ಭದ್ರಾವತಿಯಲ್ಲಿ ಪೌರ ಕಾರ್ಮಿಕರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

| Published : Jun 02 2025, 01:14 AM IST

ಸಾರಾಂಶ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪೌರಕಾರ್ಮಿಕರು ನಗರಸಭೆ ಮುಂಭಾಗ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ ೩ನೇ ದಿನ ಭಾನುವಾರ ಸಹ ನಡೆಯಿತು. ಈ ನಡುವೆ ಶಾಸಕರ ಭರವಸೆ ಮೇರೆಗೆ ಮುಷ್ಕರ ತಾತ್ಕಾಲಿಕವಾಗಿ ಮುಂದೂಡಲಾಯಿತು.

3ನೇ ದಿನಕ್ಕೆ ಕಾಲಿಟ್ಟಿದ್ದ ಪ್ರತಿಭಟನೆ । ಶಾಸಕರ ಭರವಸೆ ಮೇರೆಗೆ ವಿರಾಮ । ತಕ್ಷಣ ಬೇಡಿಕೆ ಈಡೇರಿಸುವಂತೆ ಒತ್ತಾಯ

ಕನ್ನಡಪ್ರಭ ವಾರ್ತೆ ಭದ್ರಾವತಿ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪೌರಕಾರ್ಮಿಕರು ನಗರಸಭೆ ಮುಂಭಾಗ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ ೩ನೇ ದಿನ ಭಾನುವಾರ ಸಹ ನಡೆಯಿತು. ಈ ನಡುವೆ ಶಾಸಕರ ಭರವಸೆ ಮೇರೆಗೆ ಮುಷ್ಕರ ತಾತ್ಕಾಲಿಕವಾಗಿ ಮುಂದೂಡಲಾಯಿತು.

ಮುಷ್ಕರ ಸ್ಥಳಕ್ಕೆ ಭೇಟಿ ನೀಡಿದ ನಗರಸಭೆ ಹಿರಿಯ ಸದಸ್ಯ, ಶಾಸಕರ ಸಹೋದರ ಬಿ.ಕೆ.ಮೋಹನ್ ಮಾತನಾಡಿ, ಪ್ರಸ್ತುತ ಶಾಸಕರು ತಮ್ಮ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ. ಅವರ ಭರವಸೆ ಮೇಲೆ ನಂಬಿಕೆ ಹೊಂದುವ ಮೂಲಕ ಮುಷ್ಕರ ಕೈಬಿಡುವಂತೆ ಮನವಿ ಮಾಡಿದರು.

ನಾವು ಸಹ ಪೌರಕಾರ್ಮಿಕರ ಬೇಡಿಕೆಗಳ ಪರವಾಗಿದ್ದೇವೆ. ನಾವು ಬೇಡಿಕೆಗಳನ್ನು ವಿರೋಧಿಸುವುದಿಲ್ಲ. ನಮ್ಮ ಸರ್ಕಾರ ಪೌರಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ವಿಶ್ವಾಸವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನ ಸೆಳೆಯುವ ನಿಟ್ಟಿನಲ್ಲಿ ಹೋರಾಟ ರೂಪಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ನಿಮ್ಮ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಶಾಸಕರು ಸಹ ನಿಮ್ಮ ಪರವಾಗಿದ್ದು, ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಒತ್ತಾಯಿಸಲಿದ್ದಾರೆ. ಹೋರಾಟ ಒಂದೆಡೆ ಇರಲಿ ನಮ್ಮ ನಿಮ್ಮ ನಡುವೆ ಪ್ರೀತಿ, ವಿಶ್ವಾಸ, ನಂಬಿಕೆ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್ ಮಾತನಾಡಿ, ನಮ್ಮ ಸರ್ಕಾರ ಪೌರಕಾರ್ಮಿಕ ಬೇಡಿಕೆಗಳನ್ನು ಈಡೇರಿಸಲಿದೆ. ಕಾಂಗ್ರೆಸ್ ಪಕ್ಷ ನಿಮ್ಮ ಹೋರಾಟಕ್ಕೆ ಸದಾ ಬೆಂಬಲ ನೀಡುತ್ತದೆ. ಪೌರಕಾರ್ಮಿಕರ ಹಿತ ಪಕ್ಷದ ಹಿತವಾಗಿದೆ. ಹೋರಾಟಕ್ಕೆ ಬೆಂಬಲ ನೀಡುವ ವಿಚಾರದಲ್ಲಿ ಯಾವುದೇ ರಾಜೀ ಇಲ್ಲ. ಯಾವುದೇ ರೀತಿಯ ಹೋರಾಟಕ್ಕೂ ಪಕ್ಷ ಬೆಂಬಲ ನೀಡಲಿದೆ ಎಂದರು.

ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ತಾಲೂಕು ಶಾಖೆ ಅಧ್ಯಕ್ಷ ಎಸ್.ಚೇತನ್‌ಕುಮಾರ್ ಮಾತನಾಡಿ, ಶಾಸಕರ ಮೇಲೆ ನಂಬಿಕೆ ಇದೆ. ಹೋರಾಟವನ್ನು ತಾತ್ಕಲಿಕವಾಗಿ ಮುಂದೂಡಲಾಗುವುದು. ನಮ್ಮ ಬೇಡಿಕೆಗಳನ್ನು ನಾವು ಹಿಂಪಡೆಯಲು ಸಾಧ್ಯವಿಲ್ಲ. ಸರ್ಕಾರ ತಕ್ಷಣ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು.

ನಗರಸಭೆ ಉಪಾಧ್ಯಕ್ಷ ಎಂ.ಮಣಿ ಎಎನ್‌ಎಸ್, ಪ್ರಭಾರ ಪೌರಾಯುಕ್ತರಾದ ಸುನಿತಾಕುಮಾರಿ, ಸದಸ್ಯರಾದ ಚನ್ನಪ್ಪ, ಬಿ.ಎಂ ಮಂಜುನಾಥ್, ಮುಖಂಡರಾದ ಅಮೀರ್‌ಜಾನ್, ಶ್ರೀನಿವಾಸ್, ಮೋಹನ್, ರಂಗನಾಥ್ (ಕಬಡ್ಡಿ), ರಾಜೇಂದ್ರ ಸೇರಿಂದ ಇತರರು ಪಾಲ್ಗೊಂಡಿದ್ದರು.

ಪ್ರಧಾನ ಕಾರ್ಯದರ್ಶಿ ಸಿ.ರವಿಪ್ರಸಾದ್, ಜಿಲ್ಲಾಧ್ಯಕ್ಷ ಡಿ.ಎಸ್ ಹೇಮಂತ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್. ನರಸಿಂಹಮೂರ್ತಿ ಸೇರಿದಂತೆ ನಗರಸಭೆ ಸಿಬ್ಬಂದಿ ಮತ್ತು ಪೌರಕಾರ್ಮಿಕರು ಇದ್ದರು.