ಯುಪಿಎ ಸರ್ಕಾರ ಜಾರಿಗೆ ತಂದು ಜಾಗತಿಕ ಮನ್ನಣೆ ಪಡೆದುಕೊಂಡಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಹೆಸರನ್ನು ಬದಲಾಯಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ರಮಾನಾಥ ರೈ ತೀವ್ರ ಆಕ್ಷೇಪ
ಬಂಟ್ವಾಳ: ಯುಪಿಎ ಸರ್ಕಾರ ಜಾರಿಗೆ ತಂದು ಜಾಗತಿಕ ಮನ್ನಣೆ ಪಡೆದುಕೊಂಡಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಹೆಸರನ್ನು ಬದಲಾಯಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ರಮಾನಾಥ ರೈ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಬಡವರ ಬದುಕಿಗೆ ಆಸರೆಯಾಗಿರುವ ಉದ್ಯೋಗ ಖಾತ್ರಿ ಯೋಜನೆಗೆ ಮಹಾತ್ಮ ಗಾಂಧಿ ಹೆಸರು ಅಳಿಸುವುದು ಕೇವಲ ಹೆಸರಿನ ಬದಲಾವಣೆ ಅಲ್ಲ, ಅದು ಗಾಂಧೀಜಿಯ ಮೌಲ್ಯಗಳ ಮೇಲಿನ ದಾಳಿ ಎಂದು ಅಭಿಪ್ರಾಯಪಟ್ಟರು.
ಮಹಾತ್ಮ ಗಾಂಧಿ ಹೆಸರನ್ನು ಸಾರ್ವಜನಿಕ ಯೋಜನೆಗಳಿಂದ ಕ್ರಮೇಣ ತೆಗೆದುಹಾಕುವ ಮೂಲಕ ದೇಶದ ಇತಿಹಾಸವನ್ನೇ ಮರೆಮಾಚುವ ಪ್ರಯತ್ನ ನಡೆಯುತ್ತಿದೆ. ಇದು ಅಪಾಯಕಾರಿ ಪ್ರವೃತ್ತಿ ಎಂದು ಎಚ್ಚರಿಸಿದ ಅವರು, ಕೇಂದ್ರ ಸರ್ಕಾರ ಈ ನಿರ್ಧಾರವನ್ನು ತಕ್ಷಣ ಪುನರ್ಪರಿಶೀಲಿಸಬೇಕು ಎಂದು ಆಗ್ರಹಿಸಿದರು.ಕೇಂದ್ರ ಸರಕಾರದ ಈ ನಡೆ ವಿರುದ್ದ ಕಾಂಗ್ರೆಸ್ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದು, ನಮ್ಮ ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಕನಿಷ್ಠ 5 ಕಿ.ಮೀ. ವ್ಯಾಪ್ತಿಯಲ್ಲಿ ಪಾದಯಾತ್ರೆ ಕಾರ್ಯಕ್ರಮಗಳು ನಡೆಯಲಿವೆ.ಜ. 27ರಂದು ಮಣಿಹಳ್ಳದಿಂದ ಪಾದಯಾತ್ರೆ ಮೂಲಕ ಪ್ರತಿಭಟನಾ ಕಾರ್ಯಕ್ಕೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಚಾಲನೆ ನೀಡಲಾಗುತ್ತದೆ. ಮಣಿಹಳ್ಳದಿಂದ ಹೊರಟ ಪಾಡಯಾತ್ರೆ ಕೈಕಂಬದವರೆಗೆ ಸಾಗಿ ಅಲ್ಲಿಂದ ಮತ್ತೆ ಬಿಸಿರೋಡಿನ ಪೇಟೆ ಮೂಲಕ ಮಿನಿ ವಿಧಾನ ಸೌಧದವರೆಗೆ ಬಂದು ಅದರ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಿದ್ದೇವೆ.ಜ. 27ರ ಮೊದಲು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಗ್ರಾಮ ಮಟ್ಟದಲ್ಲಿ ಕೂಡ ಪ್ರತಿಭಟನೆ ಮಾಡಲಿದ್ದು, ಕಾಂಗ್ರೆಸ್ ಬೆಂಬಲಿತ ಆಡಳಿತ ಇರುವ ಗ್ರಾಪಂನಿಂದ ಉದ್ಯೋಗ ಖಾತರಿ ಯೋಜನೆ ಹೆಸರು ಬದಲಾವಣೆ ಮಾಡದಂತೆ ನಿರ್ಣಯ ಮಾಡಲಿದ್ದು, ಆಡಳಿತವಿಲ್ಲದ ಗ್ರಾಪಂನಲ್ಲಿ ಮನವಿ ನೀಡುವ ಕಾರ್ಯ ಮಾಡುತ್ತೇವೆ ಎಂದು ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಾಲಕೃಷ್ಣ ಅಂಚನ್, ಚಂದ್ರಶೇಖರ ಭಂಡಾರಿ, ಪಕ್ಷದ ಪ್ರಮುಖರಾದ ಪಿಯೂಸ್ ಎಲ್. ರೋಡ್ರಿಗಸ್, ಸುದರ್ಶನ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಬೇಬಿ ಕುಂದರ್, ಅಬ್ಬಾಸ್ ಆಲಿ, ಮಲ್ಲಿಕಾ ಶೆಟ್ಟಿ, ಲವೀನಾ ವಿಲ್ಮಾ ಮೊರಾಸ್, ಲುಕ್ಮಾನ್ ಮತ್ತಿತರರು ಉಪಸ್ಥಿತರಿದ್ದರು.