ಮಠಗಳಿಂದ ಸಂಸ್ಕಾರಯುತ ಶಿಕ್ಷಣಕ್ಕೆ ಹೆಚ್ಚು ಒತ್ತು: ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀ

| Published : Oct 22 2024, 12:30 AM IST

ಮಠಗಳಿಂದ ಸಂಸ್ಕಾರಯುತ ಶಿಕ್ಷಣಕ್ಕೆ ಹೆಚ್ಚು ಒತ್ತು: ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀ
Share this Article
  • FB
  • TW
  • Linkdin
  • Email

ಸಾರಾಂಶ

ಮೇಲಣಗವಿ ಮಠದ ಡಾ.ಶ್ರೀ ಮಲಯ ಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ, ವನಕಲ್ಲು ಮಠದ ಡಾ.ಶ್ರೀ ಬಸವರಮಾನಂದ ಸ್ವಾಮೀಜಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರು ಹಾಗೂ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರನ್ನು ಹಳೆ ವಿದ್ಯಾರ್ಥಿಗಳು ಸನ್ಮಾನಿಸಿ ಗೌರವಿಸಿದರು.

ಕನ್ನಡಪ್ರಭ ವಾರ್ತೆ ದಾಬಸ್‌ಪೇಟೆ

ಮಕ್ಕಳಿಗೆ ಉತ್ತಮ ಸಂಸ್ಕಾರ ಶಿಕ್ಷಣ ನೀಡಿದರೆ ಅದು ಸಮಾಜಕ್ಕೆ ನೀಡಿದ ಅತಿದೊಡ್ಡ ಕೊಡುಗೆಯಾಗುತ್ತದೆ, ಮಠಗಳು ಸಂಸ್ಕಾರಯುತ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತವೆ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ತಿಳಿಸಿದರು.

ಶಿವಗಂಗೆಯ ಹೊನ್ನಮ್ಮಗವಿ ಮಠದಲ್ಲಿ ಹಮ್ಮಿಕೊಂಡಿದ್ದ ಲಿಂ.ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿಯವರ 19ನೇ ವರ್ಷದ ಸ್ಮರಣೋತ್ಸವ ಹಾಗೂ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಭಾಗದ ಶಿಕ್ಷಣದ ಕೊರತೆಯನ್ನು ನಿವಾರಿಸಲು ಸಂಸ್ಕಾರಯುತ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ ಕೀರ್ತಿ ಲಿಂ.ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿಯವರಿಗೆ ಸಲ್ಲುತ್ತದೆ. ಸಮಾಜಕ್ಕೆ ಬದುಕಿದವರನ್ನು ಸಮಾಜ ಯಾವಾಗಲೂ ಸ್ಮರಿಸುತ್ತದೆ. ಅಂತಹವರಲ್ಲಿ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿಯೂ ಒಬ್ಬರಾಗಿದ್ದಾರೆ ಎಂದರು.

ಹಳೆಯ ವಿದ್ಯಾರ್ಥಿಗಳು ಸಂಸ್ಥೆಯ ಬೆನ್ನೆಲುಬಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಎತ್ತರಕ್ಕೆ ಬೆಳೆದಿದ್ದರೂ ತಾವು ಓದಿದ ಶಾಲೆಯನ್ನು ಮರೆಯುವುದಿಲ್ಲ. ಶಿಕ್ಷಕರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಶಿಕ್ಷಕರು ಸಮಾಜಕ್ಕೆ ತಮ್ಮನ್ನು ತಾವು ತೊಡಗಿಸಿಕೊಂಡು ಕೆಲಸ ಮಾಡುತ್ತಾ ಬರುತ್ತಿದ್ದಾರೆ ಎಂದರು.

ಹೊನ್ನಮ್ಮಗವಿ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಲಿಂಗೈಕ್ಯ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ನಮ್ಮನ್ನು ಅಗಲಿ 19 ವರ್ಷಗಳು ಕಳೆದಿದ್ದರೂ ಅವರ ನೆನೆಪು ಮಾತ್ರ ಶಾಶ್ವತವಾಗಿದೆ. ಕೃಷಿ ಕಾಯಕದಿಂದ ಮಠವನ್ನು ಬೆಳೆಸಿದ್ದಾರೆ. ಅನಾರೋಗ್ಯ ಸಂದರ್ಭದಲ್ಲಿಯೂ ಸಹ ಯಾರನ್ನೂ ಆಶ್ರಯಿಸದೆ ಮಠವನ್ನು ಬೆಳೆಸಿದರು. ಶ್ರೀಮಠವೂ ಲಿಂ.ಶಿವಕುಮಾರ ಸ್ವಾಮೀಜಿಯವರ ಆಶೀರ್ವಾದದಿಂದ ಈ ಮಟ್ಟಕ್ಕೆ ಬೆಳೆದಿದ್ದು, ನಮ್ಮ ಮಠದ ಜಮೀನಿನ ಪೈಕಿ ಮೂರು ಎಕರೆ ಜಮೀನನ್ನು ಸಿದ್ದಗಂಗಾ ಮಠಕ್ಕೆ ನೀಡಲು ನಿಶ್ಚಯಿಸಿದ್ದೇವೆ ಎಂದರು.

ಮೇಲಣಗವಿ ಮಠದ ಡಾ.ಶ್ರೀ ಮಲಯ ಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ, ವನಕಲ್ಲು ಮಠದ ಡಾ.ಶ್ರೀ ಬಸವರಮಾನಂದ ಸ್ವಾಮೀಜಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರು ಹಾಗೂ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರನ್ನು ಹಳೆ ವಿದ್ಯಾರ್ಥಿಗಳು ಸನ್ಮಾನಿಸಿ ಗೌರವಿಸಿದರು.

ಬಸವಣ್ಣ ದೇವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಕಂಬಾಳು ಮಠದ ಶ್ರೀ ಚನ್ನವೀರ ಶಿವಾಚಾರ್ಯ ಸ್ವಾಮೀಜಿ, ತಮ್ಮಡಿಹಳ್ಳಿ ಮಠದ ಶ್ರೀಗಳು, ತ್ಯಾಮಗೊಂಡ್ಲು ಕಾಲುವೆ ಮಠದ ಶ್ರೀಗಳು, ತಣ್ಣೀರುಹಳ್ಳಿ ಮಠದ ಶ್ರೀ ವಿಜಯಕುಮಾರ ಸ್ವಾಮೀಜಿ, ಗ್ರಾಪಂ ಮಾಜಿ ಅಧ್ಯಕ್ಷ ರಾಜೇಂದ್ರ, ಉದ್ಯಮಿ ಕಾಶಿನಾಥ್, ಅಭಾವಿಮ ಮಹಿಳಾ ಘಟಕದ ಪದಾಧಿಕಾರಿಗಳಾದ ರಾಜಮ್ಮ, ವೇದಾವತಿ, ಮಂಜುಳ ಸೇರಿದಂತೆ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು.