ಎಂಪಿ ಚುನಾವಣೆ: ತಾಲೂಕು ಮಟ್ಟದ ಅಧಿಕಾರಿಗಳ ಸಭೆ

| Published : Mar 18 2024, 01:48 AM IST

ಸಾರಾಂಶ

ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಜಾರಿಗೊಳಿಸಿದ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು

ಕನ್ನಡಪ್ರಭ ವಾರ್ತೆ ಚಿಂಚೋಳಿ

ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಜಾರಿಗೊಳಿಸಿದ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಗಮನಹರಿಸಬೇಕೆಂದು ತಾಲೂಕು ಸಹಾಯಕ ಚುನಾವಣಾಧಿಕಾರಿ ಸಂತೋಷಕುಮಾರ ಇನಾಂದಾರ ಹೇಳಿದರು.

ತಹಸೀಲ್ದಾರ್‌ ಕಚೇರಿ ಸಭಾಂಗಣದಲ್ಲಿ ಜರುಗಿದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಚುನಾವಣಾ ಆಯೋಗದಂತೆ ಚಿಂಚೋಳಿ ಮೀಸಲು ಮತಕ್ಷೇತ್ರದ ಎಲ್ಲ ಮತದಾನ ಕೇಂದ್ರಗಳಲ್ಲಿ ಕುಡಿವ ನೀರು. ಶೌಚಾಲಯ, ವಿದ್ಯುತ್‌ ಸಂಪರ್ಕ ವ್ಯವಸ್ಥೆ ಮಾಡಿಕೊಳ್ಳಬೇಕು ಮತ್ತು ಬೇಸಿಗೆ ದಿನವಾಗಿರುವುದರಿಂದ ಮತದಾನ ಕೇಂದ್ರ ಮುಂದೆ ನೆರಳಿನ ವ್ಯವಸ್ಥೆ ಮಾಡಿಕೊಳ್ಳಬೇಕು. ಚುನಾವಣೆ ಸಂದರ್ಭದಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳನ್ನು ನಡೆಯದಂತೆ ಗಡಿ ಪ್ರದೇಶದ ಶಿವರಾಮಪೂರ, ಕುಂಚಾವರಂ, ಮಿರಿಯಾಣ, ತುಮಕುಂಟಾ ಚೆಕ್‌ಪೋಸ್ಟ್‌ಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ಬೇರೆಡೆ ಸಂಚರಿಸುವ ಎಲ್ಲ ವಾಹನಗಳನ್ನು ತಪಾಸಣೆ ಮಾಡಬೇಕು ಎಂದು ಸೂಚಿಸಿದರು.

ತಾಲೂಕಿನ ಎಲ್ಲ ಗ್ರಾಪಂ ಪಿಡಿಒ ತಮ್ಮ ಕೇಂದ್ರ ಕಚೇರಿಗಳಲ್ಲಿ ಇರಬೇಕು ರಾಜಕೀಯ ಬ್ಯಾನರ್‌, ಭಾವಚಿತ್ರಗಳು ಇನ್ನಿತರೆ ಯಾವುದೇ ಬ್ಯಾನರ್‌ಗಳು ಇದ್ದರೆ ತೆರವುಗೊಳಿಸಬೇಕು ಎಂದು ಸಹಾಯಕ ಚುನಾವಣಾಧಿಕಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಹಸೀಲ್ದಾರ ವೆಂಕಟೇಶ ದುಗ್ಗನ್ ಮಾತನಾಡಿ, ಎಲ್ಲ ಅಧಿಕಾರಿಗಳು ರಾಜ್ಯ ಮತ್ತು ಕೇಂದ್ರ ಚುನಾವಣಾ ಆಯೋಗವು ಜಾರಿಗೊಳಿಸಿದ ಎಲ್ಲ ನಿಯಮಗಳನ್ನು ಅನುಸರಿಸಬೇಕು ಎಂದರು.

ತಾಪಂ ಅಧಿಕಾರಿ ಶಂಕರ ರಾಠೋಡ, ಎಇಇ ಬಸವರಾಜ ಬೈನೂರ, ಬಿಇಓ ಕಮಲಾ ಕುಲಕರ್ಣಿ, ಮಲ್ಲಿಕಾರ್ಜುನ ಪಾಲಾಮೂರ, ರೇವಣಸಿದ್ದ ದಂಡಿನ, ದೇವೇಂದ್ರಪ್ಪ ಹೋಳ್ಕರ, ಶಿರಸ್ತೆದಾರ ಸುಭಾಷ ನಿಡಗುಂದಾ, ಪಿಡಿಓ, ಗ್ರಾಮಲೆಕ್ಕಾಧಿಕಾರಿಗಳು, ಕಂದಾಯ ನಿರೀಕ್ಷರು ಇನ್ನಿತರಿದ್ದರು.