ಕನ್ನಡಪ್ರಭ ವಾರ್ತೆ ಮಳವಳ್ಳಿ
ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟ್ಟಣದಲ್ಲಿ ಸಾರ್ವಜನಿಕರಿಗೆ ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು.ಅನಂತ್ ರಾಂ ವೃತ್ತದ ಬಳಿ ನೂರಾರು ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು ಕಾಂಗ್ರೆಸ್ ಬಾವುಟ ಹಿಡಿದು ಪಿ.ಎಂ.ನರೇಂದ್ರಸ್ವಾಮಿ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ನಾಯಕರ ಪರ ಘೋಷಣೆ ಕೂಗಿ, ಪಟಾಕಿ ಸಿಡಿಸಿ ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು.
ಬ್ಲಾಕ್ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿರುವ ಪಿ.ಎಂ.ನರೇಂದ್ರಸ್ವಾಮಿ ಅವರಿಗೆ ಸಚಿವ ಸ್ಥಾನ ಸಿಕ್ಕಿರುವುದು ಅವರ ಪಕ್ಷ ನಿಷ್ಠೆಗೆ ಕೊಟ್ಟ ಗೌರವವಾಗಿದೆ ಎಂದರು.ಸರ್ಕಾರದಿಂದ ಸಾವಿರಾರು ಕೋಟಿ ವಿಶೇಷ ಅನುದಾನ ತಂದು ಶಿಕ್ಷಣ, ಆರೋಗ್ಯ, ನೀರಾವರಿ ಸೇರಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಾದರಿ ಕ್ಷೇತ್ರವನ್ನಾಗಿ ಮಾಡಿದ್ದರು. ಪ್ರಸ್ತುತ ಸಚಿವ ಸಂಪುಟದಲ್ಲಿ ಪಿ.ಎಂ ನರೇಂದ್ರಸ್ವಾಮಿ ಅವರಿಗೆ ಸಚಿವ ಸ್ಥಾನ ಸಿಕ್ಕಿರುವುದು ಕ್ಷೇತ್ರಕ್ಕೆ ಮತ್ತಷ್ಟು ಅಭಿವೃದ್ಧಿಗೆ ಶಕ್ತಿ ಬಂದಂತಾಗಿದೆ ಎಂದು ಹೇಳಿದರು.
ಮನ್ಮುಲ್ ನಿರ್ದೇಶಕ ಆರ್.ಎನ್.ವಿಶ್ವಾಸ್ ಮಾತನಾಡಿ, ಶೈಕ್ಷಣಿಕ ಕ್ರಾಂತಿಗೆ ಮುಂದಾಗಿರುವ ನಮ್ಮ ನಾಯಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಸ್ಥಾನ ಸಿಕ್ಕಿರುವುದು ಖುಷಿ ತಂದಿದೆ. ತಾಳ್ಮೆಯಿಂದ ಇದ್ದರೆ ಏನೂ ಬೇಕಾದರೂ ಪಡೆಯಬಹುದು ಎನ್ನುವುದಕ್ಕೆ ಪಿ.ಎಂ.ನರೇಂದ್ರಸ್ವಾಮಿ ಅವರಿಗೆ ಸಚಿವ ಸ್ಥಾನ ಸಿಕ್ಕಿರುವುದೇ ಸಾಕ್ಷಿಯಾಗಿದೆ ಎಂದರು.
ಟಿಎಪಿಸಿಎಂಎಸ್ ನಿರ್ದೇಶಕ ಕೆ.ಜೆ.ದೇವರಾಜು ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗೆ ಸದಾ ಶ್ರಮಿಸುತ್ತಿರುವ ನಮ್ಮ ನಾಯಕರಿಗೆ ಸಚಿವ ಸ್ಥಾನ ನೀಡಿ ನಾಯಕತ್ವಕ್ಕೆ ಮತ್ತಷ್ಟು ಬಲ ನೀಡಿದ ಕಾಂಗ್ರೆಸ್ ಹೈಕಮಾಂಡ್ಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಈ ವೇಳೆ ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ಲಿಂಗರಾಜು, ಮುಖಂಡರಾದ ದೊಡ್ಡಯ್ಯ, ಗಂಗರಾಜೇ ಅರಸು, ಸಿ.ಮಾಧು, ಮುಟ್ಟನಹಳ್ಳಿ ಅಂಬರೀಶ್, ದಿಲೀಪ್ ಕುಮಾರ್, ಸಿ.ವೇದಮೂರ್ತಿ, ಬಿ.ಮಹದೇವು, ಶ್ರೀಕಾಂತ್, ಜಗದೀಶ್, ಡಿ.ಎಂ.ಸುಂದರ್, ಶಿವಕುಮಾರ್, ಚಿಕ್ಕಸ್ವಾಮಿ, ಚೌಡಪ್ಪ, ಜೆಲ್ಲಿ ಚನ್ನಪ್ಪ, ಎಂ.ಡಿ.ಸಂತೋಷ್, ರವಿ ಸೇರಿ ಇತರರು ಇದ್ದರು.