ಹಳೆಯ ರಸ್ತೆಗಳನ್ನು ಸಂಪೂರ್ಣವಾಗಿ ಕಿತ್ತು ಹಾಕುವ ಕಾರ್ಯ ಭರದಿಂದ ಸಾಗುತ್ತಿದೆ. ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಸಾರ್ವಜನಿಕರು ಸ್ವಾಗತ ವ್ಯಕ್ತಪಡಿಸಿದ್ದರೂ, ಕಾಮಗಾರಿ ನಡೆಸುವ ವಿಧಾನ ಮಾತ್ರ ದಿನನಿತ್ಯ ಓಡಾಡುವ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಗುತ್ತಿಗೆದಾರರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ರಸ್ತೆ ಕಾಮಗಾರಿ ನಡೆಸುತ್ತಿರುವುದರಿಂದ ರಸ್ತೆ ಸಂಪೂರ್ಣ ಧೂಳಿನಿಂದ ಆವರಿಸಿಕೊಂಡಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಸಂಚರಿಸಲು ಹರಸಾಹಸ ಪಡುವಂತಾಗಿದೆ. ವೃದ್ಧರು, ಮಕ್ಕಳು, ಕೂಲಿಕಾರ್ಮಿಕರು ಹಾಗೂ ಶಾಲಾ ವಿದ್ಯಾರ್ಥಿಗಳು ಪ್ರತಿನಿತ್ಯ ಧೂಳಿನ ನಡುವೆ ಓಡಾಡಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.

ಬೇಲೂರು: ಪಟ್ಟಣದ ಕೆಂಪೇಗೌಡ ವೃತ್ತದಿಂದ ಬಿಕ್ಕೋಡು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಆರಂಭವಾಗಿದ್ದು ಅವೈಜ್ಞಾನಿಕ ಕಾಮಗಾರಿಯಿಂದ ಧೂಳಿನ ನಡುವೆ ವಾಹನ ಚಾಲಕರು ಹಾಗೂ ನಾಗರಿಕರು ಓಡಾಡಲು ಪರದಾಡುವಂತಾಗಿದೆ.ಕೆಂಪೇಗೌಡ ರಸ್ತೆ ಹಾಗೂ ಬಿಕ್ಕೋಡು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಜೆಸಿಬಿ ಮತ್ತು ಇಟಾಚಿ ಯಂತ್ರಗಳ ಮೂಲಕ ಹಳೆಯ ರಸ್ತೆಗಳನ್ನು ಸಂಪೂರ್ಣವಾಗಿ ಕಿತ್ತು ಹಾಕುವ ಕಾರ್ಯ ಭರದಿಂದ ಸಾಗುತ್ತಿದೆ. ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಸಾರ್ವಜನಿಕರು ಸ್ವಾಗತ ವ್ಯಕ್ತಪಡಿಸಿದ್ದರೂ, ಕಾಮಗಾರಿ ನಡೆಸುವ ವಿಧಾನ ಮಾತ್ರ ದಿನನಿತ್ಯ ಓಡಾಡುವ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಗುತ್ತಿಗೆದಾರರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ರಸ್ತೆ ಕಾಮಗಾರಿ ನಡೆಸುತ್ತಿರುವುದರಿಂದ ರಸ್ತೆ ಸಂಪೂರ್ಣ ಧೂಳಿನಿಂದ ಆವರಿಸಿಕೊಂಡಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಸಂಚರಿಸಲು ಹರಸಾಹಸ ಪಡುವಂತಾಗಿದೆ. ವೃದ್ಧರು, ಮಕ್ಕಳು, ಕೂಲಿಕಾರ್ಮಿಕರು ಹಾಗೂ ಶಾಲಾ ವಿದ್ಯಾರ್ಥಿಗಳು ಪ್ರತಿನಿತ್ಯ ಧೂಳಿನ ನಡುವೆ ಓಡಾಡಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಎಚ್ಚರಿಕೆ ನಾಮಫಲಕಗಳಿಲ್ಲದೇ, ರಸ್ತೆಗೆ ನೀರು ಸಿಂಪಡಿಸುವ ವ್ಯವಸ್ಥೆಯೂ ಮಾಡದಿರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಭೀತಿ ಎದುರಾಗಿದೆ. ಬೆಳಿಗ್ಗೆ ಮತ್ತು ಮಧ್ಯಾಹ್ನ ಕನಿಷ್ಠ ಎರಡು ಬಾರಿ ನೀರು ಹಾಕಿ ಕಾಮಗಾರಿ ನಡೆಸುವಂತೆ ಸ್ಥಳೀಯ ನಿವಾಸಿಗಳು ಗುತ್ತಿಗೆದಾರರಿಗೆ ಮನವಿ ಮಾಡಿಕೊಂಡಿದ್ದಾರೆ. ಆದರೆ ಈ ಬಗ್ಗೆ ಮುತ್ತಿಗೆದಾರ ನಾವು ಕೆಲಸ ಮಾಡುವುದೇ ಹೀಗೆ ಎಂದು ಉಡಾಫೆ ಉತ್ತರ ನೀಡುತ್ತಿದ್ದಾರೆ ಎಂದು ನಿವಾಸಿಗಳು ಆರೋಪಿಸಿದರು.ಈ ಕುರಿತು ಮಾತನಾಡಿದ ಶ್ರೀ ಚನ್ನಕೇಶವ ನಗರದ ನಿವಾಸಿ ಅಭಿಷೇಕ್, “ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚರಿಸುವುದೇ ಕಷ್ಟವಾಗಿದೆ. ಧೂಳಿನಿಂದ ವೃದ್ಧರು ಮತ್ತು ಮಕ್ಕಳು ಅನಾರೋಗ್ಯಕ್ಕೆ ತುತ್ತಾಗುವ ಪರಿಸ್ಥಿತಿ ಇದೆ. ರಸ್ತೆ ಅಭಿವೃದ್ಧಿಯಾಗುತ್ತಿರುವುದು ಸಂತೋಷದ ವಿಚಾರವಾದರೂ, ಸಾರ್ವಜನಿಕರ ಆರೋಗ್ಯದ ಬಗ್ಗೆ ಕನಿಷ್ಠ ಕಾಳಜಿಯೂ ಇಲ್ಲದಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ ಗುತ್ತಿಗೆದಾರರಿಗೆ ಸೂಕ್ತ ಸೂಚನೆ ನೀಡಬೇಕು” ಎಂದು ಆಗ್ರಹಿಸಿದರು.ಚನ್ನಕೇಶವ ನಗರ ಹಾಗೂ ಕೆಂಪೇಗೌಡ ರಸ್ತೆ ನಿವಾಸಿಗಳು ರಸ್ತೆ ಕಾಮಗಾರಿ ವೇಳೆ ದಿನಕ್ಕೆ ಕನಿಷ್ಠ ಎರಡರಿಂದ ಮೂರು ಬಾರಿ ನೀರು ಸಿಂಪಡಿಸಿ ಧೂಳು ನಿಯಂತ್ರಣ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಶಾಸಕರಿಗೆ ಮನವಿ ಮಾಡಿದ್ದಾರೆ.