ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಮತ್ತು ವಿದಾಯ ನನಗೆ ಗೊತ್ತಿಲ್ಲದೆ ನೋವನ್ನುಂಟು ಮಾಡಿದೆ. ನಾನು ಆ ಪಕ್ಷದಲ್ಲಿ ಇರದೇ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ.

ಹಾವೇರಿ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಮತ್ತು ವಿದಾಯ ನನಗೆ ಗೊತ್ತಿಲ್ಲದೆ ನೋವನ್ನುಂಟು ಮಾಡಿದೆ. ನಾನು ಆ ಪಕ್ಷದಲ್ಲಿ ಇರದೇ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, ತಾವು ಪೊಲೀಸ್ ಅಧಿಕಾರಿಯಾಗಿದ್ದ ಕಾಲದಿಂದಲೇ ಸಿದ್ದರಾಮಯ್ಯ ಅವರನ್ನು ನೋಡಿದ್ದು, 2004ರಿಂದ ಅವರೊಂದಿಗೆ ಶಾಸಕನಾಗಿ ಕೆಲಸ ಮಾಡಿದ್ದೇನೆ. 2006ರಲ್ಲಿ ಅವರು ಕಾಂಗ್ರೆಸ್ಸಿಗೆ ಹೋಗಿ ಚುನಾವಣೆಗೆ ಸ್ಪರ್ಧಿಸಿದಾಗ ನಾನು ವಿರೋಧಿಸಿದ್ದೂ ಇದೆ. ಆದರೆ 2008ರಲ್ಲಿ ನಾನು ಕಾಂಗ್ರೆಸ್ಸಿಗೆ ಬಂದ ನಂತರ ಅದನ್ನಾವುದನ್ನೂ ಅವರು ಮನಸ್ಸಿನಲ್ಲಿ ಇಟ್ಟುಕೊಳ್ಳಲಿಲ್ಲ. ನನ್ನ ಎಲ್ಲ ಚುನಾವಣೆಗಳಲ್ಲಿಯೂ ನನಗೆ ಸಹಾಯ ಮಾಡಿದ್ದಾರೆ ಎಂದು ಸ್ಮರಿಸಿದ್ದಾರೆ. ಸಿದ್ದರಾಮಯ್ಯ ನನ್ನನ್ನು ಅತ್ಯಂತ ಹತ್ತಿರದಿಂದ `ಬಿಸಿ'''''''' ಎಂದೇ ಕರೆಯುತ್ತಿದ್ದರು. 2013ರಲ್ಲಿ ನಾನು ಚುನಾವಣೆಯಲ್ಲಿ ಸೋತಾಗ ನನ್ನ ಕ್ಷೇತ್ರಕ್ಕೆ ನಾಲ್ಕು ನೀರಾವರಿ ಯೋಜನೆಗಳನ್ನು ನೀಡಿದ್ದಾರೆ. ಅದನ್ನು ನಾನು ಎಂದಿಗೂ ಮರೆಯುವುದಿಲ್ಲ. ನನ್ನ ಕ್ಷೇತ್ರದ ಜನರೂ ಅದನ್ನು ಮರೆಯುವುದಿಲ್ಲ ಎಂದು ಹೇಳಿದ್ದಾರೆ.ಸಿದ್ದರಾಮಯ್ಯ ಅವರ ಗತ್ತು ಮತ್ತು ಗಾಂಭೀರ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಗೌರವ ತಂದುಕೊಟ್ಟಿತ್ತು. ಅಧಿಕಾರ ಶಾಶ್ವತವಲ್ಲ. ಆದರೆ ಅವರು ಅಧಿಕಾರ ಬಿಟ್ಟು ಇಳಿದಾಗ ನನಗೆ ತುಂಬಾ ನೋವಾಗಿದೆ ಎಂದಿದ್ದಾರೆ.ಅವರು ಮುಖ್ಯಮಂತ್ರಿಯಾದ ನಂತರ 2023ರ ಬಳಿಕ ಅವರನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಆದರೆ ದೆಹಲಿಯಲ್ಲಿ ಒಂದು ಬಾರಿ ಭೇಟಿಯಾದಾಗ ಅತ್ಯಂತ ಪ್ರೀತಿ ಮತ್ತು ವಿಶ್ವಾಸದಿಂದ ಮಾತನಾಡಿ ನನ್ನ ಬೆನ್ನು ತಟ್ಟಿದ್ದರು ಎಂದು ಭಾವುಕರಾಗಿ ಸ್ಮರಿಸಿದ್ದಾರೆ.ಸಿದ್ದರಾಮಯ್ಯ ಅವರನ್ನು ಇತಿಹಾಸಕಾರ, ಅರ್ಥಶಾಸ್ತ್ರಜ್ಞ, ಚಾಣಾಕ್ಷ ರಾಜಕಾರಣಿ, ಹೃದಯವಂತ ವ್ಯಕ್ತಿ ಹಾಗೂ ನೇರ-ನಿಷ್ಠುರ ನುಡಿಗೆ ಹೆಸರಾದ ನಾಯಕ ಎಂದು ಬಣ್ಣಿಸಿರುವ ಬಿ.ಸಿ. ಪಾಟೀಲ, ಮುಂದಿನ ದಿನಗಳಲ್ಲಿ ಭಗವಂತ ಅವರಿಗೆ ಆಯುರಾರೋಗ್ಯ ಭಾಗ್ಯ ನೀಡಲಿ. ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಿ ಯುವಕರಿಗೆ ಮಾರ್ಗದರ್ಶನ ನೀಡಲಿ ಎಂದು ಹಾರೈಸಿದ್ದಾರೆ.