ಕೆಂಪು ಕಲ್ಲಿನ ಗಣಿಗಾರಿಕೆ ದರ ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸಲು ಶಾಸಕರ ಆಗ್ರಹ

| Published : Nov 13 2025, 01:45 AM IST

ಕೆಂಪು ಕಲ್ಲಿನ ಗಣಿಗಾರಿಕೆ ದರ ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸಲು ಶಾಸಕರ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಕೆಂಪು ಕಲ್ಲು ದರ ಮಾತ್ರ ದುಬಾರಿಯಾಗಿರುವ ಕಾರಣ ದ.ಕ. ಜಿಲ್ಲೆಯಲ್ಲಿ ಬಡವರಿಗೆ ಮನೆ ನಿರ್ಮಾಣ ಕಾಮಗಾರಿ ನಡೆಸಲಾಗುತ್ತಿಲ್ಲ. ದರ ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸಬೇಕು ಎಂದು ಜಿಲ್ಲೆಯ ಶಾಸಕರು ಆಗ್ರಹಿಸಿದ್ದಾರೆ.

ಮಂಗಳೂರು: ಕೆಂಪು ಕಲ್ಲಿನ ಗಣಿಗಾರಿಕೆ ಮೇಲಿನ ರಾಜಧನ ಇಳಿಕೆಯಾಗಿದ್ದರೂ ಕೆಂಪು ಕಲ್ಲು ದರ ಮಾತ್ರ ದುಬಾರಿಯಾಗಿರುವ ಕಾರಣ ದ.ಕ. ಜಿಲ್ಲೆಯಲ್ಲಿ ಬಡವರಿಗೆ ಮನೆ ನಿರ್ಮಾಣ ಕಾಮಗಾರಿ ನಡೆಸಲಾಗುತ್ತಿಲ್ಲ. ದರ ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸಬೇಕು ಎಂದು ಜಿಲ್ಲೆಯ ಶಾಸಕರು ಆಗ್ರಹಿಸಿದ್ದಾರೆ.

ಸಂಸದ ಕ್ಯಾ. ಬ್ರಿಜೇಶ್ ಚೌಟ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್‌ ನೇತ್ರಾವತಿ ಸಭಾಂಗಣದಲ್ಲಿ ಮಂಗಳವಾರ ನಡೆದ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿ ಶಾಸಕರಾದ ಉಮಾನಾಥ ಕೋಟ್ಯಾನ್, ಹರೀಶ್ ಪೂಂಜಾ, ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ ಇವರು ಕೆಂಪು ಕಲ್ಲಿನ ದರ ದುಬಾರಿಯಾಗಿರುವ ಬಗ್ಗೆ ಆಕ್ಷೇಪಿಸಿದರು.

ಶಾಸಕ ಉಮಾನಾಥ ಕೋಟ್ಯಾನ್ ವಿಷಯ ಪ್ರಸ್ತಾಪಿಸಿ, ಕೆಂಪು ಕಲ್ಲು ಗಣಿಗಾರಿಕೆ ನಡೆಸುವವರಿಗೆ ರಾಜಧನ ಹೆಚ್ಚಳವಾಗಿದೆ ಎಂಬ ಕಾರಣದಿಂದ ನಾವೆಲ್ಲಾ ಪ್ರಯತ್ನಿಸಿ ಸರ್ಕಾರದ ಮೂಲಕ ಇಳಿಕೆ ಮಾಡಲಾಗಿದೆ. ಹಿಂದೆ ೩೦ ರು.ಗಳಿಗೆ ಸಿಗುತ್ತಿದ್ದ ಕೆಂಪುಕಲ್ಲಿನ ದರ ಪ್ರಸಕ್ತ ೫೫ ರು. ಆಗಿದೆ. ರಾಜಧನ ಕಡಿಮೆಯಾಗಿದ್ದರೂ ಕೆಂಪುಕಲ್ಲು ಪೂರೈಕೆದಾರರು ದರ ಇಳಿಕೆ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಡವರು ಕೆಂಪು ಕಲ್ಲಿನ ದುಬಾರಿ ಬೆಲೆ ಹಾಗೂ ಮರಳಿನ ಸಮಸ್ಯೆಯಿಂದಾಗಿ ಮನೆ ಪೂರ್ಣಗೊಳಿಸಲು ಸಾಧ್ಯವಾಗದೆ ಗೃಹ ಪ್ರವೇಶ ಮಾಡಲಾಗದೆ ಸಂಕಷ್ಟ ಪಡುವಂತಾಗಿದೆ ಎಂದು ಹರೀಶ್ ಪೂಂಜಾ ಹೇಳಿದಾಗ ಇತರೆ ಶಾಸಕರು ದನಿಗೂಡಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ದರ್ಶನ್‌, ಈಗಾಗಲೇ ಕೆಂಪು ಕಲ್ಲು ಗಣಿಗಾರಿಕೆ ನಡೆಸುವವರ ಅಸೋಶಿಯೇಶನ್ ಜತೆ ಮಾತುಕತೆ ನಡೆಸಲಾಗಿದೆ. ರಾಜ್ಯದಲ್ಲಿ ರಾಜಧನ ದುಬಾರಿ ಇದೆ ಎಂಬ ಬೇಡಿಕೆಯ ಹಿನ್ನೆಲೆಯಲ್ಲಿ ಟನ್‌ಗೆ ೨೯೫ ರು.ಗಳಿದ್ದ ರಾಜಧನವನ್ನು ೧೦೦ ರು.ಗಳಿಗೆ ಸೀಮಿತಗೊಳಿಸಲಾಗಿದೆ. ಹಾಗಿದ್ದರೂ ದರ ಇಳಿಕೆಗೆ ಮುಂದಾಗದಿರುವುದು ಗಮನಕ್ಕೆ ಬಂದಿದೆ. ಈ ರೀತಿ ಮುಂದುವರಿದರೆ ಜಿಲ್ಲಾಡಳಿತದಿಂದ ಮುಂದೆ ಯಾವುದೇ ಸಹಕಾರ ಸಿಗದು ಎಂಬುದನ್ನು ಅಸೋಶಿಯನ್‌ನವರಿಗೆ ಸ್ಪಷ್ಟಪಡಿಸಲಾಗಿದೆ. ಕೆಡಿಪಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಇಎಸ್‌ಐನಡಿ ಸಾಮಾನ್ಯ ಚಿಕಿತ್ಸೆಗೆ ತೊಂದರೆ :

ಇಎಸ್‌ಐನಡಿ ಖಾಸಗಿ ಆಸ್ಪತ್ರೆಗಳಲ್ಲಿ ಸಾಮಾನ್ಯ ವೈದ್ಯಕೀಯ ಚಿಕಿತ್ಸೆ ದೊರೆಯುತ್ತಿಲ್ಲ. ರಾಜ್ಯ ಸರ್ಕಾರದಿಂದ ನವೀಕರಣ ವ್ಯವಸ್ಥೆ ಆಗದ ಕಾರಣ ಇಎಸ್‌ಐ ಕಾರ್ಡ್ ಹೊಂದಿದವರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ಗಮನ ಸೆಳೆದರು.

ಜಿಲ್ಲಾಧಿಕಾರಿ ದರ್ಶನ್ ಮಾತನಾಡಿ, ಈ ಬಗ್ಗೆ ರಾಜ್ಯ ವೈದ್ಯಕೀಯ ಇಲಾಖೆಯ ಆಯುಕ್ತರ ಬಳಿ ಚರ್ಚಿಸುವುದಾಗಿ ತಿಳಿಸಿದರು.

ಕೂಳೂರು ಸೇತುವೆ ಕಾಮಗಾರಿ ಕುಂಠಿತ :

ಕೂಳೂರು ಸೇತುವೆ ಕಾಮಗಾರಿ ವಿಳಂಬದ ಬಗ್ಗೆ ದಿಶಾ ಸಭೆಯಲ್ಲಿ ಅಧಿಕಾರಿಗಳನ್ನು ಸಂಸದ ಕ್ಯಾ.ಬ್ರಿಜೇಶ್ ಚೌಟ ಪ್ರಶ್ನಿಸಿದಾಗ, ಕಾಮಗಾರಿ ಆರಂಭಗೊಂಡಿರುವುದಾಗಿ ಅಧಿಕಾರಿಗಳು ಉತ್ತರಿಸಿದರು. ಅಡಿಪಾಯದ ಪ್ರಾಥಮಿಕ ಕೆಲಸಗಳು ಪೂರ್ಣಗೊಂಡಿವೆ. ಪೈಲ್ ಕ್ಯಾಪ್ ಕಾಮಗಾರಿ ಪ್ರಗತಿಯಲ್ಲಿದ್ದು, ಜನವರಿಯೊಳಗೆ ಕಾಮಗಾರಿ ಮುಗಿದು ಸರ್ವಿಸ್ ರಸ್ತೆ ಕಾಮಗಾರಿಯ ಬಳಿಕ ಮಾರ್ಚ್‌ನಲ್ಲಿ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳ್ಳಲಿದೆ. ಕಾಮಗಾರಿಗೆ ಹಣದ ಕೊರತೆ ಇಲ್ಲ ಎಂದು ಎನ್‌ಎಚ್‌ಎಐ ಯೋಜನಾ ನಿರ್ದೇಶಕ ಜಾವೇದ್ ಅಜ್ಮಿ ಸಭೆಯಲ್ಲಿ ಮಾಹಿತಿ ನೀಡಿದರು.

ಮಹಾಕಾಳಿಪಡ್ಪು ಕೆಳಸೇತುವೆ ಡಿಸೆಂಬರ್‌ಗೆ ಪೂರ್ಣ :ಮಹಕಾಳಿಪಡ್ಪು ರೈಲ್ವೆ ಕೆಳಸೇತುವೆ ಕಾಮಗಾರಿ ವಿಳಂಬಗೊಂಡಿರುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಪ್ರಶ್ನಿಸಿದಾಗ, ಕಾಮಗಾರಿ ಡಿ.೨೦ರೊಳಗೆ ಪೂರ್ಣಗೊಳ್ಳಲಿದೆ ಎಂದು ಸ್ಮಾರ್ಟ್ ಸಿಟಿ ಅಧಿಕಾರಿ ಅರುಣ್ ಪ್ರಭ ಉತ್ತರಿಸಿದರು. ಈ ರೈಲ್ವೇ ಕೆಳಸೇತುವೆ ಕಾಮಗಾರಿ ಪೂರ್ಣಗೊಳ್ಳದ ಕಾರಣ ೨೦೨೨ರಲ್ಲಿ ಕರಾವಳಿ ವೃತ್ತ- ಮಹಾವೀರ ವೃತ್ತದ (ಪಂಪ್‌ವೆಲ್‌)ವರೆಗಿನ ರಸ್ತೆ ಕಾಮಗಾರಿ ಅನುಷ್ಟಾನ ಸಾಧ್ಯವಾಗುತ್ತಿಲ್ಲ ಎಂದು ಶಾಸಕ ವೇದವ್ಯಾಸ ಕಾಮತ್ ಆಕ್ಷೇಪಿಸಿದರು. ರೈಲ್ವೆ ಇಲಾಖೆಯ ಡಿಆರ್‌ಎಂ ದರ್ಜೆಯ ಅಧಿಕಾರಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ಸಮನ್ವಯ ಸಭೆ ನಡೆಸಲು ರೈಲ್ವೆ ಸಚಿವರೇ ಸೂಚಿಸಿದ್ದರೂ ಸಭೆ ನಡೆಯುತ್ತಿಲ್ಲ. ಈ ಬಗ್ಗೆ ಸಚಿವಾಲಯಕ್ಕೆ ದೂರು ನೀಡಬೇಕಾಗುತ್ತದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಎಚ್ಚರಿಸಿದರು.

ಜಿ.ಪಂ. ಸಿಇಒ ವಿನಾಯಕ ನರ್ವಾಡೆ ಕರ್ಬಾರಿ, ಅರಣ್ಯ ಇಲಾಖೆ ಉಪ ಸಂರಕ್ಷಣಾಧಿಕಾರಿ ಆ್ಯಂಟನಿ ಮರಿಯಪ್ಪ ಇದ್ದರು.