ಸಾರಾಂಶ
ಇತರ ನವೀಕರಿಸಬಹುದಾದ ಇಂಧನಗಳ ತಾಂತ್ರಿಕತೆಯ ಬಗ್ಗೆ ತರಬೇತಿ ಕಾರ್ಯಕ್ರಮ ಆರಂಭವಾಯಿತು. 70ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕನ್ನಡಪ್ರಭ ವಾರ್ತೆ ಮಣಿಪಾಲ
ಇಲ್ಲಿನ ಭಾರತೀಯ ವಿಕಾಸ ಟ್ರಸ್ಟ್ (ಬಿವಿಟಿ) ವತಿಯಿಂದ ಬೆಂಗಳೂರಿನ ಮಹಾತ್ಮಾ ಗಾಂಧೀ ಗ್ರಾಮೀಣ ಇಂಧನ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಮಣಿಪಾಲ ಸರ್ಕಾರಿ ಪಾಲಿಟೆಕ್ನಿಕ್ ಆಶ್ರಯದಲ್ಲಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ 3 ದಿನಗಳ ಸೌರಶಕ್ತಿ ಮತ್ತು ಇತರ ನವೀಕರಿಸಬಹುದಾದ ಇಂಧನಗಳ ತಾಂತ್ರಿಕತೆಯ ಬಗ್ಗೆ ತರಬೇತಿ ಕಾರ್ಯಕ್ರಮ ಮಂಗಳವಾರ ಆರಂಭವಾಯಿತು.ತರಬೇತಿಯನ್ನು ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲೆ ಸಹನಾ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸೌರ ಶಕ್ತಿ ಕ್ಷೇತ್ರದಲ್ಲಿ ಸ್ವ-ಉದ್ಯೋಗದ ಅವಕಾಶಗಳು ಹೆಚ್ಚಾಗುತ್ತಿದ್ದು, ತಾಂತ್ರಿಕತೆಯ ಮಾಹಿತಿ ಉಳ್ಳ ಮಾನವ ಸಂಪನ್ಮೂಲದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಇಂತಹ ತರಬೇತಿಗಳು ಯುವ ಜನರಿಗೆ ಉದ್ಯೋಗ ಅಥವಾ ಸ್ವ-ಉದ್ಯೋಗ ಕೈಗೊಳ್ಳಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಇದಕ್ಕೆ ಮೊದಲು ಬಿವಿಟಿಯ ಮುಖ್ಯ ವ್ಯವಸ್ಥಾಪಕ ಮನೋಹರ ಕಟ್ಗೇರಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಇನ್ನೋರ್ವ ಅತಿಥಿ ಮಹಾತ್ಮಗಾಂಧಿ ಗ್ರಾಮೀಣ ಇಂಧನ ಸಂಸ್ಥೆಯ ಅಧಿಕಾರಿ ರವಿ ಕೆ. ಅವರು ತರಬೇತಿಯ ಧ್ಯೇಯೋದ್ದೇಶಗಳ ಬಗ್ಗೆ ಮಾಹಿತಿ ನೀಡಿದರು.ವೇದಿಕೆಯಲ್ಲಿ ಕಾಲೇಜಿನ ಪ್ಲೇಸ್ಮೆಂಟ್ ಅಧಿಕಾರಿ ಮಂಜುನಾಥ ಪ್ರಸಾದ್, ಕಂಪ್ಯೂಟರ್ ವಿಜ್ಞಾನ ವಿಭಾಗಾಧಿಕಾರಿ ಸುರೇಶ್, ಸಿವಿಲ್ ವಿಭಾಗಾಧಿಕಾರಿ ದತ್ತಾತ್ರೇಯ ಪಟಗಾರ್, ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗಾಧಿಕಾರಿ ಅಶ್ವಿನಿ ಕೆ. ಉಪಸ್ಥಿತರಿದ್ದರು. ಪ್ರಾಧ್ಯಾಪಕಿ ವಂದನಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ತರಬೇತಿಯಲ್ಲಿ 70ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ.