ಸಾರಾಂಶ
ಕೋಲ್ಕತ್ತಾದ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಕೃತ್ಯವನ್ನು ಪ್ರಕರಣ ಖಂಡಿಸಿ ಶಿರಸಿಯ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನಿಂದ ಸಹಾಯಕ ಆಯುಕ್ತರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಶಿರಸಿ: ಕೋಲ್ಕತ್ತಾದ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಕೃತ್ಯವನ್ನು ಪ್ರಕರಣ ಖಂಡಿಸಿ, ಆರೋಪಿಗಳಿಗೆ ಸೂಕ್ತ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ, ಇಲ್ಲಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನಿಂದ ಸಹಾಯಕ ಆಯುಕ್ತರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ವೈದ್ಯರು ದೇವರಿಗೆ ಸಮಾನ. ಪಶ್ಚಿಮ ಬಂಗಾಳದ ಕೋಲ್ಕತ್ತಾದ ವೈದ್ಯಕೀಯ ಕಾಲೇಜಿನ ಸೆಮಿನಾರ್ ಹಾಲ್ನಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣ ಮಾನವೀಯ ಸಮಾಜ ತಲೆತಗ್ಗಿಸುವಂತಾಗಿದೆ. ಕಾಲೇಜಿನ ಸೆಮಿನಾರ್ ಹಾಲ್ನಲ್ಲಿ ಅತ್ಯಾಚಾರ ಮಾಡುವ ಸ್ಥಿತಿಗೆ ವ್ಯಕ್ತಿಗಳು ಬಂದಿರುವುದಕ್ಕೆ ಮೂಲ ಕಾರಣ ಅಲ್ಲಿನ ರಾಜ್ಯ ಸರ್ಕಾರ ಹಿಂದಿನ ಎಷ್ಟೋ ಪ್ರಕರಣದ ಆರೋಪಿಗಳಿಗೆ ಶಿಕ್ಷೆಯನ್ನು ವಿಧಿಸದೇ, ಆರೋಪಿಗಳ ಬೆನ್ನಿಗೆ ನೇರವಾಗಿ ಮಮತಾ ಬ್ಯಾನರ್ಜಿ ಸರ್ಕಾರ ನಿಂತಿರುವುದು ಹಲವು ಪ್ರಕರಣಗಳಲ್ಲಿ ಕಂಡು ಬಂದಿದೆ. ಇಂತಹ ಸರ್ಕಾರಗಳ ನಡೆಯಿಂದ ಮತ್ತೆ ಮತ್ತೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ನಡೆಯುತ್ತಿವೆ. ಕಳೆದ ಹಲವು ತಿಂಗಳುಗಳಿಂದ ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದ ಘಟನೆಗಳು ನಡೆಯುತ್ತಿವೆ. ಪಶ್ಚಿಮ ಬಂಗಾಳದ ಮಮತಾ ಸರ್ಕಾರವು ಇಂತಹ ದುಷ್ಕೃತ್ಯಗಳಲ್ಲಿ ತೊಡಗಿರುವ ಜನರನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ. ಈ ಹಿಂದೆ ಟಿಎಂಸಿ ಗೂಂಡಾಗಳಿಂದ ಇಂತಹ ಅನೇಕ ಅತ್ಯಾಚಾರಗಳು ನಡೆದಿವೆ. ಆದರೆ ಅಲ್ಲಿನ ಸರ್ಕಾರ ಅವರ ವಿರುದ್ಧ ಕ್ರಮ ಕೈಗೊಂಡಿರಲಿಲ್ಲ. ಬಂಗಾಳದಲ್ಲಿ ನಡೆಯುತ್ತಿರುವ ಈ ಘಟನೆಗಳು ಮಾನವೀಯತೆಗೆ ನಾಚಿಕೆಗೇಡು. ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗಬೇಕು ಮತ್ತು ಮಮತಾ ಸರ್ಕಾರದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಪತ್ರದಲ್ಲಿ ರಾಷ್ಟ್ರಪತಿಯನ್ನು ಒತ್ತಾಯಿಸಿದ್ದಾರೆ.ಸಹಾಯಕ ಆಯುಕ್ತೆ ಕೆ.ವಿ. ಕಾವ್ಯಾರಾಣಿ ಮನವಿ ಸ್ವೀಕರಿಸಿದರು.
ಮನವಿ ಸಲ್ಲಿಸುವ ವೇಳೆ ಎಬಿವಿಪಿ ನಗರ ಕಾರ್ಯದರ್ಶಿ ಪ್ರಸನ್ನ ಮರಾಠಿ, ವಿಭಾಗ ಸಂಚಾಲಕ ಕುಮಾರ್ ಗೌಡ, ಕಾರ್ಯಕರ್ತರಾದ ರವೀಶ, ಅಕ್ಷಯ ಮೊಗೇರ, ದರ್ಶನ ಇದ್ದರು.