ಇಲ್ಲಿಯ ಸಾರಿಗೆ ಸಂಸ್ಥೆ ಬಸ್ ನಿಲ್ದಾಣ ಸಂಪೂರ್ಣ ಮೂಲಭೂತ ಸೌಲಭ್ಯ ವಂಚಿತವಾಗಿ ಅವ್ಯವಸ್ಥೆಯ ಆಗರವಾಗಿದ್ದು, ಸಾರ್ವಜನಿಕರು ಮತ್ತು ಪ್ರಯಾಣಿಕರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ.

ಸಾರ್ವಜನಿಕರು, ಪ್ರಯಾಣಿಕರ ಪರದಾಟ । ಸಂಪೂರ್ಣ ಮೂಲಭೂತ ಸೌಲಭ್ಯ ವಂಚಿತ

ಸಂತೋಷ ದೈವಜ್ಞ

ಕನ್ನಡಪ್ರಭ ವಾರ್ತೆ ಮುಂಡಗೋಡ

ಇಲ್ಲಿಯ ಸಾರಿಗೆ ಸಂಸ್ಥೆ ಬಸ್ ನಿಲ್ದಾಣ ಸಂಪೂರ್ಣ ಮೂಲಭೂತ ಸೌಲಭ್ಯ ವಂಚಿತವಾಗಿ ಅವ್ಯವಸ್ಥೆಯ ಆಗರವಾಗಿದ್ದು, ಸಾರ್ವಜನಿಕರು ಮತ್ತು ಪ್ರಯಾಣಿಕರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ.

ಬಸ್ ನಿಲ್ದಾಣದ ಎದುರು ಗುಂಡಿಗಳು ನಿರ್ಮಾಣವಾಗಿದ್ದು, ಬಸ್‌ಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಮಳೆ ಬಂದಾಗ ಗುಂಡಿಗಳಲ್ಲಿ ನೀರು ನಿಂತು ಪ್ರಯಾಣಿಕರು ಹಾಗೂ ವಾಹನ ಸವಾರರು ಪರದಾಡುವಂತಾಗುತ್ತದೆ. ಅಪಾಯ ಸಂಭವಿಸುವ ಸಾಧ್ಯತೆಯೂ ಹೆಚ್ಚಿದೆ. ಸಮರ್ಪಕ ವಿದ್ಯುತ್ ವ್ಯವಸ್ಥೆಯಿಲ್ಲದ ಕಾರಣ ರಾತ್ರಿವೇಳೆ ಬಸ್ ನಿಲ್ದಾಣ ಕತ್ತಲಲ್ಲಿ ಮುಳುಗುತ್ತದೆ. ಬಸ್ ನಿಲ್ದಾಣದಲ್ಲಿ ಅಳವಡಿಸಲಾದ ಬಹುತೇಕ ವಿದ್ಯುತ್ ದೀಪಗಳು ಹಾಳಾಗಿದ್ದು, ರಾತ್ರಿ ವೇಳೆಯಲ್ಲಿ ಪ್ರಯಾಣಿಕರು ಕತ್ತಲೆಯಲ್ಲೇ ಬಸ್‌ಗಾಗಿ ಕಾಯುವ ದುಸ್ಥಿತಿ ಎದುರಿಸುತ್ತಿದ್ದಾರೆ. ರಾತ್ರಿ ೯.೩೦ಕ್ಕೆ ಬಸ್ ನಿಲ್ದಾಣದ ಸಂಪೂರ್ಣ ವಿದ್ಯುತ್ ದೀಪಗಳನ್ನು ಬಂದ್ ಮಾಡಲಾಗುತ್ತದೆ. ಆನಂತರ ಪ್ರಯಾಣಿಕರು ಬಸ್‌ ನಿಲ್ದಾಣ ಪ್ರವೇಶಿಸದೇ, ರಸ್ತೆಯಲ್ಲಿ ಬಸ್‌ಗಾಗಿ ಕಾದು ನಿಲ್ಲುತ್ತಾರೆ. ರಾತ್ರಿ ವೇಳೆ ಬೆಂಗಳೂರು, ಮಂಗಳೂರು, ಧರ್ಮಸ್ಥಳ ಹೀಗೆ ವಿವಿಧ ಕಡೆಗಳಿಗೆ ಪ್ರಯಾಣಿಸಬೇಕಾದ ಪ್ರಯಾಣಿಕರು ರಸ್ತೆಯಲ್ಲಿಯೇ ಬಸ್ ಕಾಯುವುದು ಅನಿವಾರ್ಯವಾಗಿದೆ.

ಬಾಡಿಗೆ ಆದಾಯವಿದ್ದರೂ ಸೌಲಭ್ಯಗಳಿಲ್ಲ:

ಮುಂಡಗೋಡ ಬಸ್ ನಿಲ್ದಾಣದಲ್ಲಿ ಹತ್ತಾರು ಅಂಗಡಿಗಳಿವೆ. ಅವುಗಳಿಂದ ಪ್ರತಿ ತಿಂಗಳು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಲಕ್ಷಾಂತರ ರುಪಾಯಿ ಬಾಡಿಗೆ ಆದಾಯ ಬರುತ್ತಿದೆ. ಬಸ್ ನಿಲ್ದಾಣ ಸುಸ್ಥಿತಿಯಲ್ಲಿಡಲು ಸಾಧ್ಯವಾಗುವುದಿಲ್ಲವೇ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಕರೆ ಸ್ವೀಕರಿಸದ ಸಾರಿಗೆ ಅಧಿಕಾರಿ:

ಇಲ್ಲಿಯ ಸಮಸ್ಯೆಗಳ ಬಗ್ಗೆ ಉತ್ತರ ಕನ್ನಡ ವಿಭಾಗ ಕೆಎಸ್‌ಆರ್‌ಟಿಸಿ ನಿಯಂತ್ರಣಾಧಿಕಾರಿಗೆ ಸಾಕಷ್ಟು ಬಾರಿ ಕರೆ ಮಾಡಿದರೂ ಕರೆ ಸ್ವೀಕರಿಸುವುದಿಲ್ಲ, ಸಮಸ್ಯೆಗೆ ಯಾರಿಂದಲೂ ಸ್ಪಂದನೆ ಸಿಗುವುದಿಲ್ಲ ಎಂಬುದು ಸಾರ್ವಜನಿಕರ ಸಾಮಾನ್ಯ ದೂರಾಗಿದೆ.

ಇಲಾಖೆ ಮೇಲಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಸಮಸ್ಯೆಗಳನ್ನು ಪರಿಶೀಲಿಸಿ ರಸ್ತೆ ದುರಸ್ತಿ, ಗುಂಡಿ ಮುಚ್ಚುವ ಕೆಲಸ ಹಾಗೂ ಬಸ್ ನಿಲ್ದಾಣದಲ್ಲಿ ಸಮರ್ಪಕ ವಿದ್ಯುತ್ ದೀಪಗಳ ವ್ಯವಸ್ಥೆ ತಕ್ಷಣ ಕಲ್ಪಿಸುವ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಕೂಡಲೇ ಬಸ್ ನಿಲ್ದಾಣದ ಅವ್ಯವಸ್ಥೆ ಸರಿಪಡಿಸಿ, ಪ್ರಯಾಣಿಕರಿಗೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸದಿದ್ದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.ಬಸ್ ನಿಲ್ದಾಣದಲ್ಲಿ ರಾತ್ರಿ ವೇಳೆ ವಿದ್ಯುತ್ ದೀಪವಿರದ ಕಾರಣ ಪ್ರಯಾಣಿಕರು ರಸ್ತೆ ಮೇಲೆ ನಿಲ್ಲುತ್ತಾರೆ. ಬಸ್ ನಿಲ್ದಾಣದ ಎದುರು ಗುಂಡಿ ಬಿದ್ದು, ಅಪಘಾತಗಳು ಸಂಭವಿಸುತ್ತಿವೆ. ಸಾಕಷ್ಟು ಆದಾಯವಿದ್ದರೂ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಸಾರಿಗೆ ಸಂಸ್ಥೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸುತ್ತಾರೆ ಸಾಮಾಜಿಕ ಕಾರ್ಯಕರ್ತ ಎ.ಎಸ್. ವಾದಿರಾಜ.