ಸಾರಾಂಶ
-ಮಾತಾಸನಹಳ್ಳಿ ಗ್ರಾಮದಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ
-----ಕನ್ನಡಪ್ರಭ ವಾರ್ತೆ ಚಳ್ಳಕೆರೆ
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಈಗಾಗಲೇ ಅಭ್ಯರ್ಥಿಗಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಂಡೂರಿನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ವಿಜಯ ಸಾಧಿಸುವ ವಿಶ್ವಾಸವನ್ನು ಶಾಸಕ, ಸಣ್ಣ ಕೈಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ವ್ಯಕ್ತಪಡಿಸಿದರು.ಅವರು, ಸಂಡೂರು ವಿಧಾನಸಭಾ ಕ್ಷೇತ್ರದ ಬೊಮ್ಮಘಟ್ಟ ಗ್ರಾಪಂ. ವ್ಯಾಪ್ತಿಯ ಮಾತಾಸನಹಳ್ಳಿಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಕೆಪಿಸಿಸಿ ನಿರ್ದೇಶನದಂತೆ ಸಂಡೂರಿನಲ್ಲಿ ಅಭ್ಯರ್ಥಿ ಪರ ಪ್ರಚಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರಲ್ಲದೆ, ಸಂಡೂರು ಯಾವಾಗಲೂ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದೆ ಎಂದರು.
ಈ ಭಾಗದಲ್ಲಿ ಪ್ರಚಾರ ಕಾರ್ಯಕ್ಕೆ ಆಗಮಿಸಿದ ಸಂದರ್ಭದಲ್ಲಿ ನೂರಾರು ಪಕ್ಷದ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಸ್ವಯಂ ಪ್ರೇರಣೆಯಿಂದ ಪ್ರಚಾರ ಕಾರ್ಯದಲ್ಲಿ ನನ್ನೊಂದಿಗೆ ಇದ್ದಾರೆ. ಪ್ರತಿಹಳ್ಳಿಯಲ್ಲೂ ಮತದಾರರು ಕಾಂಗ್ರೆಸ್ ಪಕ್ಷದ ಪರವಾಗಿ ಮತ ಚಲಾವಣೆ ಮಾಡುವರು ಎಂಬ ವಿಶ್ವಾಸ ದಿನದಿಂದ ದಿನಕ್ಕೆ ಗಟ್ಟಿಯಾಗುತ್ತಿದೆ. ಈ ಕ್ಷೇತ್ರದ ಶಾಸಕರಾಗಿ, ಸಂಸದರಾಗಿ ಮಾಜಿ ಸಚಿವರಾಗಿ ಕಾರ್ಯನಿರ್ವಹಿಸಿದ ತುಕಾರಂ ಅವರ ಪತ್ನಿ ಅನ್ನಪೂರ್ಣ ತುಕಾರಂ ಈ ಭಾಗದ ಜನರಿಗೆ ಚಿರಪರಿಚಿತರಾಗಿದ್ಧಾರೆ. ಯಾವುದೇ ಗ್ರಾಮಕ್ಕೆ ಹೋದರೂ ಅವರ ಹೆಸರನ್ನು ಮತದಾರರೇ ಹೇಳುತ್ತಾರೆ. ಇಲ್ಲಿನ ಸ್ಥಿತಿ ಕಾಂಗ್ರೆಸ್ ಪಕ್ಷದ ಪರವಾಗಿದೆ ಎಂದರು.ಕಳೆದ ಮೂರು ದಿನಗಳಿಂದ ಕೆಪಿಸಿಸಿ ನಿರ್ದೇಶನದ ಮೇರೆಗೆ ಈ ಭಾಗದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿರುವೆ. ಚುನಾವಣೆ ನಡೆಯಲು ಇನ್ನೂ ಏಳು ದಿನಗಳು ಬಾಕಿ ಇದ್ದು, ಪಕ್ಷ ಸೂಚಿಸಿದ ಕಡೆಗೆ ಹೋಗಿ ಪ್ರಚಾರ ಮಾಡುವೆ. ಈಗಾಗಲೇ ಕೆಪಿಸಿಸಿ ರಾಜ್ಯಾಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಡೂರು ಉಪಚುನಾವಣೆ ಗೆಲುವಿನ ಬಗ್ಗೆ ಸಾಕಷ್ಟು ಮಾರ್ಗದರ್ಶನ ನೀಡಿದ್ದು, ಅದನ್ನು ಪ್ರಚಾರ ಕಾರ್ಯದಲ್ಲಿ ಬಳಸಿಕೊಳ್ಳುವೆ ಎಂದರು.
----ಪೋಟೋ: ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಸಂಡೂರು ವಿಧಾನಸಭಾ ಕ್ಷೇತ್ರದ ಬೊಮ್ಮಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾತಾಸನಹಳ್ಳಿ ಗ್ರಾಮದಲ್ಲಿ ಪಕ್ಷದ ಅಭ್ಯರ್ಥಿಪರವಾಗಿ ಪ್ರಚಾರ ನಡೆಸಿದರು.
---೫ಸಿಎಲ್ಕೆ೧