ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಸ್ತನ್ಯಪಾನ ಅದೊಂದು ನೈಸರ್ಗಿಕ ಕ್ರಿಯೆ. ತಾಯಿ ಎದೆಹಾಲಿನಿಂದ ಮಗುವಿಗೆ ಪೌಷ್ಠಿಕತೆ ದೊರೆಯುವುದರ ಜೊತೆಗೆ ರೋಗನಿರೋಧಕ ಶಕ್ತಿ ಲಭ್ಯವಾಗುತ್ತದೆ. ಆದ್ದರಿಂದ ತಾಯಿ ಎದೆಹಾಲು ಅಮೃತಕ್ಕೆ ಸಮನಾದದ್ದು ಎಂದು ಸ್ತನ್ಯಪಾನ ಸ್ನೇಹಿ ಆಸ್ಪತ್ರೆಯ ಕಾರ್ಯಾಧ್ಯಕ್ಷ ಮತ್ತು ಮೆಡಿಕಲ್ ಕಾಲೇಜ್ ಪ್ರಾಚಾರ್ಯ ಡಾ.ಭುವನೇಶ್ವರಿ ಯಳಮಲಿ ಅಭಿಪ್ರಾಯಪಟ್ಟರು. ಬಿವಿವಿ ಸಂಘದ ಎಸ್.ನಿಜಲಿಂಗಪ್ಪ ಮೆಡಿಕಲ್ ಕಾಲೇಜ್ ಮತ್ತು ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಯ ಚಿಕ್ಕಮಕ್ಕಳ ವಿಭಾಗದಲ್ಲಿ ಆಯೋಜಿಸಿದ್ದ ವಿಶ್ವಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು. ಹಾನಗಲ್ಲ ಕುಮಾರೇಶ್ವರ ಆಸ್ಪತ್ರೆಯಲ್ಲಿ ಸ್ತನ್ಯಪಾನವನ್ನು ಉತ್ತೇಜಿಸಲು ಕೈಗೊಳ್ಳಲಾದ ವಿಶೇಷ ಕಾರ್ಯಕ್ರಮಗಳು ಮತ್ತು ಯೋಜನೆಗಳಿಂದಾಗಿ ಆಸ್ಪತ್ರೆಗೆ ಸ್ತನ್ಯಪಾನಸ್ನೇಹಿ ಆಸ್ಪತ್ರೆ ಎಂದು ರಾಷ್ಟ್ರೀಯ ಮಾನ್ಯತಾ ಕೇಂದ್ರದಿಂದ ಮಾನ್ಯತೆ ದೊರೆತಿದೆ. ಆಸ್ಪತ್ರೆಯಲ್ಲಿ ಸ್ತನ್ಯಪಾನದ ಮಹತ್ವ ಮತ್ತು ಅದರಿಂದಾಗುವ ಪ್ರಯೋಜನಗಳ ಕುರಿತು ತಾಯಿಂದಿರಿಗೆ ಅರಿವು ಮೂಡಿಸಲಾಗುತ್ತಿದೆ. ಈ ಉದ್ದೇಶಕ್ಕಾಗಿ ವೈದ್ಯಕೀಯ ವಿದ್ಯಾರ್ಥಿಗಳಿಂದ ಕಿರುನಾಟಕ ಪ್ರದರ್ಶನಗಳನ್ನು ಏರ್ಪಡಿಸಲಾಗುತ್ತಿದೆ. ಒಟ್ಟಾರೆ ಸ್ತನ್ಯಪಾನದಿಂದ ತಾಯಿ ಮತ್ತು ಶಿಶುವಿನ ಆರೋಗ್ಯ ಉತ್ತಮಗೊಳ್ಳುತ್ತದೆ ಎಂದರು. ಇದೇ ವೇಳೆ ಸ್ತನ್ಯಪಾನ ಸ್ನೇಹಿ ಆಸ್ಪತ್ರೆಯ ಕಾರ್ಯಾಧ್ಯಕ್ಷ ಡಾ.ಅಶೋಕ ಬಡಕಲಿ ಮತ್ತು ಕಾರ್ಯದರ್ಶಿ ಡಾ.ರಮೇಶ ಪೋಳ ತಾಯಿ ಎದೆಹಾಲಿನ ಮಹತ್ವ ಹಾಗೂ ಮಗು ಜನಿಸಿದ ಒಂದು ಗಂಟೆಯೊಳಗೆ ಸ್ತನ್ಯಪಾನ ಆರಂಭಿಸುವ ಅಗತ್ಯತೆ ಕುರಿತು ಮಾತನಾಡಿದರು.

ಕಾರ್ಯಕ್ರಮದ ಅಂಗವಾಗಿ ವೈದ್ಯಕೀಯ ವಿದ್ಯಾರ್ಥಿಗಳಿಂದ ಚಿಕ್ಕಮಕ್ಕಳ ವಿಭಾಗ ಮತ್ತು ಗರ್ಭಿಣಿಯರ ಹೊರರೋಗಿಗಳ ವಿಭಾಗದಲ್ಲಿ ಸ್ತನ್ಯಪಾನದ ಜಾಗೃತಿ ಕುರಿತು ಸಮಾಲೋಚನೆ ಹಾಗೂ ಅರಿವು ಮೂಡಿಸುವ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಸ್ತನ್ಯಪಾನ ಸಪ್ತಾಹದ ಅಂಗವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಾಯಿಂದಿರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗಾಗಿ ಉಪನ್ಯಾಸಗಳನ್ನು ಆಯೋಜಿಸಲಾಗಿತ್ತು. ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಸ್ತ್ರೀರೋಗ ವಿಭಾಗದ ಮುಖ್ಯಸ್ಥೆ ಡಾ.ಆಶಾಲತಾ ಮಲ್ಲಾಪೂರ, ಚಿಕ್ಕಮಕ್ಕಳ ವಿಭಾಗದ ಮುಖ್ಯಸ್ಥ ಡಾ.ಅಶೋಕ ಬಡಕಲಿ, ಚಿಕ್ಕಮಕ್ಕಳ ತಜ್ಞ ಡಾ.ರಮೇಶ ಪೋಳ, ಚಿಕ್ಕಮಕ್ಕಳ ವೈದ್ಯರು, ಸ್ನಾತಕೋತ್ತರ ಮತ್ತು ಸ್ನಾತಕ ವಿದ್ಯಾರ್ಥಿಗಳು, ತಾಯಿಂದಿರು, ಗರ್ಭಿಣಿಯರು ಉಪಸ್ಥಿತರಿದ್ದರು.