ಕನ್ನಡಪ್ರಭ ವಾರ್ತೆ ಗುಳೇದಗುಡ್ಡ

ತಾಲೂಕಿನಾದ್ಯಂತ ಮುಂಗಾರು ಮಳೆ ಕೈಕೊಟ್ಟಿದೆ. ಇದರಿಂದ ತಾಲೂಕಿನ ಕೆಲ ಗ್ರಾಮಗಳಲ್ಲಿ ಮೆಕ್ಕೆಜೋಳ ಸೇರಿದಂತೆ ವಿವಿಧ ಬೆಳೆಗಳು ಒಣಗಲಾರಂಭಿಸಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ನಷ್ಟದಿಂದ ರೈತರು ಆತಂಕಗೊಂಡಿದ್ದು, ಸರ್ಕಾರ ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಅಲ್ಲದೇ, ಎಕರೆಗೆ ₹ 40 ಸಾವಿರ ಪರಿಹಾರ ನೀಡಬೇಕೆಂದು ರೈತರು ಆಗ್ರಹಿಸಿದ್ದಾರೆ.

ತಾಲೂಕಿನಲ್ಲಿ ರೈತರು ಮಳೆಯನ್ನು ನಂಬಿಕೊಂಡು ಭೂಮಿ ಉಳುಮೆ ಮಾಡಿ, ಎಕರೆಗೆ ಸುಮಾರು ₹ 30 ಸಾವಿರಕ್ಕೂ ಹೆಚ್ಚು ವೆಚ್ಚದಲ್ಲಿ ಮೆಕ್ಕೆಜೋಳ, ತೊಗರಿ, ಸೂರ್ಯಕಾಂತಿ, ಹೆಸರು ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದಿದ್ದಾರೆ. ಆದರೆ ಬಿತ್ತನೆ ಮಾಡಿ ತಿಂಗಳು ಕಳೆದರೂ ಸಮರ್ಪಕ ಮಳೆಯಾಗಿಲ್ಲ. ಬೆಳೆಗಳು ಒಣಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ತಾಲೂಕಿನಲ್ಲಿ ಮುಂಗಾರು ಹಂಗಾಮಿಗೆ ಸುಮಾರು 14,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದ್ದು, ಇದುವರೆಗೆ ಸುಮಾರು 11,200 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಪೂರ್ಣಗೊಂಡಿದೆ. ಆದರೆ, ಮಳೆ ಕೊರತೆಯಿಂದ ಬಹುತೇಕ ಬೆಳೆಗಳು ಒಣಗುತ್ತಿವೆ. ಬೆಳೆ ನಷ್ಟದ ಜೊತೆಗೆ ದನ-ಕರುಗಳಿಗೆ ಕುಡಿಯುವ ನೀರು ಹಾಗೂ ಮೇವಿನ ಕೊರತೆಯ ಭೀತಿಯೂ ಎದುರಾಗಿದ್ದು, ಪರಿಸ್ಥಿತಿ ಗಂಭೀರವಾಗುವ ಆತಂಕ ವ್ಯಕ್ತವಾಗಿದೆ. ಹೀಗಾಗಿ, ರೈತರು ಮುಂದಿನ ಹಂಗಾಮಿನ ಕೃಷಿ ಚಟುವಟಿಕೆ ನಡೆಸುವುದು ಹೇಗೆ ಎಂಬ ಚಿಂತೆಯಲ್ಲಿದ್ದಾರೆ.ಈ ಹಿನ್ನೆಲೆಯಲ್ಲಿ ಗುಳೇದಗುಡ್ಡ ತಾಲೂಕಿನ ಗ್ರಾಮಗಳನ್ನು ಸರ್ಕಾರ ತಕ್ಷಣ ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು. ಬಿತ್ತನೆ ಮಾಡಿ ನಷ್ಟ ಅನುಭವಿಸುತ್ತಿರುವ ರೈತರಿಗೆ ಎಕರೆಗೆ ₹ 40 ಸಾವಿರ ಪರಿಹಾರ, ಕೃಷಿ ಸಾಲ ಮರುಪಾವತಿಗೆ ವಿನಾಯಿತಿ, ಬೆಳೆ ವಿಮೆ ಪರಿಹಾರವನ್ನು ಶೀಘ್ರ ಬಿಡುಗಡೆ ಸೇರಿದಂತೆ ಅಗತ್ಯ ನೆರವು ನೀಡಬೇಕು ಎಂದು ರೈತರು ಹಾಗೂ ರೈತ ಸಂಘಟನೆಗಳು ಒತ್ತಾಯಿಸಿವೆ.

------ಕೋಟ್‌ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿವೆ. ರೈತರು ಯೂರಿಯಾ ಮತ್ತು ಡಿಎಪಿ ಗೊಬ್ಬರಗಳನ್ನು ಅತಿಯಾಗಿ ಬಳಸುವುದನ್ನು ತಪ್ಪಿಸಿ, ಬೆಳೆ ಮತ್ತು ಮಣ್ಣಿನ ಸ್ಥಿತಿಗೆ ಅನುಗುಣವಾಗಿ ಸಮತೋಲಿತ ಗೊಬ್ಬರಗಳನ್ನು ಬಳಸಬೇಕು. ಉತ್ತಮ ಮಳೆಯಾದರೆ ಬೆಳೆ ಚೇತರಿಸಿಕೊಳ್ಳುವ ಸಾಧ್ಯತೆ ಇದೆ.ಆನಂದ ಗೌಡರ, ತಾಲೂಕು ಕೃಷಿ ಅಧಿಕಾರಿ ಗುಳೇದಗುಡ್ಡ.