ಕನ್ನಡಪ್ರಭ ವಾರ್ತೆ ಬೇಲೂರು

ಪಟ್ಟಣದ ಗೆಂಡೆಹಳ್ಳಿ ರಸ್ತೆಯಲ್ಲಿರುವ ಸರ್ಕಾರಿ ಕ್ರೀಡಾಂಗಣದಲ್ಲಿನ ಮೂಲಸೌಕರ್ಯಗಳ ಕೊರತೆ, ನಿರ್ವಹಣೆಯ ಅಭಾವ ಹಾಗೂ ಕ್ರೀಡಾಪಟುಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ಅವಲೋಕಿಸಿ, ಶೀಘ್ರದಲ್ಲೇ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವುದಾಗಿ ಶಾಸಕ ಎಚ್ ಕೆ ಸುರೇಶ್ ಹೇಳಿದರು.

ಪರಿಶೀಲನೆ ವೇಳೆ ಕ್ರೀಡಾಂಗಣದ ಓಟದ ಟ್ರ್ಯಾಕ್, ಆಟದ ಮೈದಾನ, ಪ್ರೇಕ್ಷಕರ ಆಸನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳ ಕೊರತೆಯನ್ನು ಶಾಸಕರು ಗಮನಿಸಿದರು. ಕ್ರೀಡಾಂಗಣವನ್ನು ಉತ್ತಮ ಗುಣಮಟ್ಟದ ಕ್ರೀಡಾ ಕೇಂದ್ರವಾಗಿ ರೂಪಿಸುವ ನಿಟ್ಟಿನಲ್ಲಿ ಸಮಗ್ರ ಅಭಿವೃದ್ಧಿ ಯೋಜನೆ ರೂಪಿಸಿ ಸರ್ಕಾರದ ಅನುದಾನವನ್ನು ತಂದು ಕಾಮಗಾರಿಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎಚ್.ಕೆ. ಸುರೇಶ್, "ಬೇಲೂರು ತಾಲೂಕಿನಲ್ಲಿ ಸಾಕಷ್ಟು ಪ್ರತಿಭಾವಂತ ಕ್ರೀಡಾಪಟುಗಳಿದ್ದಾರೆ. ಅವರಿಗೆ ಉತ್ತಮ ತರಬೇತಿ ಪಡೆಯಲು ಅಗತ್ಯ ಸೌಲಭ್ಯಗಳು ದೊರೆಯಬೇಕು. ಕ್ರೀಡಾಂಗಣದ ಅಭಿವೃದ್ಧಿಗೆ ಸರ್ಕಾರದಿಂದ ವಿಶೇಷ ಅನುದಾನ ತರಿಸಿ, ಆಧುನಿಕ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮಾಡಲಾಗುವುದು. ಕ್ರೀಡೆಗೆ ಉತ್ತೇಜನ ನೀಡುವುದು ಸರ್ಕಾರದ ಆದ್ಯತೆಯಾಗಿದೆ " ಎಂದು ತಿಳಿಸಿದರು.

ಸ್ಥಳೀಯ ಕ್ರೀಡಾಪಟುಗಳು ಮತ್ತು ಸಾರ್ವಜನಿಕರು ಹಲವು ವರ್ಷಗಳಿಂದ ಕ್ರೀಡಾಂಗಣ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು, ಮಳೆಗಾಲದಲ್ಲಿ ಮೈದಾನ ಸಂಪೂರ್ಣ ಕೆಸರಿನಿಂದ ತುಂಬಿ ಅಭ್ಯಾಸ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಶಾಸಕರ ಗಮನಕ್ಕೆ ತಂದರು. ಓಟದ ಟ್ರ್ಯಾಕ್ ಹಾಳಾಗಿರುವುದು, ಸಮರ್ಪಕ ಬೆಳಕಿನ ವ್ಯವಸ್ಥೆ ಇಲ್ಲದಿರುವುದು ಹಾಗೂ ನಿರ್ವಹಣೆ ಕೊರತೆಯಿಂದ ಕ್ರೀಡಾಪಟುಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ವಿವರಿಸಿದರು.ಮನವಿಯನ್ನು ಆಲಿಸಿದ ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣವೇ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕಾಮಗಾರಿಗಳ ಅಂದಾಜುಪಟ್ಟಿ ಸಿದ್ಧಪಡಿಸುವಂತೆ ಸೂಚನೆ ನೀಡಿದರು. ಕ್ರೀಡಾಂಗಣದ ಅಭಿವೃದ್ಧಿಗೆ ಬೇಕಾದ ಎಲ್ಲ ಕ್ರಮಗಳನ್ನು ಶೀಘ್ರ ಕೈಗೊಂಡು ಕ್ರೀಡಾಪಟುಗಳಿಗೆ ಉತ್ತಮ ವಾತಾವರಣ ಕಲ್ಪಿಸುವ ಭರವಸೆ ನೀಡಿದರು.ಸ್ಥಳ ಪರಿಶೀಲನೆ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಕ್ರೀಡಾಪಟುಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.