ಸಾರಾಂಶ
- ರಾಷ್ಟ್ರ. ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತರು ಹಾಗೂ ಚುನಾಯಿತ ಪ್ರತಿನಿಧಿಗಳಿಗೆ ಸನ್ಮಾನಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ಮುಸ್ಲಿಂ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರಬೇಕಾದರೆ ಆ ವರ್ಗದ ಜನ ರಾಜಕೀಯ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಬೆಳೆಯಬೇಕು ಎಂದು ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮದ್ ಹೇಳಿದರು.ರಾಜ್ಯ ಮುಸ್ಲಿಂ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕ ನಗರದ ಸರ್ಕಾರಿ ನೌಕರರ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ರಾಷ್ಟ್ರ, ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತರು ಹಾಗೂ ಚುನಾಯಿತ ಪ್ರತಿನಿಧಿಗಳಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮುಸ್ಲಿಂ ಸಮುದಾಯ ಅಭಿವೃದ್ಧಿಯಲ್ಲಿ ಹಿಂದುಳಿದಿರುವುದಕ್ಕೆ ಮೂಲ ಕಾರಣ ಆ ವರ್ಗದಲ್ಲಿ ಶಿಕ್ಷಣವಂತರ ಸಂಖ್ಯೆ ಕಡಿಮೆ ಇರುವುದು. ಕಾರ್ಮಿಕರ ಸಂಖ್ಯೆ ಹೆಚ್ಚಿರುವುದು ಎಂದ ಅವರು, ಮುಸ್ಲಿಂ ಜನಾಂಗ ಪ್ರಗತಿ ಹೊಂದಬೇಕಾದರೆ ಆ ಸಮುದಾಯದವರು ಸಂಘಟಿತರಾಗಬೇಕು. ಕೌಶಲ್ಯ ಬೆಳೆಸಿಕೊಳ್ಳಬೇಕು. ಶಿಕ್ಷಿತರಾಗಿ, ಅಧಿಕಾರಿಗಳಾಗಿ ಹೊರಹೊಮ್ಮಬೇಕು ಎಂದು ಕಿವಿ ಮಾತು ಹೇಳಿದರು.
ಮುಸ್ಲಿಂ ಸಮುದಾಯದ ಅಧಿಕಾರಿಗಳು, ನೌಕರರು, ತಮ್ಮ ಜನಾಂಗದವರನ್ನು ಶಿಕ್ಷಣವಂತರನ್ನಾಗಿಸಲು ಪ್ರಯತ್ನಿಸಬೇಕು. ಅವರನ್ನು ಕೈಹಿಡಿದು ಮೇಲೆತ್ತುವ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.ಮುಸ್ಲಿಂ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಹೊರ ತಂದಿರುವ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದೇವೇಂದ್ರ, ಸರ್ಕಾರಿ ನೌಕರರು ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗೆ ನಿರಂತರವಾಗಿ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಸಂಘದ ಚುನಾವಣೆ ವೇಳೆ ಮತ್ತು ಸಂಕಷ್ಟದ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ನೌಕರರು ತಮ್ಮೊಂದಿಗೆ ನಿಂತಿದ್ದಾರೆ. ತಮ್ಮ ಕೈ ಹಿಡಿದಿದ್ದಾರೆ. ಹಾಗಾಗಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.ಪ್ರಾಸ್ತಾವಿಕವಾಗಿ ಮಾತನಾಡಿದ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಮುನಾವರ್ ಭಾಷಾ, ಮುಸ್ಲಿಂ ನೌಕರರು ಹೆಂಡತಿ, ಮಕ್ಕಳು ಮತ್ತು ಕುಟುಂಬಕಷ್ಟೇ ಸೀಮಿತರಾಗದೇ ಏನನ್ನಾದರೂ ಹೆಚ್ಚಿನದನ್ನು ಸಾಧಿಸಬೇಕು. ಅಧಿಕಾರಾವಧಿಯಲ್ಲಿ ಜನಪರವಾಗಿ ಕೆಲಸ ಮಾಡಬೇಕು. ಸಮುದಾಯದ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.
ಮುಸ್ಲಿಂ ಸಮುದಾಯದ ಜನ ತಮ್ಮ ಮಕ್ಕಳಿಗೆ ಜೀವನದ ಮೌಲ್ಯಗಳನ್ನು ಕಲಿಸಬೇಕು. ವಿಶ್ವಾಸ, ಸಂಸ್ಕೃತಿ, ಸಂಸ್ಕಾರ ವನ್ನು ಅವರಲ್ಲಿ ಬೆಳೆಸಬೇಕು ಎಂದು ಸಲಹೆ ಮಾಡಿದರು.ದಾದಾಸಾಹೇಬ್ ಅಂಬೇಡ್ಕರ್ ರಚಿಸಿರುವ ನಮ್ಮ ಸಂವಿಧಾನ ಪ್ರಪಂಚದ ಎಲ್ಲಾ ದೇಶಗಳಿಗೂ ಮಾದರಿಯಾಗಿದೆ. ರಾಷ್ಟ್ರಕವಿ ಕುವೆಂಪು ಹೇಳಿರುವಂತೆ ನಮ್ಮ ರಾಜ್ಯ ಮತ್ತು ದೇಶ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ನಾವು ಅದರಲ್ಲಿರುವ ಹೂವುಗಳು. ಹಾಗಾಗಿ ಎಲ್ಲರೂ ಪರಸ್ಪರ ಹೊಂದಿಕೊಂಡು ಸೌಹಾರ್ದ ಸಾಮರಸ್ಯದಿಂದ ಬಾಳುವುದು ಅತ್ಯಗತ್ಯ ಎಂದರು.
ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘ ಸಮುದಾಯದ ಸಾಧಕರನ್ನು ಗುರುತಿಸಿ ಅವರನ್ನು ಅಭಿನಂದಿಸಿ ಪ್ರೋತ್ಸಾಹಿಸುವ ಕೆಲಸವನ್ನು ರಾಜ್ಯಾದ್ಯಂತ ನಿರಂತರವಾಗಿ ಮಾಡುತ್ತಿದೆ. ಪ್ರತಿ ವರ್ಷ ಅಭಿನಂದನಾ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ತಿಳಿಸಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಸಯ್ಯದ್ ತಾರೀಖ್ ಅಲಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿ ದವರಿಗೆ ಕೃತಜ್ಞತೆ ಸಲ್ಲಿಸಿದರು. ರಾಷ್ಟ್ರ, ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಗಳಿಸಿದ 150 ನೌಕರರು ಹಾಗೂ ಚುನಾಯಿತ ಪ್ರತಿನಿಧಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಸರ್ಕಾರಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪದ್ಮರಾಜ್, ಸಂಘದ ಮಹಿಳಾ ಅಧ್ಯಕ್ಷೆ ನಜ್ಮಾ, ಜಿಲ್ಲಾ ಉಪಾಧ್ಯಕ್ಷ ಅಸ್ಗರ್ ಅಲಿಖಾನ್, ಮೊಹಮ್ಮದ್ ಅಮೀನ್, ಖಜಾಂಚಿ ಅಫ್ತಾಬ್ ಅಹಮದ್, ಉರ್ದು ಅದಬ್ ಅಧ್ಯಕ್ಷ ಜಂಶೀದ್ ಅಲಿ, ಮಡಿಕೇರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಾಹಾ ಹುಸೇನಿ ಉಪಸ್ಥಿತರಿದ್ದರು.9 ಕೆಸಿಕೆಎಂ 1
ಚಿಕ್ಕಮಗಳೂರಿನ ಸರ್ಕಾರಿ ನೌಕರರ ಭವನದಲ್ಲಿ ಭಾನುವಾರ ರಾಜ್ಯ ಮುಸ್ಲಿಂ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ರಾಷ್ಟ್ರ, ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತರು ಹಾಗೂ ಚುನಾಯಿತ ಪ್ರತಿನಿಧಿಗಳಿಗೆ ಸನ್ಮಾನಿಸಿತು.