ಮಗಳನ್ನು ಉಸಿರುಗಟ್ಟಿಸಿ ಕೊಂದ ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ವೈಟ್ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಇಮ್ಮಡಿಹಳ್ಳಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಮಗಳನ್ನು ಉಸಿರುಗಟ್ಟಿಸಿ ಕೊಂದ ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ವೈಟ್ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಇಮ್ಮಡಿಹಳ್ಳಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.ಇಮ್ಮಡಿಹಳ್ಳಿ ನಿವಾಸಿ ಸುವರ್ಣ (45) ಎನ್ನುವವರು ಕಾರುಣ್ಯ (13) ಎಂಬ ಮಗಳನ್ನು ದಿಂಬಿನಿಂದ ಉಸಿರುಗಟ್ಟಿಸಿ ತಾನು ಮನೆಯಲ್ಲಿನ ಪ್ಯಾನಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಈ ಸಂಬಂಧ ಸುವರ್ಣ ಅವರ ಪತಿ ಚಂದ್ರಶೇಖರ್ ಹಾಗೂ ಸಹೋದರ ಮಂಜುನಾಥ ನೀಡಿದ ದೂರಿನನ್ವಯ ಎರಡು ಪ್ರಕರಣಗಳು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ 18 ವರ್ಷಗಳ ಹಿಂದೆ ಚಂದ್ರಶೇಖರ್ ಮತ್ತು ಸುವರ್ಣ ಮದುವೆಯಾಗಿತ್ತು. ಹೊಸೂರು ಮೂಲದವರಾಗಿರೋ ಸುವರ್ಣ ದಂಪತಿಗೆ ಇಬ್ಬರು ಮಕ್ಕಳಿದ್ದು, ಮಗ ತುಮಕೂರಿನ ಹಾಸ್ಟೆಲ್ನಲ್ಲಿ ಓದುತ್ತಿದ್ದಾನೆ. ಪತಿ ಚಂದ್ರಶೇಖರ್ ಮಣಿಪಾಲ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಮಗಳು ಕಾರುಣ್ಯ ಪತ್ನಿ ಸುವರ್ಣ ಜೊತೆ ಇಮ್ಮಡಿಹಳ್ಳಿಯಲ್ಲಿ ವಾಸವಾಗಿದ್ದರು.ಪತಿ ಚಂದ್ರಶೇಖರ್ ಎಂದಿನಂತೆ ಮಂಗಳವಾರ ಖಾಸಗಿ ಆಸ್ಪತ್ರೆಗೆ ಕೆಲಸಕ್ಕೆ ಹೋಗಿದ್ದು, ಬೆಳಗ್ಗೆ 10.30ರ ಸುಮಾರಿಗೆ ಪತ್ನಿಗೆ ಹಲವು ಬಾರಿ ಕರೆ ಮಾಡಿದ್ದು, ಅವರು ಕರೆ ಸ್ವೀಕರಿಸಿರಲಿಲ್ಲ. ಇದರಿಂದ ಆತಂಕಗೊಂಡ ಅವರು ತನ್ನ ಸಹೋದರನಿಗೆ ಮನೆಗೆ ಹೋಗಿ ನೋಡು ಅಂತಾ ತಿಳಿಸಿದ್ದು, ಅದರಂತೆ ಸಹೋದರ 11 ಗಂಟೆ ಸುಮಾರಿಗೆ ಮನೆಗೆ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ವೈಟ್ ಫೀಲ್ಡ್ ಠಾಣೆ ಪೊಲೀಸರು ಹಾಗೂ ಸೊಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುವರ್ಣ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸ್ಥಳದಲ್ಲಿ ಯಾವುದೇ ಡೆತ್ನೋಡ್ ಪತ್ತೆಯಾಗಿಲ್ಲ. ಹಾಗಾಗಿ ಸಾವಿಗೆ ನಿಖರ ಕಾರಣ ತಿಳಿದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಪತಿ ಚಂದ್ರಶೇಖರ್ ನೀಡಿದ ದೂರಿನ ಅನ್ವಯ ಕೊಲೆ ಪ್ರಕರಣ ದಾಖಲಾಗಿದ್ದು, ಮೃತಳ ಸಹೋದರ ಮಂಜುನಾಥ ತಮ್ಮ ಸಹೋದರಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ನೀಡಿದ ದೂರಿನ ಮೇರೆಗೆ ಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.