ಕನ್ನಡಪ್ರಭ ವಾರ್ತೆ ಬೇಲೂರು

ಪಟ್ಟಣದ ಬಿಇಒ ಕಚೇರಿ ಸಮೀಪ ನಡೆಯುತ್ತಿರುವ ರಸ್ತೆ ಡಾಂಬರೀಕರಣ ಕಾಮಗಾರಿ ಸ್ಥಳಕ್ಕೆ ಪುರಸಭೆ ಅಧ್ಯಕ್ಷೆ ಉಷಾ ಸತೀಶ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾಮಗಾರಿ ಪ್ರಗತಿ ಹಾಗೂ ಗುಣಮಟ್ಟವನ್ನು ಸ್ವತಃ ಪರಿಶೀಲಿಸಿದ ಅವರು ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದು ಮಾತನಾಡಿ, ಬಿಇಒ ಕಚೇರಿ, ಶಾಲೆ ಹಾಗೂ ಒಕ್ಕಲಿಗರ ಸಮುದಾಯ ಭವನ ಇರುವ ಈ ಪ್ರದೇಶದಲ್ಲಿ ಸಾರ್ವಜನಿಕರ ಸಂಚಾರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ವಿಶೇಷವಾಗಿ ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುವುದರಿಂದ ರಸ್ತೆ ಸುರಕ್ಷತೆ ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು.

ಜನಸಂದಣಿ ಹೆಚ್ಚಿರುವ ಹಿನ್ನೆಲೆಯಲ್ಲಿ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ರಸ್ತೆಯ ಪ್ರಮುಖ ಸ್ಥಳಗಳಲ್ಲಿ ಸ್ಪೀಡ್ ಬ್ರೇಕರ್‌ಗಳು (ಹಂಪ್ಸ್) ಅಳವಡಿಸಲಾಗುತ್ತಿದೆ. ವಾಹನಗಳು ಅತಿವೇಗದಲ್ಲಿ ಸಂಚರಿಸದಂತೆ ನಿಯಂತ್ರಿಸಿ, ಪಾದಚಾರಿಗಳು ಹಾಗೂ ಮಕ್ಕಳಿಗೆ ಸುರಕ್ಷಿತ ವಾತಾವರಣ ಕಲ್ಪಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು. ಡಾಂಬರೀಕರಣ ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಿದ ಅವರು, “ತಾಂತ್ರಿಕ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ದೀರ್ಘಕಾಲ ಬಾಳಿಕೆ ಬರುವ ರಸ್ತೆಯನ್ನು ನಿರ್ಮಿಸಬೇಕು. ಯಾವುದೇ ರೀತಿ ಲೋಪಗಳು ಬರಬಾರದು ಎಂದು ಸೂಚಿಸಿದರು. ಇದೇ ವೇಳೆ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಹಾಗೂ ಕಾಮಗಾರಿ ವೇಳೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ಬಸವರಾಜು ಶಿಗ್ಗಾವಿ, ಪುರಸಭೆ ಆರೋಗ್ಯ ಅಧಿಕಾರಿ ಲೋಹಿತ್ , ಇಂಜಿನಿಯರ್‌ಗಳು, ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.