ಪಠ್ಯೇತರ ಚಟುವಟಿಕೆಗಳಿಂದ ಬಹುಮುಖ ಪ್ರತಿಭೆ ಅನಾವರಣ: ಕುಬೇರ್ ಪಿ.ಗೌಡ

| Published : Aug 22 2025, 12:00 AM IST

ಪಠ್ಯೇತರ ಚಟುವಟಿಕೆಗಳಿಂದ ಬಹುಮುಖ ಪ್ರತಿಭೆ ಅನಾವರಣ: ಕುಬೇರ್ ಪಿ.ಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಎನ್ಎಸ್ಎಸ್‌ ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ದೇಶ ಸೇವೆಯ ಕಾರ್ಯದಲ್ಲಿ ಕೈಜೋಡಿಸಲು ಸಹಾಯಕವಾಗುತ್ತದೆ. ಸಹಾಯ ಮತ್ತು ಸಹಕಾರ ಮನೋಭಾವ ಬೆಳೆಯುತ್ತದೆ. ಹಿಂದೆಂದಿಗಿಂತ ಇಂದು ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳ ಮೂಲಕ ತಮ್ಮ ಬಹುಮುಖ ಪ್ರತಿಭೆ ಅನಾವರಣಗೊಳಿಸಲು ಸಾಧ್ಯ.

ಕನ್ನಡಪ್ರಭ ವಾರ್ತೆ ಮೈಸೂರು

ಪಠ್ಯೇತರ ಚಟುವಟಿಕೆಗಳ ಮೂಲಕ ತಮ್ಮ ಬಹುಮುಖ ಪ್ರತಿಭೆ ಅನಾವರಣಗೊಳಿಸಲು ಸಾಧ್ಯ ಎಂದು ದಿ ಇನ್ಸ್ ಟಿಟ್ಯೂಟ್ ಆಫ್ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಹಾಗೂ ಮ್ಯಾನೇಜಿಂಗ್ ಟ್ರಸ್ಟಿ ಕುಬೇರ್ ಪಿ. ಗೌಡ ತಿಳಿಸಿದರು.

ಕುವೆಂಪುನಗರದ ಬಾಸುದೇವ ಸೋಮಾನಿ ಕಾಲೇಜಿನ 2025- 26ನೇ ಶೈಕ್ಷಣಿಕ ಸಾಲಿನ ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ, ವಿದ್ಯಾರ್ಥಿ ಮಂಡಳಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಅವರು ಗುರುವಾರ ಉದ್ಘಾಟಿಸಿ ಮಾತನಾಡಿದರು.

ಎನ್ಎಸ್ಎಸ್, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಶಿಕ್ಷಣದ ಪ್ರಮುಖ ಅಂಗಗಳಾಗಿವೆ. ಪಠ್ಯ ಚಟುವಟಿಕೆಯ ಜೊತೆಯಲ್ಲಿ ಕ್ರೀಡೆ, ಸಾಂಸ್ಕೃತಿಕ, ಎನ್ಎಸ್ಎಸ್ ಚಟುವಟಿಕೆಗಳ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡವರಿಗೆ ಇಂದು ದೇಶದಲ್ಲೆ ಅಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಉತ್ತಮವಾದ ಗೌರವ ಹಾಗೂ ಸನ್ಮಾನಗಳು ಲಭಿಸುತ್ತಿದೆ ಎಂದರು.

ಎನ್ಎಸ್ಎಸ್‌ ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ದೇಶ ಸೇವೆಯ ಕಾರ್ಯದಲ್ಲಿ ಕೈಜೋಡಿಸಲು ಸಹಾಯಕವಾಗುತ್ತದೆ. ಸಹಾಯ ಮತ್ತು ಸಹಕಾರ ಮನೋಭಾವ ಬೆಳೆಯುತ್ತದೆ. ಹಿಂದೆಂದಿಗಿಂತ ಇಂದು ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳ ಮೂಲಕ ತಮ್ಮ ಬಹುಮುಖ ಪ್ರತಿಭೆ ಅನಾವರಣಗೊಳಿಸಲು ಸಾಧ್ಯ. ಆದುದರಿಂದ ಅದನ್ನು ಸದುಪಯೋಗಪಡಿಸಿಕೊಳ್ಳಲು ಮುಂದಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಮಹದೇವಸ್ವಾಮಿ ಮಾತನಾಡಿ, ಪಠ್ಯೇತರ ಚಟುವಟಿಕೆಗಳಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಕಲೆಯಿಂದ ಉತ್ತಮ ಸಂಸ್ಕೃತಿಯನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಇಂದು ಕ್ರೀಡಾ ಕ್ಷೇತ್ರವು ಗಣನೀಯವಾಗಿ ಬೆಳೆದಿದ್ದು, ಇದರಲ್ಲಿ ಸಾಧನೆ ಮಾಡಿದವರಿಗೆ ಸರ್ಕಾರವು ಸನ್ಮಾನಿಸುವುದರ ಜೊತೆಗೆ ಉದ್ಯೋಗ ಹಾಗೂ ಉನ್ನತ ಶಿಕ್ಷಣಗಳಲ್ಲಿ ಮೀಸಲಾತಿ ನೀಡುತ್ತಿದೆ. ಇದರಿಂದ ಉತ್ತಮವಾದ ಜೀವನ ರೂಪಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು.

ಕಾಲೇಜಿನ ಡೀನ್ ಹಾಗೂ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಡಾ.ಟಿ.ರಮೇಶ ಮಾತನಾಡಿ, ವ್ಯಕ್ತಿತ್ವ ವಿಕಸನದಲ್ಲಿ ಪಠ್ಯೇತರ ಚಟುವಟಿಕೆಗಳು ಬಹಳ ಪ್ರಮುಖ ಪಾತ್ರ ವಹಿಸುತ್ತದೆ ಎಂದರು. ಕಾಲೇಜಿನ ಬೋಧಕ, ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಇದ್ದರು.

24ರಂದು ಅಮೃತ ವಿಶ್ವವಿದ್ಯಾಪೀಠಂನಲ್ಲಿ 15ನೇ ಪದವಿ ಪ್ರದಾನ ಸಮಾರಂಭ

ಕನ್ನಡಪ್ರಭ ವಾರ್ತೆ ಮೈಸೂರು

ಅಮೃತ ವಿಶ್ವವಿದ್ಯಾಪೀಠಂ ವತಿಯಿಂದ 15ನೇ ಪದವಿ ಪ್ರದಾನ ಸಮಾರಂಭವು ಆ. 24ರ ಬೆಳಗ್ಗೆ 10ಕ್ಕೆ ನಗರದ ಬೋಗಾದಿಯ ಎರಡನೇ ಹಂತದಲ್ಲಿರುವ ಅಮೃತ ವಿಶ್ವವಿದ್ಯಾಪೀಠಂ ನ ಆವರಣದಲ್ಲಿ ಆಯೋಜಿಸಿದೆ.

ಇನ್ಫೋಸಿಸ್ ಮೈಸೂರಿನ ಉಪಾಧ್ಯಕ್ಷರು ಮತ್ತು ಮುಖ್ಯಸ್ಥ ವಿನಾಯಕ ಹೆಗಡೆ ಅವರು ಪದವಿ ಪ್ರದಾನ ಸಮಾರಂಭದ ಮುಖ್ಯಅತಿಥಿಯಾಗಿ ಪಾಲ್ಗೊಳ್ಳಲಿದ್ದು, ನೂತನ ಯುವ ಪದವೀಧರರನ್ನು ಉದ್ದೇಶಿಸಿ ಮಾತನಾಡುವರು.

ಮಾತಾ ಅಮೃತಾನಂದಮಯಿ ಮಠದ ಪ್ರಧಾನ ಕಾರ್ಯದರ್ಶಿ ಸ್ವಾಮಿ ಪೂರ್ಣಾಮೃತಾನಂದ ಪುರಿ ಅವರು ಆಶೀರ್ವಚನ ನೀಡುವರು. ಒಟ್ಟು 661 ಪಿಎಚ್.ಡಿ, ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಥಿಗಳು ಹಾಗೂ 61 ರ್ಯಾಂಕ್ ವಿಜೇತ ವಿದ್ಯಾರ್ಥಿಗಳು ಪದಕ ಹಾಗೂ ಪದವಿಗಳನ್ನು ಸ್ವೀಕರಿಸಲಿದ್ದಾರೆ.