ಕನ್ನಡಪ್ರಭ ವಾರ್ತೆ ಹಾಸನ
ಹೊಳೆನರಸೀಪುರ ತಾಲೂಕಿನ ಅಂಕವಳ್ಳಿ ಗ್ರಾಮದಲ್ಲಿ ಚಿರತೆ ದಾಳಿಯಲ್ಲಿ ಗಾಯಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಾಲ್ವರನ್ನು ಸಂಸದರಾದ ಶ್ರೇಯಸ್ ಪಟೇಲ್ ಹಾಗೂ ಜಿಲ್ಲಾಧಿಕಾರಿ ಲತಾ ಕುಮಾರಿ ಶುಕ್ರವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.ಘಟನೆ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಸಂಸದ ಶ್ರೇಯಸ್ ಎಂ. ಪಟೇಲ್, ಚಿರತೆ ದಾಳಿಯಲ್ಲಿ ಗಾಯಗೊಂಡವರನ್ನು ಮೊದಲು ಹೊಳೆನರಸೀಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಚಿಕಿತ್ಸೆಗೆ ಹಾಸನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದರು. ವೈದ್ಯಾಧಿಕಾರಿಗಳು ಹಾಗೂ ತಜ್ಞರ ತಂಡ ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡುತ್ತಿದ್ದು, ನಾಗೇಶ್ ಅವರ ಮೇಲೆ ಚಿರತೆ ಭೀಕರವಾಗಿ ದಾಳಿ ನಡೆಸಿದೆ ಎಂದರು.
ಜಿಲ್ಲಾಧಿಕಾರಿ ಕೆ. ಎಸ್. ಲತಾಕುಮಾರಿ ಮಾತನಾಡಿ, ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸದಂತೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಗ್ರಾಮಸ್ಥರಿಗೆ ಎಚ್ಚರಿಕೆ ಸಂದೇಶ ನೀಡುವ ಜೊತೆಗೆ ಚಿರತೆಯ ಚಲನವಲನದ ಮೇಲೆ ನಿಗಾ ಇಡಲಾಗಿದೆ. ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಒಂಟಿಯಾಗಿ ಹೊಲಗದ್ದೆಗಳಿಗೆ ತೆರಳದಂತೆ ಹಾಗೂ ಅರಣ್ಯ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಚಿರತೆಯನ್ನು ಈಗಾಗಲೇ ಸೆರೆ ಹಿಡಿಯಲಾಗಿದೆ.