ಕನ್ನಡಪ್ರಭ ವಾರ್ತೆ ಬೆಂಗಳೂರು

ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಬಿ.ಎಂ.ನಾಗರಾಜ್‌, ಹಂಪನಗೌಡ ಬಾದರ್ಲಿ ಸೇರಿ 8ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್‌ ಶಾಸಕರು, ಪರಿಷತ್‌ ಸದಸ್ಯರು ಮಂಗಳವಾರ ರಾತ್ರಿ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.

ಎರಡು ಹಂತದಲ್ಲಿ ಮಂಗಳವಾರ ಹಾಗೂ ಬುಧವಾರ 20ಕ್ಕೂ ಹೆಚ್ಚು ಮಂದಿ ಶಾಸಕರು ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಲಿದ್ದಾರೆ ಎಂದು ಹೇಳಲಾಗಿತ್ತು. ಅದರಂತೆ ಮೊದಲ ದಿನ 8ಕ್ಕೂ ಹೆಚ್ಚು ಮಂದಿ ಶಾಸಕರು, ಪರಿಷತ್‌ ಸದಸ್ಯರು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಸ್ಟ್ರೇಲಿಯಾಗೆ ಹಾರಿದ್ದಾರೆ.

ಈ ವೇಳೆ ಮಾತನಾಡಿದ ಪುಟ್ಟರಂಗಶೆಟ್ಟಿ, ವಿದೇಶ ಪ್ರವಾಸ ಹೋಗಲು ಹೈಕಮಾಂಡ್‌ ಅನುಮತಿ ಬೇಕಾಗಿಲ್ಲ. ನಾನು ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದೇನೆ. ಯಾರೆಲ್ಲಾ ಬರುತ್ತಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷರಿಗೆ ಮಾಹಿತಿ ನೀಡಿದ್ದೀರಾ ಎಂಬ ಪ್ರಶ್ನೆಗೆ, ‘ಮುಖ್ಯಮಂತ್ರಿಗೇ ಹೇಳಿಲ್ಲ, ಇನ್ನು ಉಪಮುಖ್ಯಮಂತ್ರಿಗೆ ಯಾಕೆ ಹೇಳಬೇಕು?’ ಎಂದು ಪ್ರಶ್ನಿಸಿದರು.


ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ಸಿರಗುಪ್ಪ ಶಾಸಕ ಬಿ.ಎಂ. ನಾಗರಾಜ್‌, ಪರಿಷತ್‌ ಸದಸ್ಯರಾದ ನಾಗರಾಜ್‌ ಯಾದವ್, ವಸಂತ ಕುಮಾರ್ ಸೇರಿ ಹಲವು ಮಂದಿ ವಿದೇಶ ಪ್ರವಾಸಕ್ಕೆ ತೆರಳಿದರು ಎಂದು ಮೂಲಗಳು ತಿಳಿಸಿವೆ.