ಯುವಜನತೆ ಸಂಗೀತ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಹೆಚ್ಚು ಭಾಗವಹಿಸಬೇಕು.
ಕುಷ್ಟಗಿ: ಸಂಗೀತ ಮಾನವನ ಮನಸ್ಸಿಗೆ ನೆಮ್ಮದಿ ನೀಡುವ ಶಕ್ತಿ ಹೊಂದಿದ್ದು, ಭಾರತೀಯ ಸಂಸ್ಕೃತಿ ಮತ್ತು ಪರಂಪರೆ ಉಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಕರಿಬಸವ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ತಾಲೂಕಿನ ಬಿಜಕಲ್ ಗ್ರಾಮದಲ್ಲಿ ಶ್ರೀಗುರು ಕುಮಾರೇಶ್ವರ ಸಾಂಸ್ಕೃತಿಕ ಕಲಾ ಸಂಸ್ಥೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ಗಾನ ಲಹರಿ ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಯುವಜನತೆ ಸಂಗೀತ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಹೆಚ್ಚು ಭಾಗವಹಿಸಬೇಕು. ಕಲಾವಿದರನ್ನು ಪ್ರೋತ್ಸಾಹಿಸುವ ಮೂಲಕ ಸಮಾಜದಲ್ಲಿ ಸೌಹಾರ್ದತೆ ಮತ್ತು ಸಾಂಸ್ಕೃತಿಕ ಮೌಲ್ಯ ಬೆಳೆಸಬಹುದು ಎಂದು ತಿಳಿಸಿದರು.
ರೋಗ ಗುಣಪಡಿಸುವ ಅದ್ಭುತ ಶಕ್ತಿ ಸಂಗೀತಕ್ಕಿದೆ. ಹಾಗಾಗಿ ಮನುಷ್ಯ ಮಾನಸಿಕ ಒತ್ತಡದಿಂದ ಹೊರಬಂದು ನೆಮ್ಮದಿ ಪಡೆಯಬೇಕಾದರೆ ಪ್ರತಿಯೊಬ್ಬರೂ ಸಂಗೀತ ಆಲಿಸಬೇಕು. ಕಲಾವಿದರನ್ನು ಪ್ರೋತ್ಸಾಹಿಸಬೇಕು ಎಂದ ಅವರು, ಸಂಗೀತ ಕಲಾವಿದರಿಗೆ ಕಾರ್ಯಕ್ರಮ ನೀಡುವ ಮೂಲಕ ಕಲೆ ಪ್ರೋತ್ಸಾಹಿಸುತ್ತಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯ ಶ್ಲಾಘನೀಯ ಎಂದು ಹೇಳಿದರು.ಕಲಾವಿದ ಮಲ್ಲಯ್ಯ ಹಿರೇಮಠ್ ಮಾತನಾಡಿ, ಸಂಗೀತವು ಮನಸ್ಸಿಗೆ ನೆಮ್ಮದಿ ನೀಡುವುದರ ಜತೆಗೆ ಸಮಾಜದಲ್ಲಿ ಸೌಹಾರ್ದತೆ ಬೆಳೆಸುವ ಶಕ್ತಿಯಾಗಿದೆ.ಇಂದಿನ ಯುವಜನತೆ ಸಂಗೀತ, ಸಾಹಿತ್ಯ ಹಾಗೂ ಸಂಸ್ಕೃತಿಯತ್ತ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು.ಇಂತಹ ಕಾರ್ಯಕ್ರಮಗಳು ಕಲಾವಿದರಿಗೆ ವೇದಿಕೆ ಒದಗಿಸುವುದರ ಜತೆಗೆ ನಮ್ಮ ಸಂಸ್ಕೃತಿ ಮತ್ತು ಪರಂಪರೆ ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಿವಶಾಂತವೀರ ಸ್ವಾಮಿಗಳು, ರುದ್ರಯ್ಯ ಮಠಪತಿ, ಬಸವರಾಜ್ ಹೂಗಾರ್, ಸಂಗಪ್ಪ ತೆಗ್ಗಿನಮನಿ, ರಮೇಶ ಎಚ್, ಶರಣಪ್ಪ, ಕಲಾವಿದ ಡಿ. ಮೌನೇಶ ಕುಮಾರ್ ಲಿಂಗನಬಂಡಿ, ಶಾಸ್ತ್ರೀಯ ಸಂಗೀತ ಹನಮಂತ ಕುಮಾರ, ಪವಿತ್ರ, ಶರಣಬಸವ ಚನ್ನದಾಸರ, ಮಹಾಂತೇಶ ಬಿಜಕಲ್ ಸೇರಿದಂತೆ ಅನೇಕರು ಇದ್ದರು.ಇದೆ ವೇಳೆ ಕಲಾವಿದರು ಸುಗಮ ಸಂಗೀತ, ಭಕ್ತಿಗೀತೆ, ಭಾವಗೀತೆ, ಜಾನಪದ ಸಂಗೀತ ಗಾಯನ ಪ್ರಸ್ತುತ ಪಡಿಸಿದರು.