ಪ್ರತಿ ವರ್ಷ ಶಿವರಾತ್ರಿ, ಯುಗಾದಿ ಮತ್ತು ದೀಪಾವಳಿಯ ಸಂದರ್ಭದಲ್ಲಿ ಮಾದಪ್ಪನ ಭಕ್ತರು ಅರಣ್ಯ ಮಾರ್ಗವಾಗಿ ಪಾದಯಾತ್ರೆಯಲ್ಲಿ ಮಲೆಮಹದೇಶ್ವರ ಬೆಟ್ಟಕ್ಕೆ ಬರುವುದು ಹಿಂದಿನಿಂದ ನಡೆದುಕೊಂಡು ಬಂದಿದೆ. ಭಕ್ತರು ಕಾಲುದಾರಿಯಲ್ಲಿ ಮೆಟ್ಟಿಲೇರಿ ಬರುವ ಮಾರ್ಗದಲ್ಲಿ ಡ್ರೋನ್ ಕ್ಯಾಮೆರಾ ಅಳವಡಿಸಿ ಸತತ ನಿಗಾ ಇಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಸೂಚನೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ, ಚಾಮರಾಜನಗರ

ಪ್ರತಿ ವರ್ಷ ಶಿವರಾತ್ರಿ, ಯುಗಾದಿ ಮತ್ತು ದೀಪಾವಳಿಯ ಸಂದರ್ಭದಲ್ಲಿ ಮಾದಪ್ಪನ ಭಕ್ತರು ಅರಣ್ಯ ಮಾರ್ಗವಾಗಿ ಪಾದಯಾತ್ರೆಯಲ್ಲಿ ಮಲೆಮಹದೇಶ್ವರ ಬೆಟ್ಟಕ್ಕೆ ಬರುವುದು ಹಿಂದಿನಿಂದ ನಡೆದುಕೊಂಡು ಬಂದಿದೆ. ಭಕ್ತರು ಕಾಲುದಾರಿಯಲ್ಲಿ ಮೆಟ್ಟಿಲೇರಿ ಬರುವ ಮಾರ್ಗದಲ್ಲಿ ಡ್ರೋನ್ ಕ್ಯಾಮೆರಾ ಅಳವಡಿಸಿ ಸತತ ನಿಗಾ ಇಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಸೂಚನೆ ನೀಡಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ಅರಣ್ಯ ಮತ್ತು ವನ್ಯಜೀವಿ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಾಲುದಾರಿ, ಮೆಟ್ಟಿಲು ಇರುವ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ, ಹೋಂಗಾರ್ಡ್ಸ್ ಮತ್ತು ಸ್ಥಳೀಯ ಸಿಬ್ಬಂದಿಯ ತಂಡ ರಚಿಸಿ ಭಕ್ತರಿಗೆ ನೆರವಾಗುವ ಅಗತ್ಯವಿದೆ. ಇದಕ್ಕೆ ತಗಲುವ ವೆಚ್ಚವನ್ನು ಭರಿಸುವಂತೆ ಮಲೆ ಮಹದೇಶ್ವರಸ್ವಾಮಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ಮತ್ತು ಜಿಲ್ಲಾಡಳಿತಕ್ಕೆ ಪತ್ರ ಬರೆಯುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು.

ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಂದ ಭಕ್ತರು ಕಾವೇರಿ ನದಿ ದಾಟಿ, ಹನೂರು ತಾಲೂಕಿನ ಬಸವನಕಣಕ್ಕೆ ಬಂದು ಅಲ್ಲಿಂದ ಕಾಡಿನಲ್ಲಿಯೇ ನಡೆದುಕೊಂಡು ಶಾಗ್ಯ, ಡಿಎಂ ಸಮುದ್ರ, ಎಲ್ಲೆಮಾಳ, ಮಲ್ಲಯ್ಯನಪುರ, ಕೌದಳ್ಳಿ, ವಡಕೆಹಳ್ಳ, ಕೋಣನಕೆರೆ, ತಾಳುಬೆಟ್ಟ ಮಾರ್ಗವಾಗಿ ಬೆಟ್ಟಕ್ಕೆ ಬರುತ್ತಾರೆ ಎನ್ನಲಾಗಿದೆ. ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಪಾದಯಾತ್ರೆ ಅಪಾಯಕಾರಿಯಾಗಿದೆ. ಹೀಗಾಗಿ ಭಕ್ತರ ಭಾವನೆಗೆ ಧಕ್ಕೆಯಾಗದಂತೆ ಅವರ ಮನವೊಲಿಸಲು ಸಚಿವರು ಸೂಚಿಸಿದರು.

ರಾತ್ರಿಯ ವೇಳೆ ಕಾಡಿನ ಅಂಚಿನಲ್ಲಿ, ಕಾಡಿನೊಳಗಿರುವ ವಸತಿ ಪ್ರದೇಶದಲ್ಲಿ ಮಲಗುವುದೂ ಅಪಾಯಕಾರಿಯಾಗಿದೆ. ಕಳೆದ ಬುಧವಾರ ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ಪ್ರವೀಣ್ ಎಂಬ ಯುವಕ ಚಿರತೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಹೀಗಾಗಿ ಬಸ್, ಕಾರುಗಳಲ್ಲಿ ತೆರಳಿ ಮಾದಪ್ಪನ ದರ್ಶನ ಪಡೆಯುವಂತೆ ಭಕ್ತರ ಮನವೊಲಿಸಲು ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಮತ್ತು ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಒಳಗೊಂಡ ತಂಡ ರಚಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಯವರಿಗೆ ಟಿಪ್ಪಣಿ ಕಳಿಸಿರುವುದಾಗಿ ತಿಳಿಸಿದರು.

ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ.ರೇ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.