ಕನ್ನಡಪ್ರಭ ವಾರ್ತೆ ಹಾಸನ

ನಗರದ ಬಿ. ಕಾಟಿಹಳ್ಳಿ ಪ್ರದೇಶದ ಬಹುಕಾಲದ ರಸ್ತೆ ಮತ್ತು ಚರಂಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಮಹಾನಗರ ಪಾಲಿಕೆ ಹಾಗೂ ಸಿಎಂಐಡಿಪಿ ಯೋಜನೆಯಡಿ ಒಟ್ಟು ಸುಮಾರು ₹೮೦ ಲಕ್ಷ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಸೋಮವಾರ ಕ್ಷೇತ್ರದ ಶಾಸಕ ಎಚ್. ಪಿ. ಸ್ವರೂಪ್ ಭೂಮಿಪೂಜೆ ನೆರವೇರಿಸಿದರು. ಮಹಾನಗರ ಪಾಲಿಕೆಯ ಸುಮಾರು ೫೦ ಲಕ್ಷ ಹಾಗೂ ಸಿಎಂಐಡಿಪಿ ಯೋಜನೆಯ ₹೩೦ ಲಕ್ಷ ಅನುದಾನದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ಕಾಮಗಾರಿ ಪೂರ್ಣಗೊಂಡ ಬಳಿಕ ಬಡಾವಣೆಯ ಮೂಲಸೌಕರ್ಯ ಮತ್ತಷ್ಟು ಉತ್ತಮಗೊಳ್ಳಲಿದ್ದು, ಸಾರ್ವಜನಿಕರಿಗೆ ಸುಗಮ ಸಂಚಾರದೊಂದಿಗೆ ಮಳೆಗಾಲದಲ್ಲಿ ಎದುರಾಗುವ ನೀರು ನಿಲ್ಲುವ ಸಮಸ್ಯೆಗೂ ಪರಿಹಾರ ದೊರೆಯುವ ನಿರೀಕ್ಷೆ ಇದೆ. ಕಾಮಗಾರಿಗೆ ಚಾಲನೆ ನೀಡುವ ಮೊದಲು ಬಿ. ಕಾಟಿಹಳ್ಳಿಯ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ವೇದಮಂತ್ರಗಳ ಮಧ್ಯೆ ವಿಧಿವಿಧಾನಗಳೊಂದಿಗೆ ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಅಧಿಕೃತ ಚಾಲನೆ ನೀಡಲಾಯಿತು.ಈ ವೇಳೆ ಶಾಸಕರು ಮಾತನಾಡಿ, ಬಿ. ಕಾಟಿಹಳ್ಳಿ ವೇಗವಾಗಿ ಬೆಳೆಯುತ್ತಿರುವ ವಸತಿ ಪ್ರದೇಶವಾಗಿದ್ದು, ರಸ್ತೆ ಹಾಳಾಗಿರುವುದು ಹಾಗೂ ಸಮರ್ಪಕ ಚರಂಡಿ ವ್ಯವಸ್ಥೆಯ ಕೊರತೆಯಿಂದ ಸ್ಥಳೀಯ ನಿವಾಸಿಗಳು ಹಲವು ವರ್ಷಗಳಿಂದ ಸಂಕಷ್ಟ ಅನುಭವಿಸುತ್ತಿದ್ದರು. ಮಳೆಗಾಲದಲ್ಲಿ ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರು ಮತ್ತು ಪಾದಚಾರಿಗಳಿಗೆ ತೀವ್ರ ತೊಂದರೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯರ ಮನವಿ ಹಾಗೂ ಜನಪ್ರತಿನಿಧಿಗಳ ಪ್ರಯತ್ನದ ಫಲವಾಗಿ ಅಭಿವೃದ್ಧಿ ಕಾಮಗಾರಿ ಅನುಮೋದನೆಗೊಂಡಿದೆ. ಅಧಿಕಾರಿಗಳು ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಸ್ಥಳೀಯ ನಿವಾಸಿಗಳು ಕೂಡ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ ಆಗ್ರಹಿಸಿದರು.ಈ ಸಂದರ್ಭದಲ್ಲಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು, ಮಹಾನಗರ ಪಾಲಿಕೆ ಸಿಬ್ಬಂದಿ, ಬಡಾವಣೆಯ ನಿವಾಸಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗಣ್ಯರು ಉಪಸ್ಥಿತರಿದ್ದು, ಅಭಿವೃದ್ಧಿ ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಳ್ಳಲಿ ಎಂದು ಶುಭ ಹಾರೈಸಿದರು.