ಸಾರಾಂಶ
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬುಧವಾರ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬುಧವಾರ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ವಿವಿಧ ವಿಷಯಗಳ ಕುರಿತು ಚರ್ಚಿಸಿದರು.ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಬೊಕ್ಕಸಕ್ಕೆ ಆಗುವ ನಷ್ಟದ ಬಗ್ಗೆ ಸ್ವತಃ ರಾಜ್ಯ ಸರ್ಕಾರದ ವಿತ್ತ ಇಲಾಖೆ ಎಚ್ಚರಿಸಿದರೂ ಸಹ ಈ ರೀತಿಯಾದ ಯೋಜನೆಗಳನ್ನು ಅನುಷ್ಠಾನಗೊಳಿಸಿರುವುದರಿಂದ ರಾಜ್ಯ ದಿವಾಳಿ ಆಗುವುದರ ಬಗ್ಗೆ ವಿತ್ತ ಸಚಿವರಿಗೆ ತಿಳಿಸಿ, ಕೇಂದ್ರ ಸರ್ಕಾರ ತನ್ನ ಅಧಿಕಾರವನ್ನು ಬಳಸಿ ಕೂಡಲೇ ಫಿಸ್ಕಲ್ ರೆಸ್ಪಾನ್ಸಿಬಿಲಿಟಿ ಆ್ಯಂಡ್ ಬಜೆಟ್ ಮ್ಯಾನೆಜ್ಮೆಂಟ್ ಆಕ್ಟ್ ಕಾಯ್ದೆಯಡಿ ರಾಜ್ಯ ಸರ್ಕಾರದ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಲಾಯಿತು.ಇದಲ್ಲದೆ, ಅಕ್ಕಿ ವಿತರಣೆಯಲ್ಲೂ ರಾಜ್ಯ ತಪ್ಪು ಹೆಜ್ಜೆ ಇಡುತ್ತಿದೆ. ದೇಶದಲ್ಲಿ ಅತೀ ಹೆಚ್ಚು ಬಿಪಿಎಲ್ ಕಾರ್ಡ್ ಹೊಂದಿರುವ ರಾಜ್ಯ ಕರ್ನಾಟಕವಾಗಿದೆ. ಆದರೆ, ಎಷ್ಟು ಬೋಗಸ್ ಕಾರ್ಡ್ಗಳು ವಿತರಣೆಯಾಗಿದೆ ಎಂಬ ಆಡಿಟ್ ಇದುವರೆಗೂ ಆಗಿಲ್ಲ. ಬಡತನ ರೇಖೆಗಿಂತ ಮೇಲೆ ಇರುವವರೇ ಹೆಚ್ಚು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಸರ್ಕಾರ ಇವರ ಮೇಲೆ ಕ್ರಮಕೈಗೊಳ್ಳದೇ, ಎಲ್ಲರಿಗೂ ಉಚಿತ ಅಕ್ಕಿ ನೀಡುತ್ತಿದೆ ಎಂದು ರಾಜ್ಯ ಸರ್ಕಾರದ ಆರ್ಥಿಕ ಇಲಾಖೆ ನೀಡಿರುವ ವರದಿಯನ್ನು ತೋರಿಸಿ ವಿವರಿಸಿದರು.ಅತ್ಯಂತ ತಾಳ್ಮೆಯಿಂದ ಆಲಿಸಿದ ಸಚಿವರು, ವಿವರಗಳನ್ನು ಪರಿಶೀಲಿಸಿ ಈ ನಿಟ್ಟಿನಲ್ಲಿ ಅಗತ್ಯವನ್ನು ಮಾಡುವುದಾಗಿ ಭರವಸೆ ನೀಡಿದ್ದಾರೆಂದು ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.