ಎಂದು ತಿಳಿಸಿದರು.
ಶಾಲೆಯ ಮುಖ್ಯಗುರುಗಳು ಗ್ರಾಮಸ್ಥರೊಂದಿಗೆ ಸರಿಯಾಗಿ ವ್ಯವಹರಿಸುವುದಿಲ್ಲ. ಸರಿಯಾದ ಮಾಹಿತಿ ನೀಡುವುದಿಲ್ಲ. ಏನು ಕೇಳಿದರೂ ಹಾರಿಕೆ ಉತ್ತರ ಕೊಡುತ್ತಾರೆಂದು ಗ್ರಾಮಸ್ಥರು ಮುಖ್ಯಗುರುಗಳ ಬಗ್ಗೆ ಶಾಸಕರಿಗೆ ತಿಳಿಸಿದರು.ಈ ಕುರಿತು ಮಾತನಾಡಿದ ಶಾಸಕರು ತಮ್ಮ ವರ್ತನೆಯನ್ನು ಸರಿಪಡಿಸಿಕೊಂಡು ಗ್ರಾಮಸ್ಥರೊಂದಿಗೆ ಅನೋನ್ಯವಾಗುವುದರ ಜೊತೆಗೆ, ಕಲಿಕೆಯ ಕಡೆಗೆ ಹೆಚ್ಚಿನ ಗಮನ ಹರಿಸುವಂತೆ ಮುಖ್ಯಗುರುಗಳಿಗೆ ತಿಳಿಸಿದರು.
ಈ ವೇಳೆ ಹೆಚ್ಚುವರಿ ತರಗತಿ ಕೋಣೆ ನಿರ್ಮಿಸಿಕೊಡಬೇಕೆಂದು ಕೋರಿದ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕರು, ಶಾಲೆಯಲ್ಲಿ ಮಕ್ಕಳ ಹೆಚ್ಚಿಸಿದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾವುದು ಎಂದು ಹೇಳಿದರು.ಮುಖಂಡರಾದ ಶಿವಾಜಿರಾವ್ ಪಾಟೀಲ್ ಮುಂಗನಾಳ, ರಾಮಶೆಟ್ಟಿ ಪನ್ನಾಳೆ ಸೇರಿ ಗ್ರಾಮದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
*ಅಂಗನವಾಡಿಗೆ ಭೇಟಿ:ಸಾವಳಿ ಶಾಲೆಯ ಆವರಣದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಶಾಸಕರು, ಮಕ್ಕಳ ಸಂಖ್ಯೆ, ಹಾಜರಾತಿ, ಊಟದ ವ್ಯವಸ್ಥೆಯನ್ನು ಗಮನಿಸಿದರು. ಇಲ್ಲಿಯು ಮಕ್ಕಳ ಸಂಖ್ಯೆ ಕಡಿಮೆಯಿರುವುದಕ್ಕೆ ಸ್ಥಳದಲ್ಲಿದ್ದ ಅಂಗನವಾಡಿ ಸಿಬ್ಬಂದಿಯ ವಿರುದ್ಧ ಕಿಡಿಕಾರಿದರು.
ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರಿಗೆ ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ವಿತರಿಸುವಂತೆ ತಿಳಿಸಿದ ಅವರು, ಕಳಪೆ ಮಟ್ಟದ್ದಾಗಿದ್ದರೆ ಹಿಂದುರಿಗಿಸಿ ಸಂಬಂಧಪಟ್ಟವರ ಗಮನಕ್ಕೆ ತರಬೇಕು. ಕಳಪೆ ಆಹಾರದಿಂದ ಮಕ್ಕಳಿಗೆ ತೊಂದರೆಯಾದಲ್ಲಿ ಯಾವುದೇ ಕಾರಣಕ್ಕೂ ಸುಮ್ಮನಿರುವುದಿಲ್ಲವೆಂದು ಎಚ್ಚರಿಸಿದರು.
ಬಿಜೆಪಿ ಸದಸ್ಯತ್ವ ಅಭಿಯಾನ: ಶಾಸಕ ಚವ್ಹಾಣ್ ಸಭೆ
ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ಶಾಸಕ ಪ್ರಭು ಚವ್ಹಾಣ್ ಅವರು ಶುಕ್ರವಾರ ಕಮಲನಗರ ತಾಲೂಕಿನ ಠಾಣಾಕುಶನೂರ, ಕಮಲನಗರ ಹಾಗೂ ಬೆಳಕುಣಿ ಗ್ರಾಮಗಳಲ್ಲಿ ಸಂಚರಿಸಿ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಹಾಗೂ ಬೂತ್ ಪ್ರಮುಖರ ಸಭೆ ನಡೆಸಿದರು.ದೇಶಾದ್ಯಂತ ಬಿಜೆಪಿ ಸದಸ್ಯತಾ ಅಭಿಯಾನ ವೇಗವಾಗಿ ನಡೆಯುತ್ತಿದೆ. ದೇಶದಲ್ಲಿ ಒಟ್ಟು 10 ಕೋಟಿ ಸದಸ್ಯರನ್ನು ಮಾಡುವ ಗುರಿ ಹೊಂದಲಾಗಿದೆ. ಅದರಂತೆ ಎಲ್ಲ ನಾಯಕರು ಕೆಲಸ ಮಾಡುತ್ತಿದ್ದಾರೆ. ನಮ್ಮ ಕ್ಷೇತ್ರದಿಂದ 1.20 ಲಕ್ಷ ಸದಸ್ಯರ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಎಲ್ಲ ಕಾರ್ಯಕರ್ತರು ಸಮರ್ಪಣಾ ಭಾವನೆಯಿಂದ ಕೆಲಸ ಮಾಡುವಂತೆ ತಿಳಿಸಿದರು.
ಇದೊಂದು ಪಕ್ಷದ ಮತ್ತು ದೇಶದ ಹಿತದೃಷ್ಟಿಯಿಂದ ಮಾಡಬೇಕಾದ ಕೆಲಸವಾಗಿದ್ದು, ಯಾರೊಬ್ಬರೂ ತಾತ್ಸಾರ ಭಾವನೆಯಿಂದ ನೋಡುವುದು ಬೇಡ. ಮನೆ-ಮನೆಗೆ ಭೇಟಿ ನೀಡಿ ಸದಸ್ಯತ್ವ ಅಭಿಯಾನ ನಡೆಸಬೇಕು ಎಂದು ತಿಳಿಸಿದರು.ಈ ವೇಳೆ ಮಂಡಲ ಅಧ್ಯಕ್ಷರಾದ ರಾಮಶೆಟ್ಟಿ ಪನ್ನಾಳೆ ಅವರು ಬಿಜೆಪಿ ಸದಸ್ಯತಾ ಅಭಿಯಾನ ಎಂದರೇನು? ಮೊಬೈಲ್ನಲ್ಲಿ ನೋಂದಾಯಿಸುವುದು ಹೇಗೆ?, ಸದಸ್ಯತ್ವ ಪ್ರಮಾಣ ಪತ್ರ ಪಡೆಯುವುದು ಹೇಗೆ? ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ಪ್ರಮುಖರು ಮತ್ತು ಕಾರ್ಯಕರ್ತರ ಜವಾಬ್ದಾರಿಗಳೇನು ಎಂಬುದರ ಕುರಿತು ವಿವರಣೆ ನೀಡಿದರು.
ಮುಖಂಡರಾದ ಶಿವಾಜಿರಾವ ಪಾಟೀಲ ಮುಂಗನಾಳ ಸೇರಿದಂತೆ ಪಕ್ಷದ ಪ್ರಮುಖರು, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ಮಟ್ಟದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.