ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ
ಮುಡಾ ಮತ್ತು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಪ್ರಮುಖ ರೂವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿಕ್ಷೆ ಆಗಲಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಜನಾಂಗ ಹಾಗೂ ಅಲ್ಪಸಂಖ್ಯಾತರ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ₹269 ಕೋಟಿ ಹಗರಣ ನಡೆದಿದೆ. ಈ ಎಲ್ಲ ಹಣವನ್ನು ಕಾಂಗ್ರೆಸ್ ಸರ್ಕಾರ ಹೊಡೆದಿದೆ. ಈ ಹಣವನ್ನು ಬಳ್ಳಾರಿ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಸರ್ಕಾರ ಬಳಕೆ ಮಾಡಿದೆ ಎಂಬ ಆರೋಪವನ್ನು ನಾವು ಮಾಡಿದ್ದೆವು. ಈಗ ಅದಕ್ಕೆ ಪೂರಕವಾಗುವಂತೆ ಅಲ್ಲಿನ ಸಂಸದರು, ಶಾಸಕರ ಮನೆಗಳ ಮೇಲೆ ಇಡಿ ದಾಳಿಯಾಗಿದೆ. ಈ ದೊಡ್ಡ ಭ್ರಷ್ಟಾಚಾರ ಹಗರಣದಲ್ಲಿ ಶಾಮೀಲಾದ ಆರೋಪಿಗಳಿಗೆ ಶಿಕ್ಷೆಯಾಗುತ್ತದೆ. ಅದರ ಜೊತೆಗೆ ಹಗರಣಗಳ ಪ್ರಮುಖ ರೂವಾರಿ ಸಿಎಂ ಸಿದ್ದರಾಮಯ್ಯ ಅವರಿಗೂ ಶಿಕ್ಷೆ ಆಗಲಿದೆ ಎಂದರು.
ಅದೇ ರೀತಿ ಎಸ್ಸಿ ಸಮುದಾಯದ ₹25 ಸಾವಿರ ಕೋಟಿ ಹಣವನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಹೇಳುವುದೊಂದು, ಮಾಡುವುದು ಇನ್ನೊಂದು ಮಾಡುತ್ತದೆ. ಮುಡಾ, ವಾಲ್ಮೀಕಿ ನಿಗಮದ ಹಗರಣಕ್ಕೆ ಸಿಎಂ ಸಿದ್ದರಾಮಯ್ಯನವರೇ ಹೊಣೆಗಾರರು. ಅವರ ಅಣತಿಯಂತೆಯೇ ಎಲ್ಲವೂ ನಡೆದಿದೆ ಎಂದು ಆರೋಪಿಸಿದರು.ಮೋದಿ ದೇಶದ ಭದ್ರತೆಗೆ ಆದ್ಯತೆ:
ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನನ್ನೂ ಸಮಾನವಾಗಿ ಕಂಡು, ಘನತೆಯ ಜೀವನ ಖಾತರಿಪಡಿಸುತ್ತದೆ. ಆದರೂ, ಸ್ವಾತಂತ್ರ್ಯ ನಂತರವೂ ದಶಕಗಳ ಕಾಲ ಬಹುತೇಕ ದೇಶಬಾಂಧವರು ಮೂಲಸೌಲಭ್ಯಗಳಿಲ್ಲದೆ ತೀವ್ರ ಬಡತನದಲ್ಲಿ ಬದುಕುತ್ತಿದ್ದರು. ಈ ದುರದೃಷ್ಟಕರ ಪರಿಸ್ಥಿತಿ ಬದಲಾಗಬೇಕೆಂಬ ಅನಿವಾರ್ಯತೆಯನ್ನು ಪ್ರಧಾನಿ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಮನಗಂಡು, 2014 ರಿಂದ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮೂಲಮಂತ್ರದಡಿ, ಸವಲತ್ತು ಪಡೆದ ಕೆಲವರಿಗೆ ಮಾತ್ರವಲ್ಲದೆ ಎಲ್ಲರನ್ನೂ ಒಳಗೊಳ್ಳುವ ವಿಶಿಷ್ಟ ಅಭಿವೃದ್ಧಿ ಮಾದರಿಯನ್ನು ಪರಿಚಯಿಸಿ, ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಕ್ರಿಯೆ ಆರಂಭಿಸಿತು. ಅಲ್ಲದೆ ಪ್ರತಿಯೊಂದು ಹೆಜ್ಜೆಯೂ ಭಾರತ ಮೊದಲು ಎಂಬ ಬದ್ಧತೆಯೊಂದಿಗೆ ಮುನ್ನಡೆಯುತ್ತಿರುವ ನಿರ್ಣಾಯಕ ನಾಯಕತ್ವವನ್ನು ಜಗತ್ತಿಗೆ ಸಾರಿ ಹೇಳಿದೆ ಎಂದರು.ಕಳೆದ 11 ವರ್ಷಗಳಲ್ಲಿ, ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವು ದಶಕಗಳ ಜಡತ್ವ ಮುರಿದು, ದಿಟ್ಟ ನಿರ್ಧಾರಗಳ ಮೂಲಕ ವಿಕಸಿತ ಭಾರತಕ್ಕೆ ಭದ್ರ ಬುನಾದಿ ಹಾಕಿದೆ. ಒಂದು ಕಡೆ ಜಿಎಸ್ಟಿ, ನೋಟು ಅಮಾನೀಕರಣದಂತಹ ಆರ್ಥಿಕ ಸುಧಾರಣೆಗಳು, ಮತ್ತೊಂದೆಡೆ ಉರಿ-ಬಾಲಾಕೋಟ್ ನಂತಹ ಸರ್ಜಿಕಲ್ ಸ್ಟೈಕ್ ಮತ್ತು ಆಪರೇಷನ್ ಸಿಂದೂರಗಳಿಂದ ರಾಷ್ಟ್ರದ ಭದ್ರತೆಗೆ ಬಲ ನೀಡಲಾಗಿದೆ. ಹಾಗೆಯೇ, ಜಮ್ಮು ಮತ್ತು ಕಾಶ್ಮೀರಕ್ಕೆ 370ನೇ ವಿಧಿ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಲಾಗಿದೆ ಹಾಗೂ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಿಸಿ ಭಾರತೀಯರ ಶತಮಾನಗಳ ಕನಸನ್ನು ನನಸು ಮಾಡಿದ್ದು ಐತಿಹಾಸಿಕ ಸಾಧನೆಗಳಾಗಿವೆ ಎಂದು ಹೇಳಿದರು.
ಇಂದು, ನಾವು ಜಲ ಜೀವನ್ ಮಿಷನ್ನ ಹರ್ ಘರ್ ಜಲ್ ಯೋಜನೆಯಡಿ ಕುಡಿಯುವ ನೀರು, ಹರ್ ಘರ್ ಬಿಜಲಿ ಯೋಜನೆಯಡಿ ವಿದ್ಯುತ್ ಸಂಪರ್ಕ, ಉತ್ತಮ ಆರೋಗ್ಯ ಸೇವೆಗಳು, ಸ್ವಚ್ಛ ಭಾರತ ಯೋಜನೆಯಡಿ ಸ್ವಚ್ಛ ಶೌಚಾಲಯಗಳು, ಉಜ್ವಲ ಯೋಜನೆಯಡಿ ಎಲ್ಪಿಜಿ ಸಿಲಿಂಡರ್ಗಳನ್ನು ಪಡೆದುಕೊಳ್ಳುತ್ತಿದ್ದೇವೆ. ಗುಣಮಟ್ಟದ ಶಿಕ್ಷಣ ಮತ್ತು ಸೂರು ಇಲ್ಲದವರಿಗೆ ವಸತಿ ಸೌಲಭ್ಯಗಳಂತಹ ಅಗತ್ಯ ಸೌಕರ್ಯಗಳನ್ನು ಪ್ರತಿಯೊಬ್ಬ ಭಾರತೀಯನಿಗೆ ಖಾತರಿಪಡಿಸಿದ್ದಾರೆ. ಇದು ಕೇವಲ ಒಂದು ಕನಸಾಗಿ ಉಳಿದಿಲ್ಲ, ಇದು ನಮ್ಮ ಮೋದಿ ಸರ್ಕಾರದ ಬದ್ಧತೆಯಾಗಿದೆ, ಗ್ಯಾರಂಟಿಯಾಗಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ಮಾಜಿ ಶಾಸಕರಾದ ಸಂಜಯ ಪಾಟೀಲ, ಅನಿಲ ಬೆನಕೆ ಮೊದಲಾದವರು ಉಪಸ್ಥಿತರಿದ್ದರು.