ಬೆಳಗಿನ ನಡೆ- ಗ್ರಾಮಗಳ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲ ರಾವ್ ಅವರು ಜಿಲ್ಲೆಯ ಚನ್ನಗಿರಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ, ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಹಾಗೂ ಸಾರ್ವಜನಿಕ ಸೌಲಭ್ಯಗಳ ಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿದ್ದಾರೆ.

- ಹೆಬ್ಬಳಗೆರೆ, ಬುಸ್ಸೆನಹಳ್ಳಿ, ಬುಳ್ಳಸಾಗರದಲ್ಲಿ ಕಾಮಗಾರಿ ಪ್ರಗತಿ ಪರಿಶೀಲನೆ, ಅಹವಾಲು ಸ್ವೀಕಾರ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಬೆಳಗಿನ ನಡೆ- ಗ್ರಾಮಗಳ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲ ರಾವ್ ಅವರು ಜಿಲ್ಲೆಯ ಚನ್ನಗಿರಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ, ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಹಾಗೂ ಸಾರ್ವಜನಿಕ ಸೌಲಭ್ಯಗಳ ಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿದರು.

ಹೆಬ್ಬಳಗೆರೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಅವರು, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪೂರೈಸಿರುವ ಔಷಧಿಗಳ ಲಭ್ಯತೆ ಹಾಗೂ ಮೂಲ ಸೌಕರ್ಯಗಳನ್ನು ಪರಿಶೀಲಿಸಿದರು. ಬಳಿಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶಾಲಾ ಕಟ್ಟಡ, ಅಡಿಗೆ ಕೋಣೆ ಹಾಗೂ ಆಹಾರ ಧಾನ್ಯಗಳ ಗುಣಮಟ್ಟವನ್ನು ಪರಿಶೀಲಿಸಿದರು. ಗ್ರಂಥಾಲಯಕ್ಕೆ ಭೇಟಿ ನೀಡಿ ಗ್ರಾಮಸ್ಥರಲ್ಲಿ ಗ್ರಂಥಾಲಯದ ಬಳಕೆ ಕುರಿತು ಜಾಗೃತಿ ಮೂಡಿಸುವಂತೆ ಸೂಚನೆ ನೀಡಿದರು.

ಸ್ಥಳೀಯರು ತಿಳಿಸಿದ ಚರಂಡಿ ಸಮಸ್ಯೆಗಳನ್ನು ಆಲಿಸಿ, ಗ್ರಾಮದ ಚರಂಡಿಗಳ ಸ್ವಚ್ಛತೆಯನ್ನು ಕಾಪಾಡುವಂತೆ ಸಂಬಂಧಿಸಿದವರಿಗೆ ಸೂಚನೆ ನೀಡಿದರು. ಜೊತೆಗೆ ಗ್ರಾಮದ ಸ್ಮಶಾನಕ್ಕೆ ಭೇಟಿ ನೀಡಿ ಸರ್ವೆ ನಡೆಸುವಂತೆ ಸೂಚಿಸಿದರು. ಬಳಿಕ ಘನಜ್ಯ ವಿಲೇವಾರಿ ಘಟಕವನ್ನು ಪರಿಶೀಲಿಸಿದರು.

ಬುಸ್ಸೆನಹಳ್ಳಿ ಗ್ರಾಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಕ್ಕೆ ಭೇಟಿ ನೀಡಿದ ಸಿಇಒ ಅವರು, ಮಕ್ಕಳ ಹಾಜರಾತಿ, ಮೂಲ ಸೌಕರ್ಯಗಳು ಹಾಗೂ ಆಹಾರ ಧಾನ್ಯಗಳ ಸ್ಥಿತಿಯನ್ನು ಪರಿಶೀಲಿಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಮಕ್ಕಳೊಂದಿಗೆ ಆತ್ಮೀಯವಾಗಿ ತಿಂಡಿ ಸೇವಿಸುವ ಮೂಲಕ ಅವರ ಸಮಸ್ಯೆಗಳು ಹಾಗೂ ಅಗತ್ಯಗಳನ್ನು ಆಲಿಸಿದರು.

ಬುಳ್ಳಸಾಗರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು, ನಂತರ ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಾರ್ವಜನಿಕ ಸೇವೆಗಳ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಅಗತ್ಯ ಮಾರ್ಗದರ್ಶನ ಹಾಗೂ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಇತರೆ ಇಲಾಖೆಗಳ ಅಧಿಕಾರಿಗಳು, ಗ್ರಾಮಸ್ಥರು ಇದ್ದರು.

- - -

(ಬಾಕ್ಸ್‌)

* ಪಶು ಆಸ್ಪತ್ರೆ ಸ್ಥಾಪನೆಗೆ ಮನವಿ

ಅಗರ ಬನ್ನಿಹಟ್ಟಿ ಗ್ರಾಮ ಪಂಚಾಯಿತಿಗೆ ಜಿಪಂ ಸಿಇಒ ಭೇಟಿ ನೀಡಿ ಪಂಚಾಯಿತಿಯಲ್ಲಿರುವ ಕುಡಿಯುವ ನೀರಿನ ಪರೀಕ್ಷಾ ಯಂತ್ರವನ್ನು ಪರಿಶೀಲಿಸಿದರು. ಅಲ್ಲಿನ ಗ್ರಂಥಾಲಯಕ್ಕೆ ಭೇಟಿ ನೀಡಿ ಹಾಜರಾತಿ ಪರಿಶೀಲನೆ ನಡೆಸಿ, ಗ್ರಾಮಸ್ಥರಲ್ಲಿ ಗ್ರಂಥಾಲಯದ ಮಹತ್ವದ ಕುರಿತು ಜಾಗೃತಿ ಮೂಡಿಸುವಂತೆ ಸೂಚಿಸಿದರು. ಈ ಸಂದರ್ಭ ಸ್ಥಳೀಯರು ಗ್ರಾಮಕ್ಕೆ ಪಶು ಆಸ್ಪತ್ರೆ ಸ್ಥಾಪನೆ ಕುರಿತು ಮನವಿ ಸಲ್ಲಿಸಿದರು. ಅನಂತರ ಅಂಗನವಾಡಿ ಕೇಂದ್ರ ಹಾಗೂ ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭ ಔಷಧಿಗಳ ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಸಂಬಂಧಪಟ್ಟವರಿಗೆ ಸೂಚಿಸಿದರು.

- - -

-4ಕೆಡಿವಿಜಿ31, 32, 33.ಜೆಪಿಜಿ:

ಚನ್ನಗಿರಿ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಪಂ ಸಿಇಒ ಭೇಟಿ ನೀಡಿ ಕಾಮಗಾರಿಗಳ ಪ್ರಗತಿ ಹಾಗೂ ಸಾರ್ವಜನಿಕ ಸೌಲಭ್ಯಗಳ ಸ್ಥಿತಿಗಳನ್ನು ಪರಿಶೀಲಿಸಿದರು.