ಅಮಿತ್ ಶಾ ವಜಾಕ್ಕೆ ಆಗ್ರಹಿಸಿ ಅಣಕು ಶವಯಾತ್ರೆ

| Published : Dec 21 2024, 01:16 AM IST

ಸಾರಾಂಶ

ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಕುರಿತು ಅಪಮಾನಕರ ಮಾತುಗಳನ್ನಾಡಿರುವ ಕೇಂದ್ರ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಬಂಧಿಸುವಂತೆ ಆಗ್ರಹಿಸಿ ದಲಿತ - ಜನಪರ ಚಳವಳಿಗಳ ಒಕ್ಕೂಟದಿಂದ ಶುಕ್ರವಾರ ಪ್ರತಿಭಟನೆ ನಡೆಸಿದರಲ್ಲದೆ ಅಮಿತ್‌ ಶಾ ಅವರ ಪ್ರತಿಕೃತಿ ದಹಿಸಿ ಜಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಅಂಬೇಡ್ಕರ್ ವಿರೋಧಿ, ಸಂವಿಧಾನ ವಿರೋಧಿ ಮನುವಾದಿ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಹಾಗೂ ಸಂವಿಧಾನ ಮತ್ತು ಸಂವಿಧಾನ ಶಿಲ್ಪಿಯನ್ನು ಅವಮಾನಿಸಿದ ಅವರ ಮೇಲೆ ಕಾನೂನು ಕ್ರಮ ಜರುಗಿಸಿ ಬಂಧಿಸಬೇಕೆಂದು ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಕುರಿತು ಅಪಮಾನಕರ ಮಾತುಗಳನ್ನಾಡಿರುವ ಕೇಂದ್ರ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಬಂಧಿಸುವಂತೆ ಆಗ್ರಹಿಸಿ ದಲಿತ - ಜನಪರ ಚಳವಳಿಗಳ ಒಕ್ಕೂಟದಿಂದ ಶುಕ್ರವಾರ ಪ್ರತಿಭಟನೆ ನಡೆಸಿದರಲ್ಲದೆ ಅಮಿತ್‌ ಶಾ ಅವರ ಪ್ರತಿಕೃತಿ ದಹಿಸಿ ಜಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್‌. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂತು. ದಲಿತ ಹಿರಿಯ ಮುಖಂಡ ಎಚ್.ಕೆ. ಸಂದೇಶ್ ಮತ್ತು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ. ಸೋಮಶೇಖರ್ ಇದೇ ವೇಳೆ ಸಿ ಮಾತನಾಡಿ, ಬಾಬಾಸಾಹೇಬ್ ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಡಿರುವ ಅಪಮಾನಕರ ಮಾತುಗಳು ಅತ್ಯಂತ ಖಂಡನೀಯವಾದುದು. ಈ ಮಾತುಗಳು ಅಮಿತ್ ಶಾ ಅವರ ಮನುವಾದಿ ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ ಹಾಗೂ ಅವರು ಹಿಂದೆಯೂ ಈಗಲೂ ಮುಂದೆಯೂ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಒಪ್ಪಿಕೊಳ್ಳುವುದಿಲ್ಲ ಎನ್ನುವುದು ಸಾಬೀತಾಗುತ್ತದೆ. ಇಂತಹ ಮನುವಾದಿ ಮನಸ್ಥಿತಿಯ ಅಮಿತ್ ಶಾ ಭಾರತದ ಗೃಹ ಸಚಿವರಾಗಿ ಮುಂದುವರಿದರೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಅವರ ಆಶಯಗಳಿಗೆ ವಿರುದ್ಧವಾಗುತ್ತದೆ. ಹಾಗೂ ಭಾರತದ ಸಂವಿಧಾನದ ಮೂಲ ತತ್ವಗಳಿಗೆ ಧಕ್ಕೆಯಾಗುತ್ತದೆ ಎಂದರು.

ಭಾರತದ ಸಂವಿಧಾನದ ೭೫ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿಯೇ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಅಮಿತ್ ಶಾ ಅವರು ಆಡಿರುವ ಅಪಮಾನಕರ ಮಾತುಗಳು ಕೇವಲ ಆಕಸ್ಮಿಕವೇನೂ ಅಲ್ಲ. ಸಂವಿಧಾನದ ಕುರಿತ ಚರ್ಚೆಯ ಸಂದರ್ಭದಲ್ಲಿಯೇ ಸಂವಿಧಾನ ಶಿಲ್ಪಿಗೆ ಅವಮಾನ ಮಾಡುವುದು ಅವರ ನೈಜ ಉದ್ದೇಶವಾಗಿತ್ತು. ಅಮಿತ್ ಶಾ ಪ್ರತಿನಿಧಿಸುವ ಆರ್‌ಎಸ್‌ಎಸ್, ಜನಸಂಘ ಮತ್ತು ಬಿಜೆಪಿ ಭಾರತ ದೇಶವನ್ನು ಸಾರ್ವಭೌಮ, ಸಮಾಜವಾದಿ, ಮತಧರ್ಮ ನಿರಪೇಕ್ಷ, ಪ್ರಜಾಸತ್ತಾತ್ಮಕ ಗಣರಾಜ್ಯ ಎಂದು ನಿರೂಪಿಸುವ ಭಾರತದ ಸಂವಿಧಾನ ಮತ್ತು ಅದರ ರಚನೆಗೆ ಅತ್ಯಂತ ಮಹತ್ವದ ಕೊಡುಗೆ ನೀಡಿದ ಡಾ. ಬಿ.ಆರ್. ಅಂಬೇಡ್ಕರ್‌ ಅವರ ವಿರುದ್ಧ ಆರಂಭದಿಂದಲೂ ತೀವ್ರ ಅಸಮಾಧಾನ ಮತ್ತು ಅತೃಪ್ತಿಯನ್ನು ಹೊರಹಾಕಿರುವುದು ಇಡೀ ದೇಶಕ್ಕೇ ಗೊತ್ತಿರುವ ಇತಿಹಾಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಂಬೇಡ್ಕರ್ ಅವರ ಜಾತಿ ಹಿನ್ನೆಲೆಯನ್ನು ಎತ್ತಿ ತೋರಿಸುತ್ತಾ ಅಂಬೇಡ್ಕರ್‌ ಅವರು ಸಂವಿಧಾನ ಬರೆಯಲೇ ಇಲ್ಲ ಎನ್ನುವ ಸುಳ್ಳುಗಳನ್ನು ಪ್ರಚಾರ ಮಾಡುವುದರ ಜೊತೆಗೆ ಅಂಬೇಡ್ಕರ್ ಅವರು ರಚಿಸಿರುವ ಭಾರತದ ಸಂವಿಧಾನವನ್ನು ತಾನು ಒಪ್ಪುವುದೂ ಇಲ್ಲ ಎನ್ನುವುದನ್ನು ಆರ್‌ಎಸ್‌ಎಸ್ ಆಗ ಬಹಿರಂಗವಾಗಿಯೇ ಹೇಳಿತ್ತು. ಅಂತಹ ಸಂಘಪರಿವಾರ ಮತ್ತು ಬಿಜೆಪಿಯ ಅಮಿತ್ ಶಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಆಡಿರುವ ಅಪಮಾನಕರವಾದ ಮಾತುಗಳು ಅವರ ಮನುವಾದಿ ಪರಂಪರೆಯ ಮುಂದುವರಿಕೆಯ ಭಾಗವಾಗಿಯೇ ಬಂದಿವೆ. ಇದು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಭಾರತದ ಸಂವಿಧಾನಕ್ಕೆ ಆಗಿರುವ ಅತ್ಯಂತ ಘೋರ ಅಪಮಾನವಾಗಿದೆ ಎಂದು ಅಸಮಾಧಾನ ಹೊರಹಾಕಿದರು. ಈ ಹಿನ್ನೆಲೆಯಲ್ಲಿ ಅಂಬೇಡ್ಕರ್ ವಿರೋಧಿ, ಸಂವಿಧಾನ ವಿರೋಧಿ ಮನುವಾದಿ ಅಮಿತ್ ಶಾ ಅವರನ್ನು ಕೂಡಲೇ ಕೇಂದ್ರ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಹಾಗೂ ಸಂವಿಧಾನ ಮತ್ತು ಸಂವಿಧಾನ ಶಿಲ್ಪಿಯನ್ನು ಅವಮಾನಿಸಿದ ಅವರ ಮೇಲೆ ಕಾನೂನು ಕ್ರಮ ಜರುಗಿಸಿ ಬಂಧಿಸಬೇಕೆಂದು ಆಗ್ರಹಿಸಿದರು. ಹಾಸನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿ ಭಾರತದ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಯವರನ್ನು ಈ ಮೂಲಕ ಆಗ್ರಹಪೂರ್ವಕವಾಗಿ ಒತ್ತಾಯಪಡಿಸುತ್ತಿರುವುದಾಗಿ ಹೇಳಿದರು.

ಪ್ರತಿಭಟನೆಯಲ್ಲಿ ಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ದಲಿತ ಹಿರಿಯ ಮುಖಂಡ ಎಚ್.ಕೆ. ಸಂದೇಶ್, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ. ಸೋಮಶೇಖರ್‌, ಹಿರಿಯ ರಂಗಕರ್ಮಿ ಪ್ರಸಾದ್ ರಕ್ಷಿದಿ, ಮಾದಿಗ ದಂಡೋರ ಜಿಲ್ಲಾಧ್ಯಕ್ಷ ಟಿ.ಆರ್‌. ವಿಜಯಕುಮಾರ್‌, ದಸಂಸ ಅಂಬೇಡ್ಕರ್‌ ವಾದ ರಾಜ್ಯ ಸಂಘಟನಾ ಸಂಚಾಲಕ ಈರೇಶ್ ಹಿರೇಹಳ್ಳಿ, ದಲಿತ ಹಿರಿಯ ಮುಖಂಡರು ಕೃಷ್ಣದಾಸ್, ರಾಜಶೇಖರ್, ಡಿಎಚ್‌ಎಸ್ ಸಂಚಾಲಕ ಎಂ.ಜಿ. ಪೃಥ್ವಿ, ಸಂವಿಧಾನ ಓದು ಅಭಿಯಾನದ ರಾಜು ಗೊರೂರು, ಆಜಾದ್ ಟಿಪ್ಪು ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಮುಬಶಿರ್ ಅಹಮದ್, ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ರಮೇಶ್, ಹಿರಿಯ ಕಲಾವಿದ ಗ್ಯಾರಂಟಿ ರಾಮಣ್ಣ ಇತರರು ಉಪಸ್ಥಿತರಿದ್ದರು.ಫೋಟೋ: ಡಾ. ಅಂಬೇಡ್ಕರ್ ಅವರ ಕುರಿತು ಅಪಮಾನಕರ ಮಾತುಗಳನ್ನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ದಲಿತ - ಜನಪರ ಚಳವಳಿಗಳ ಒಕ್ಕೂಟದಿಂದ ಅಣುಕು ಶವಯಾತ್ರೆ ನಡೆಯಿತು.