ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಶಾಸಕ ಸ್ವರೂಪ್ ದಿಢೀರ್ ಭೇಟಿ

| Published : Jun 18 2025, 11:48 PM IST

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಶಾಸಕ ಸ್ವರೂಪ್ ದಿಢೀರ್ ಭೇಟಿ
Share this Article
  • FB
  • TW
  • Linkdin
  • Email

ಸಾರಾಂಶ

ಬಸ್ ನಿಲ್ದಾಣಕ್ಕೆ ಬರುವ ಬಸ್ಸುಗಳಿಗೆ ವ್ಯವಸ್ಥಿತವಾಗಿ ನಿಲುಗಡೆಗೆ ಸೂಚನೆ ನೀಡಬೇಕು ಹಾಗೂ ಖಾಸಗಿ ವಾಹನಗಳು ಬಸ್ ನಿಲ್ದಾಣದ ಒಳಗೆ ಬಾರದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಬಸ್ ನಿಲ್ದಾಣದ ಪಕ್ಕದಲ್ಲಿರುವ ರಾಜಕಾಲುವೆಯಿಂದ ದುರ್ವಾಸನೆ ಬರುತ್ತಿದ್ದು ಇದರಿಂದ ಪ್ರಯಾಣಿಕರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಇರುವುದರಿಂದ ರಾಜಕಾಲುವೆ ಮೇಲೆ ಸ್ಲ್ಯಾಬ್ ಅಳವಡಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ಬಸ್ ನಿಲ್ದಾಣದ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಲು ನಗರಸಭೆ ಅಧಿಕಾರಿಗಳಿಗೆ ಸ್ಥಳದಲ್ಲೇ ಕರೆ ಮಾಡಿ ಹೇಳಿದರು.

ಕನ್ನಡಪ್ರಭ ವಾರ್ತೆ ಹಾಸನ

ನಗರದ ಚನ್ನಪಟ್ಟಣದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪಾರ್ಕಿಂಗ್ ಸಮಸ್ಯೆ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಶಾಸಕ ಸ್ವರೂಪ ಪ್ರಕಾಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಸ್ ನಿಲ್ದಾಣಕ್ಕೆ ಬರುವ ಬಸ್ಸುಗಳಿಗೆ ವ್ಯವಸ್ಥಿತವಾಗಿ ನಿಲುಗಡೆಗೆ ಸೂಚನೆ ನೀಡಬೇಕು ಹಾಗೂ ಖಾಸಗಿ ವಾಹನಗಳು ಬಸ್ ನಿಲ್ದಾಣದ ಒಳಗೆ ಬಾರದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಬಸ್ ನಿಲ್ದಾಣದ ಪಕ್ಕದಲ್ಲಿರುವ ರಾಜಕಾಲುವೆಯಿಂದ ದುರ್ವಾಸನೆ ಬರುತ್ತಿದ್ದು ಇದರಿಂದ ಪ್ರಯಾಣಿಕರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಇರುವುದರಿಂದ ರಾಜಕಾಲುವೆ ಮೇಲೆ ಸ್ಲ್ಯಾಬ್ ಅಳವಡಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ಬಸ್ ನಿಲ್ದಾಣದ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಲು ನಗರಸಭೆ ಅಧಿಕಾರಿಗಳಿಗೆ ಸ್ಥಳದಲ್ಲೇ ಕರೆ ಮಾಡಿ ಹೇಳಿದರು.

ಬಸ್ ನಿಲ್ದಾಣದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜೊತೆಗೆ ಶೌಚಾಲಯಗಳನ್ನು ಕೂಡ ಶುಚಿಯಾಗಿಟ್ಟುಕೊಳ್ಳಬೇಕು. ಬಸ್ ನಿಲ್ದಾಣದಲ್ಲಿರುವ ಅಂಗಡಿಗಳು ನಿಗದಿತ ದರಕ್ಕಿಂತ ಗ್ರಾಹಕರಿಂದ ಹೆಚ್ಚಿನ ಹಣ ಪಡೆಯುತ್ತಿದ್ದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಬಸ್ ನಿಲ್ದಾಣದ ಸುತ್ತಮುತ್ತ ಗಿಡಗಂಟಿಗಳು ಬೆಳೆದಿದ್ದರೆ ಅವುಗಳನ್ನು ತೆರವು ಮಾಡಿ ಶುಚಿಯಾದ ವಾತಾವರಣ ನಿರ್ಮಿಸಬೇಕು ಎಂದು ಸಲಹೆ ನೀಡಿದರು.

ಇದೇ ವೇಳೆ ಬಸ್ ನಿಲ್ದಾಣದ ಪಕ್ಕದಲ್ಲಿನ ಆಟೋ ಚಾಲಕರು ಕೂಡ ಪ್ರಯಾಣಿಕರು ಆಟೋ ನಿಲ್ದಾಣದ ಪಕ್ಕದಲ್ಲಿ ತಮ್ಮ ದ್ವಿಚಕ್ರ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ನಮಗೆ ತೊಂದರೆಯಾಗುತ್ತಿದೆ ಎಂದು ತಮ್ಮ ಅಳಲು ತೋಡಿಕೊಂಡ ಹಿನ್ನೆಲೆಯಲ್ಲಿ ಇದಕ್ಕೆ ಪರಿಹಾರ ವ್ಯವಸ್ಥೆ ಕಲ್ಪಿಸಿ ಕೊಡುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ಉಪಸ್ಥಿತರಿದ್ದರು.