ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹಿಸಿ ಶನಿವಾರ ಮಾಜಿ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಕರೆ ನೀಡಿದ್ದ ಬಂದ್‌ಗೆ ಭಾಗಶಃ ಯಶಸ್ವಿಯಾಯಿತು. ಪಟ್ಟಣದ ಬಹುತೇಕ ವ್ಯಾಪಾರಸ್ಥರು ಅಂಗಡಿ-ಮುಂಗಟ್ಟುಗಳ ಬಾಗಿಲು ಹಾಕಿ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ

ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹಿಸಿ ಶನಿವಾರ ಮಾಜಿ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಕರೆ ನೀಡಿದ್ದ ಬಂದ್‌ಗೆ ಭಾಗಶಃ ಯಶಸ್ವಿಯಾಯಿತು. ಪಟ್ಟಣದ ಬಹುತೇಕ ವ್ಯಾಪಾರಸ್ಥರು ಅಂಗಡಿ-ಮುಂಗಟ್ಟುಗಳ ಬಾಗಿಲು ಹಾಕಿ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದರು. ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್‌. ಪಾಟೀಲ ನಡಹಳ್ಳಿ, ಉದ್ಯಮಿ ಭರತಗೌಡ ಪಾಟೀಲ ನೇತೃತ್ವದಲ್ಲಿ ರೈತರು ಪಟ್ಟಣದ ಡಾ.ಅಂಬೇಡ್ಕರ್‌ ವೃತ್ತ ಹಾಗೂ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಈ ವೇಳೆ ತಮಟೆ ಬಾರಿಸುವ ಮೂಲಕ ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹಿಸಲಾಯಿತು. ಸಾರಿಗೆ ಬಸ್ ಗಳ ಓಡಾಟ ನಡೆಸಿದ್ದರಿಂದ ಸಾರಿಗೆ ಅಧಿಕಾರಿಗಳು, ಪೊಲೀಸರೊಂದಿಗೆ ನಡಹಳ್ಳಿ ವಾಗ್ವಾದ ನಡೆಸಿದ ಘಟನೆಯೂ ನಡೆಯಿತು.

ಬರಗಾಲ ಘೋಷಿಸಿ, ರೈತರ ಸಾಲ ಮನ್ನಾ ಮಾಡಿ: ನಡಹಳ್ಳಿ

ತಹಸೀಲ್ದಾರ್‌ ಕಚೇರಿ ಆವರಣದಲ್ಲಿ 5 ದಿನದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಮಾತನಾಡಿದ ನಡಹಳ್ಳಿ ಅವರು, ವಿಜಯಪುರ ಜಿಲ್ಲೆಯನ್ನು ಬರಗಾಲ ಪೀಡಿತ ಎಂದು ಘೋಷಿಸಬೇಕು, ರೈತರಿಗೆ ಬೆಳೆ ಪರಿಹಾರ ಹಾಗೂ ಸಾಲಮನ್ನಾ ಮಾಡಬೇಕು. ರೈತರು ಮತ್ತು ಕೂಲಿ ಕಾರ್ಮಿಕರಿಗೆ ಹಳ್ಳಿಗಳಲ್ಲೇ ಉದ್ಯೋಗ ಕಲ್ಪಿಸಲು ಕೇಂದ್ರದ ವಿವಿಧ ಉದ್ಯೋಗ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಪ್ರತಿ ಗ್ರಾಮಕ್ಕೆ ಕನಿಷ್ಠ ₹5 ಕೋಟಿ ಮೊತ್ತದ ಉದ್ಯೋಗ ಸೃಷ್ಟಿಸುವ ಯೋಜನೆ ರೂಪಿಸಬೇಕು ಎಂದು ಆಗ್ರಹಿಸಿದರು.

ವಿಜಯಪುರ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಬರ ಘೋಷಣೆಗೆ ಸರ್ಕಾರ ವಿಳಂಬ ಮಾಡುತ್ತಿರುವುದು ಸರಿಯಲ್ಲ. ಶಾಸಕರಾಗಿ ಮೂರುವರೆ ವರ್ಷ ಪೂರ್ಣಗೊಳಿಸಿರುವ ಸಿ.ಎಸ್. ನಾಡಗೌಡರು ಎಷ್ಟು ಗ್ರಾಮಗಳಿಗೆ ಭೇಟಿ ನೀಡಿ ರೈತರ ಸಮಸ್ಯೆ ಆಲಿಸಿದ್ದಾರೆ ಎಂಬುದನ್ನು ಜನರು ಪ್ರಶ್ನಿಸಬೇಕೆಂದು ಕರೆ ನೀಡಿದರು.

ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಮಲಕೇಂದ್ರರಾಯಗೌಡ ಪಾಟೀಲ, ಬಿ.ಪಿ. ಕುಲಕರ್ಣಿ, ಗಿರೀಶಗೌಡ ಪಾಟೀಲ, ಸಂಗಣ್ಣ ಹತ್ತಿ, ಸಂಗಮೇಶ ನಾಗೂರ್, ಲಕ್ಷ್ಮಣ ಬಿಜ್ಜುರ, ಮುತ್ತಣ್ಣ ನಾಯಕಮಕ್ಕಳ, ಪರಶುರಾಮ್ ನಾಲತವಾಡ, ಸಿದ್ದರಾಜ ಹೊಳಿ, ಕೆಂಚಪ್ಪ ಬಿರಾದಾರ್, ಮುತ್ತು ಸಾಹುಕಾರ್, ಸಂಗಮೇಶ ಕವಡಿಮಟ್ಟಿ, ಗೌರಮ್ಮ ಹುನಗುಂದ, ಗುರುನಾಥಗೌಡ ಬಿರಾದಾರ, ಮುನ್ನಧಣಿ ನಾಡಗೌಡ, ಹರೀಶ್ ನಾಟೆಕರ ಸೇರಿ ನೂರಾರು ರೈತರು ಉಪಸ್ಥಿತರಿದ್ದರು.