ಯುವವಾಹಿನಿ ಮೂಡುಬಿದಿರೆ ಘಟಕ, ಆಳ್ವಾಸ್ ಪುನರ್ಜನ್ಮ ಮದ್ಯ-ಮಾದಕ ವಸ್ತು ವ್ಯಸನ ಮುಕ್ತಿ ಹಾಗೂ ಮನೋರೋಗ ಚಿಕಿತ್ಸಾ ಕೇಂದ್ರ, ಮಿಜಾರು ಮತ್ತು ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಶೋಭಾವನ, ಮಿಜಾರು ಸಹಯೋಗದಲ್ಲಿ ‘ವಿದ್ಯಾರ್ಥಿ ಮನೋಹಿತ’ ಆರೋಗ್ಯ ಮಾಹಿತಿ ಕಾರ್ಯಾಗಾರ ಜ್ಯೋತಿನಗರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿರೀಶ್ ಕೋಟ್ಯಾನ್ ಮಾರೂರು ಅಧ್ಯಕ್ಷತೆಯಲ್ಲಿ ನಡೆಯಿತು.
ಮೂಡುಬಿದಿರೆ: ಯುವವಾಹಿನಿ ಮೂಡುಬಿದಿರೆ ಘಟಕ, ಆಳ್ವಾಸ್ ಪುನರ್ಜನ್ಮ ಮದ್ಯ-ಮಾದಕ ವಸ್ತು ವ್ಯಸನ ಮುಕ್ತಿ ಹಾಗೂ ಮನೋರೋಗ ಚಿಕಿತ್ಸಾ ಕೇಂದ್ರ, ಮಿಜಾರು ಮತ್ತು ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಶೋಭಾವನ, ಮಿಜಾರು ಸಹಯೋಗದಲ್ಲಿ ‘ವಿದ್ಯಾರ್ಥಿ ಮನೋಹಿತ’ ಆರೋಗ್ಯ ಮಾಹಿತಿ ಕಾರ್ಯಾಗಾರ ಜ್ಯೋತಿನಗರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿರೀಶ್ ಕೋಟ್ಯಾನ್ ಮಾರೂರು ಅಧ್ಯಕ್ಷತೆಯಲ್ಲಿ ನಡೆಯಿತು.ಮುಖ್ಯೋಪಾಧ್ಯಾಯಿನಿ ಆಪೋಲೀನೋ ಮೋನಿಸ್ ಉದ್ಘಾಟಿಸಿ ಸ್ವಾಗತಿಸಿದರು. ಆಳ್ವಾಸ್ ಪುನರ್ಜನ್ಮ ಕೇಂದ್ರದ ಆಪ್ತ ಸಮಾಲೋಚಕ ಲೋಹಿತ್ ಬಂಟ್ವಾಳ ಮಾತನಾಡಿ, ಮದ್ಯ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ದುಷ್ಪರಿಣಾಮಗಳನ್ನು ಉದಾಹರಣೆಗಳೊಂದಿಗೆ ವಿವರಿಸಿದರು. ಮಾನಸಿಕ ಒತ್ತಡವನ್ನು ಸಕಾರಾತ್ಮಕವಾಗಿ ಎದುರಿಸುವುದು, ಉತ್ತಮ ಸ್ನೇಹ ಬಳಗವನ್ನು ಆಯ್ಕೆ ಮಾಡಿಕೊಳ್ಳುವುದು ಹಾಗೂ ವ್ಯಸನಗಳಿಂದ ದೂರವಿರುವುದು ಆರೋಗ್ಯಕರ ಜೀವನದ ಮೂಲಮಂತ್ರ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಅಸೋಸಿಯೇಟ್ ಪ್ರೊಫೆಸರ್ ಮಹಾಲಸ ಕಾಂತಿ ಹೋಮಿಯೋಪಥಿ ಚಿಕಿತ್ಸಾ ಪದ್ಧತಿಯ ವೈಶಿಷ್ಟ್ಯ, ‘‘ಸಮಾನರು ಸಮಾನರನ್ನು ಗುಣಪಡಿಸುತ್ತಾರೆ” ಎಂಬ ಅದರ ಮೂಲ ತತ್ವ ಹಾಗೂ ಅಡ್ಡಪರಿಣಾಮಗಳಿಲ್ಲದ ಚಿಕಿತ್ಸೆಯ ಮಹತ್ವವನ್ನು ವಿವರಿಸಿದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಕ್ರೀಡಾ ನಿರ್ದೇಶಕ ಶಂಕರ್ ಎ. ಕೋಟ್ಯಾನ್ ಮಾತನಾಡಿ, ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ವ್ಯಸನದ ಜಾಲ ವಿಸ್ತರಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇಂತಹ ಜಾಗೃತಿ ಕಾರ್ಯಕ್ರಮಗಳು ಯುವ ಪೀಳಿಗೆಯನ್ನು ಸರಿ ದಾರಿಯಲ್ಲಿ ಮುನ್ನಡೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳು ತಮ್ಮ ಜೀವನದ ಗುರಿಯನ್ನು ಸ್ಪಷ್ಟವಾಗಿಟ್ಟುಕೊಂಡು ಉತ್ತಮ ಪ್ರಜೆಗಳಾಗಿ ಸಮಾಜಕ್ಕೆ ಮಾದರಿಯಾಗಬೇಕು ಎಂದು ಹೇಳಿದರು.
ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ಮಾತನಾಡಿ, ಯುವವಾಹಿನಿ ಮೂಡುಬಿದಿರೆ ಘಟಕವು ಶಿಕ್ಷಣ, ಆರೋಗ್ಯ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ತಾಲೂಕಿನ ವಿವಿಧ ಶಾಲೆಗಳಲ್ಲೂ ಇದೇ ಮಾದರಿಯ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜನೆ ಹೊಂದಿದೆ ಎಂದರು.ಉಮೇಶ್ ಕೋಟ್ಯಾನ್, ಜಯಶೀಲಾ ಎಸ್. ಪೂಜಾರಿ, ರತ್ನಾವತಿ, ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಮನೀಷಾ ನಿರೂಪಿಸಿದ್ದು, ಗ್ರೇಸಿ ಡಿಸೋಜ ವಂದಿಸಿದರು.