ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಶಾಸಕ ರಮೇಶ್ ಬಂಡಿಸಿದ್ದೇಗೌಡರಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ವೀಕ್ಷಕರನ್ನು ಪಕ್ಷದ ಕಾರ್ಯಕರ್ತರು, ಶಾಸಕರ ಬೆಂಬಲಿಗರು ತರಾಟೆ ತೆಗೆದುಕೊಂಡ ಘಟನೆ ಪಟ್ಟಣದಲ್ಲಿ ನಡೆಯಿತು.ಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ನೇಮಕ ಸಂಬಂಧ ಪಕ್ಷದ ವೀಕ್ಷಕರು ಆಗಮಿಸಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಸಭೆ ನಡೆಸಿ ಮಾತನಾಡುತ್ತಿದ್ದ ವೇಳೆ ಕಾರ್ಯಕರ್ತರು ಹಾಗೂ ಶಾಸಕರ ಬೆಂಬಲಿಗರು ವೀಕ್ಷಕರನ್ನು ತರಾಟೆ ತೆಗೆದುಕೊಂಡಿರು.
ವೀಕ್ಷಕರಾಗಿ ದೆಹಲಿಯಿಂದ ಆಗಮಿಸಿದ್ದ ಸೈಮನ್ ಅಲೆಕ್ಸ್, ರಾಜ್ಯ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್, ನರೇಂದ್ರ, ಗೋಪಿ ಕೃಷ್ಣ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಶಾಸಕ ರಮೇಶ್ ಬಂಡಿಸಿದ್ದೇಗೌಡರ ಭಾವಚಿತ್ರವಿರುವ ಬ್ಯಾನರ್ ಇಲ್ಲದೆ ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ರಮೇಶ್ ಬಂಡಿಸಿದ್ದೇಗೌಡರಿಗೆ ಸಚಿವ ಸ್ಥಾನ ತಪ್ಪಿದ್ದರಿಂದ ಬೇಸರಗೊಂಡ ಬೆಂಬಲಿಗರು ಕಾಂಗ್ರೆಸ್ ಕಾರ್ಯಕರ್ತರನ್ನು ಮತ್ತಷ್ಟು ಉದ್ರಿಕ್ತಗೊಳ್ಳುವಂತೆ ಮಾಡಿತು. ಕಾಂಗ್ರೆಸ್ನ ಹೈಕಮಾಂಡ್ ಹಾಗೂ ಹಿರಿಯ ನಾಯಕರು ನಮ್ಮ ಶಾಸಕರಿಗೆ ಸಚಿವ ಸ್ಥಾನ ತಪ್ಪಿಸಿದ್ದಾರೆ ಎಂದು ತಮ್ಮ ಆಕ್ರೋಶ ಹೊರಹಾಕಿದರು.
ನಂತರ ವೀಕ್ಷಕ ಮೈಸೂರು ಲಕ್ಷ್ಮಣ್ ಮಾತನಾಡಿ, ತಮ್ಮ ಬೇಡಿಕೆಯನ್ನು ಪಕ್ಷದ ವರಿಷ್ಠರ ಗಮನಕ್ಕೆ ತರಲಾಗುವುದು. ಈ ಕಾರ್ಯಕ್ರಮ ಜಿಲ್ಲಾಧ್ಯಕ್ಷರನ್ನು ನೇಮಿಸುವ ವಿಚಾರವಾಗಿದೆ. ಇಡೀ ದೇಶದಲ್ಲಿ ಪಕ್ಷದ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧ್ಯಕ್ಷರನ್ನು ಬದಲಾವಣೆ ಮಾಡಿ ಹೊಸ ಅಧ್ಯಕ್ಷರನ್ನು ನೇಮಿಸಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ನೇಮಿಸುವ ಸಂಬಂಧ ಮುಖಂಡರು, ಕಾರ್ಯಕರ್ತರು ತಮ್ಮ ಅನಿಸಿಕೆ ಅಭಿಪ್ರಾಯ ತಿಳಿಸಿ ಎಂದು ಸಮಾಧಾನಪಡಿಸಿ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಕೆಲಕಾಲ ಗದ್ದಲ ನಡೆದು ವೀಕ್ಷಕರು ಎಲ್ಲರನ್ನು ಸಮಾಧಾನ ಪಡಿಸಿದ ನಂತರ ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ನೇಮಕ ಸಂಬಂಧ ಸಭೆಯಲ್ಲಿ ಅಭಿಪ್ರಾಯ ಸಂಗರ್ಹಿಸಿದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್ ಪ್ರಕಾಶ್, ಗ್ರಾಮಾಂತರ ಅಧ್ಯಕ್ಷ ಮಿತ್ರ ರಮೇಶ್, ಜಿಲ್ಲಾ ಮಾಧ್ಯಮ ಸಂಚಾಲಕ ಎಂ.ಪುಟ್ಟೇಗೌಡ, ಚಿದಂಬರ್, ಸಿ.ಎಂ ದ್ಯಾವಪ್ಪ ಸೇರಿದಂತೆ ಇತರ ಕಾರ್ಯಕರ್ತರು ಹಾಜರಿದ್ದರು.