ಅನಂತ್‌ ಕುಮಾರ್‌ ಬಹಿರಂಗ ಕ್ಷಮೆಯಾಚಿಸಬೇಕು: ಶಾಸಕ ಕೆ.ಎಂ.ಶಿವಲಿಂಗೇಗೌಡ ಒತ್ತಾಯ

| Published : Jan 17 2024, 01:45 AM IST

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ಏಕವಚನದಲ್ಲಿ ನಿಂದಿಸಿರುವ ಸಂಸದ ಅನಂತ್ ಕುಮಾರ್ ಹೆಗಡೆ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ಶಾಸಕ ಕೆ,ಎಂ ಶಿವಲಿಂಗೇಗೌಡರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅರಸೀಕೆರೆಯಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ । ಸಿದ್ದರಾಮಯ್ಯ ಕುರಿತು ಏಕವಚನದಲ್ಲಿ ನಿಂದಿಸಿದ್ದ ಸಂಸದ ಹೆಗಡೆ

ಕನ್ನಡಪ್ರಭ ವಾರ್ತೆ ಅರಸೀಕೆರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ಏಕವಚನದಲ್ಲಿ ನಿಂದಿಸಿರುವ ಸಂಸದ ಅನಂತ್ ಕುಮಾರ್ ಹೆಗಡೆ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ಶಾಸಕ ಕೆ,ಎಂ ಶಿವಲಿಂಗೇಗೌಡರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಪ್ರತಿಭಟನಾಕಾರರು ಅನಂತ್ ಕುಮಾರ್ ಹೆಗಡೆ ವಿರುದ್ಧ ಘೋಷಣೆ ಕೂಗುತ್ತ ರಾಷ್ಟ್ರೀಯ ಹೆದ್ದಾರಿ 206 ಟಿ,ಎಚ್ ರಸ್ತೆ ಮೂಲಕ ಬಸವೇಶ್ವರ ವೃತ್ತದವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಅನಂತ್ ಕುಮಾರ್ ಹೆಗಡೆ ಅವರ ಪ್ರತಿಕೃತಿ ದಹಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರು ಉದ್ದೇಶಿಸಿ ಶಾಸಕ ಶಿವಲಿಂಗೇಗೌಡ ಮಾತನಾಡಿ, ಒಬ್ಬ ಚುನಾಯಿತ ಜನಪ್ರತಿನಿಧಿಯಾಗಿ ಸಂವಿಧಾನವನ್ನೇ ಬದಲಿಸುತ್ತೇವೆ ಎಂದು ಹೇಳಿಕೆ ನೀಡುವುದು, ರಾಜ್ಯದ ಮುಖ್ಯಮಂತ್ರಿಗೆ ಏಕವಚನದಲ್ಲಿ ನಿಂದಿಸುವುದು, ಪದೇ ಪದೇ ತಮ್ಮ ನಾಲಿಗೆಯನ್ನು ಅರಿಬಿಡುವ ಮೂಲಕ ಅನಂತ್ ಕುಮಾರ್ ಹೆಗಡೆ ರಾಜ್ಯದಲ್ಲಿ ಅಶಾಂತಿ ವಾತಾವರಣ ಉಂಟು ಮಾಡುವ ಇಂಥ ಮನಸ್ಥಿತಿಯ ರಾಜಕಾರಣಿಯನ್ನು ಬಿಜೆಪಿಯವರೇ ಪಕ್ಷದಿಂದ ಉಚ್ಚಾಟನೆ ಮಾಡಿದರೆ ಅವರ ಪಕ್ಷಕ್ಕೆ ಮರ್ಯಾದೆ ಹೆಚ್ಚುತ್ತದೆ ಎಂದರು.

ಸರ್ವಧರ್ಮೀಯರು ಮೆಚ್ಚುವಂತಹ ಜನಪರ ಆಡಳಿತ ನೀಡುತ್ತ ಇರುವ ಸಿದ್ದರಾಮಯ್ಯ ಅಂತ ಒಬ್ಬ ಧೀಮಂತ ರಾಜಕಾರಣಿಯನ್ನು ತಮ್ಮ ರಾಜಕೀಯ ಪ್ರಚಾರಕ್ಕಾಗಿ ಲಘುವಾಗಿ ಮಾತನಾಡಿರುವುದು ಚುನಾಯಿತ ಜನಪ್ರತಿನಿಧಿಗೆ ಶೋಭೆ ತರುವಂತಹದ್ದಲ್ಲ. ಕೂಡಲೇ ಅನಂತ್ ಕುಮಾರ್ ಹೆಗಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನೀಡಿರುವ ಹೇಳಿಕೆಯನ್ನು ಹಿಂಪಡೆದು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ನಾವು ರಾಮ ಭಕ್ತರೆ:

‘ನಾವು ಹಿಂದೂಗಳು, ನಾವು ರಾಮಭಕ್ತರೇ, ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಮನ ಜಪ ಮಾಡುವುದಿಲ್ಲ. ರಾಮ ಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ನೀಡಿದ್ದೇನೆ. ಅದನ್ನ ಪ್ರಚಾರಕ್ಕೆ ಬಳಸಿಕೊಳ್ಳುವುದಿಲ್ಲ’ ಎಂದು ಇದೇ ಸಂದರ್ಭದಲ್ಲಿ ಬಿಜೆಪಿಯವರಿಗೆ ಶಾಸಕ ಶಿವಲಿಂಗೇಗೌಡ ತಿರುಗೇಟು ನೀಡಿದರು.

ಗಂಡಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಟ್ರೋ ಬಾಬು ಮಾತನಾಡಿ, ದೇಶದ ಸಂವಿಧಾನದ ಬಗ್ಗೆ ಗೌರವವಿಲ್ಲದೆ ಮುಖ್ಯಮಂತ್ರಿ ಸೇರಿದಂತೆ ಪ್ರತಿ ಪಕ್ಷದ ಜನಪ್ರತಿನಿಧಿಗಳನ್ನು ಹೇಗೆ ಗೌರವದಿಂದ ಮಾತನಾಡಿಸಬೇಕು ಎಂಬ ಕನಿಷ್ಠ ಜ್ಞಾನವಿಲ್ಲದ ಅನಂತ್ ಕುಮಾರ್ ಹೆಗಡೆ ಹಾಗೂ ಅಂತಹ ಮನಸ್ಥಿತಿಯುಳ್ಳ ಇನ್ನು ಕೆಲ ಬಿಜೆಪಿ ಮುಖಂಡರನ್ನು ಬಿಜೆಪಿ ನಾಯಕರು ಪಕ್ಷದಿಂದ ಉಚ್ಚಾಟಿಸಿದರೆ ಮಾತ್ರ ತಮಗೆ ಹಾಗೂ ತಮ್ಮ ಪಕ್ಷಕ್ಕೆ ಗೌರವ ಹೆಚ್ಚುತ್ತದೆ. ಇಲ್ಲದೆ ಹೋದರೆ ನಾಡಿನ ಜನತೆಯೇ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಶಶಿಧರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗೊಲ್ಲರಹಳ್ಳಿ ಪಟೇಲ್ ಶಿವಣ್ಣ. ಗಂಡಸಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಂಜು ರಾಜ್, ಕಾಂಗ್ರೆಸ್ ಮುಖಂಡರಾದ ಬಿಳಿಚೌಡಯ್ಯ, ಗಂಜಿಗೆರೆ ಚಂದ್ರಶೇಖರ್, ನಗರಸಭೆ ಸದಸ್ಯ ವೆಂಕಟಮುನಿ, ಧರ್ಮೇಶ್, ಧರ್ಮ ಶೇಖರ್, ಗೌಸ್ ಖಾನ್, ಮಾಡಳು ರಂಗನಾಥ, ಅಯ್ಯಪ್ಪ ಇದ್ದರು. ಅನಂತ್ ಕುಮಾರ್ ಹೆಗಡೆ ವಿರುದ್ಧ ಘೋಷಣೆ ಕೂಗುತ್ತಾ ರಾಷ್ಟ್ರೀಯ ಹೆದ್ದಾರಿ 206 ಟಿ,ಎಚ್ ರಸ್ತೆ ಮೂಲಕ ಬಸವೇಶ್ವರ ವೃತ್ತದವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಅನಂತ್ ಕುಮಾರ್ ಅವರ ಪ್ರತಿ ಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.